ಶ್ರೀಗುರು ಮುದುಕೇಶ್ವರ ಪ್ರೌಢಶಾಲೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಹೇಳಿಕೆ
ಸಿರಿಗೆರೆಯ ಲಿಂ. ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯವರ 35ನೇ ಶ್ರದ್ಧಾಂಜಲಿ ಸಮಾರಂಭದ ನಿಮಿತ್ತ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ 254 ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಪ್ರಾದೇಶಿಕ ಹಂತದ ಸಾಂಸ್ಕೃತಿಕ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಎಂದು ಕಲಕೇರಿ ಶ್ರೀಗುರು ಮುದುಕೇಶ್ವರ ಪ್ರೌಢಶಾಲೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಸ್.ಎಸ್. ಪಾಟೀಲ ತಿಳಿಸಿದರು.
ಪಟ್ಟಣದ ಪಿಎಲ್ಡಿ ಬ್ಯಾಂಕ್ನಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಪ್ರಾದೇಶಿಕ ಹಂತದಲ್ಲೇ ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ ನಂತರ ರಾಜ್ಯಮಟ್ಟದ ವೇದಿಕೆ ಕಲ್ಪಿಸಿಕೊಡುವ ಸದುದ್ದೇಶದಿಂದ ಈ ಸಾಂಸ್ಕೃತಿಕ ಸ್ಪರ್ಧೆಗಳನ್ನು ರೂಪಿಸಲಾಗಿದೆ ಎಂದರು.ಗದಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಸೆ. 10 ರಂದು ಬೆಳಗ್ಗೆ 10 ಗಂಟೆಗೆ ಕಲಕೇರಿ ಗ್ರಾಮದ ಶ್ರೀಗುರು ಮುದುಕೇಶ್ವರ ಪ್ರೌಢಶಾಲೆಯಲ್ಲಿ ಸ್ಪರ್ಧೆಗಳು ಜರುಗಲಿವೆ. ಕಲಕೇರಿ, ವಿರೂಪಾಪುರ ಗುರುಮುದುಕೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸುವರು. ಶಾಸಕ ಡಾ. ಚಂದ್ರು ಲಮಾಣಿ ಉದ್ಘಾಟಿಸಲಿದ್ದು, ಎಸ್.ಎಸ್. ಪಾಟೀಲ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ತಾಪಂ ಇಒ ವಿಜಯಕುಮಾರ ಬೆಣ್ಣಿ, ಬಿಇಒ ಗಂಗಾಧರ ಅಣ್ಣಿಗೇರಿ, ಸಂಸ್ಥೆಯ ಪ್ರಾದೇಶಿಕಾಧಿಕಾರಿ ಬಸವರಾಜ ಸಿ.ಎಸ್. ಪಾಲ್ಗೊಳ್ಳುವರು. ನಿವೃತ್ತ ಕೆಸಿಸಿ ಬ್ಯಾಂಕ್ ಅಧಿಕಾರಿ ಎಸ್.ವಿ. ಪಾಟೀಲ ಉಪನ್ಯಾಸ ನೀಡಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಂಜುನಾಥ ಬನ್ನಿಕೊಪ್ಪ, ತಿಪ್ಪೇಶ ನಾಯಕ, ಎಸ್.ವಿ. ಪಾಟೀಲ, ಎಂ.ಬಿ. ಪಾಟೀಲ ಮತ್ತಿತರರಿದ್ದರು.