ತುಮಕೂರು, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಗಳ ಜನಪ್ರತಿನಿಧಿಗಳು ಭಾಗಿಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಈ ಸಂಬಂಧ ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಪೂರ್ವ ಸಿದ್ಧತಾ ಸಭೆ ನಡೆಸಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಸಂವಾದ ಸಭೆಯನ್ನು ವ್ಯವಸ್ಥಿತವಾಗಿ ಕೈಗೊಳ್ಳಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ತಾಕೀತು ಮಾಡಿದರು.
ಚಿತ್ರದುರ್ಗ ಜಿಲ್ಲೆಯವರೇ ಆದ ಡಾ.ಡಿ.ಎಂ.ನಂಜುಂಡಪ್ಪ ವರದಿಗೆ ಸುಮಾರು 22 ವರ್ಷಗಳಷ್ಟು ಹಳೆಯದಾಗಿದ್ದು, ಆ ಸಂದರ್ಭದಲ್ಲಿ ಇದ್ದಂತಹ 175 ತಾಲೂಕುಗಳ ಸಂಖ್ಯೆ ಈಗ 240ಕ್ಕೆ ಹೆಚ್ಚಳ ಆಗಿದೆ. ಕಳೆದ 2023ರ ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿಗಳು ಘೋಷಿಸಿದಂತೆ, ಡಾ.ಡಿ.ಎಂ.ನಂಜುಂಡಪ್ಪ ವರದಿಯ ಅನುಷ್ಠಾನದಿಂದ ಅಭಿವೃದ್ಧಿ ಸಾಧ್ಯೆತೆಗಳ ಅವಲೋಕಿಸಬೇಕು. ಹಾಗೊಂದು ವೇಳೆ ಅಭಿವೃದ್ಧಿ ಹೊಂದದಿರುವ ಬಗ್ಗೆ ಹೊಸದಾಗಿ ಸೂಚ್ಯಂಕ ಕಂಡು ಹಿಡಿದು ಪ್ರಾದೇಶಿಕ ಅಸಮತೋಲನ ನಿವಾರಣೆ ಮಾಡುವ ಆಲೋಚನೆ ನಡೆಸಲಾಗಿತ್ತು. ಆರ್ಥಿಕ ತಜ್ಞ ಪ್ರೊ.ಎಂ.ಗೋವಿಂದರಾವ್ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ರಚಿಸಲಾಗಿತ್ತು ಎಂದರು.ಸಮಿತಿ ಕೈಗೊಂಡ ತೀರ್ಮಾನದಂತೆ ಜಿಲ್ಲಾ ಹಂತದಲ್ಲಿ ಕ್ಷೇತ್ರ ಭೇಟಿಗಳನ್ನು ಹಮ್ಮಿಕೊಂಡು ಪ್ರಾಥಮಿಕ ಮಾಹಿತಿ ಕಲೆ ಹಾಕಲು ಸಭೆಗಳನ್ನು ಏರ್ಪಡಿಸಿ, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು, ಉದ್ದಿಮೆದಾರರು, ವರ್ತಕರು ಮತ್ತು ಸಾರ್ವಜನಿಕರಿಂದ ಮನವಿ ಆಲಿಸಿ, ಅಭಿಪ್ರಾಯ ಹಾಗೂ ಸಲಹೆಗಳನ್ನು ಪಡೆಯಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಬೆಂಗಳೂರು ವಿಭಾಗದಲ್ಲಿ ಬರುವ ತುಮಕೂರು, ದಾವಣಗೆರೆ, ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಮಾಹಿತಿ ಪಡೆಯಲು ಸಂವಾದ ಸಭೆಯನ್ನು ಏ.28 ರಂದು ಚಿತ್ರದುರ್ಗದಲ್ಲಿ ನಡೆಯಲಿದೆ.
ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರ ಇಲಾಖೆಗೆ ಸಂಬಂಧಿಸಿದ ಕಾರ್ಯಕ್ರಮ ಇದಾಗಿದೆ. ಎಲ್ಲ ಜನಪ್ರತಿನಿಧಿಗಳು, ಉನ್ನತ ಅಧಿಕಾರಿಗಳು, ಸಂಘ ಸಂಸ್ಥೆಗಳನ್ನು ಜಿಲ್ಲೆಗೆ ಗೌರವಯುತವಾಗಿ ಬರಮಾಡಿಕೊಂಡು, ಅವರಿಗೆ ಉತ್ತಮ ವ್ಯವಸ್ಥೆ ಕಲ್ಪಿಸಿಕೊಡಬೇಕಿದೆ. ಈ ನಿಟ್ಟಿನಲ್ಲಿ ಪ್ರತಿ ಜಿಲ್ಲೆಗೂ ಪ್ರತ್ಯೇಕವಾಗಿ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗುವುದು. ಈ ಅಧಿಕಾರಿಗಳು ಆಯಾ ಜಿಲ್ಲೆಯ ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಿಕೊಂಡು, ಜನಪ್ರತಿನಿಧಿಗಳು, ಉನ್ನತ ಅಧಿಕಾರಿಗಳು, ಸಂಘ ಸಂಸ್ಥೆಗಳ ಬರುವಿಕೆ ಬಗ್ಗೆ ಮಾಹಿತಿ ಸಂಗ್ರಹಿಸಬೇಕು, ಹಾಗೂ ಅವರ ವಾಸ್ತವ್ಯಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಬೇಕು. ಯಾವುದೇ ಕೊರತೆ ಆಗದ ರೀತಿ ಸಿದ್ಧತೆ ಮಾಡಿಕೊಳ್ಳಬೇಕು, ಶಿಷ್ಟಾಚಾರ ಪಾಲನೆಯಲ್ಲಿ ಯಾವುದೇ ಲೋಪದೋಷಗಳು ಆಗಬಾರದು ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಸಿಇಒ ಎಸ್.ಜೆ ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ ಕುಮಾರಸ್ವಾಮಿ, ಜಿಪಂ ಮುಖ್ಯ ಯೋಜನಾಧಿಕಾರಿ ಗಾಯತ್ರಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಚೇಂಬರ್ ಆಫ್ ಕಾಮರ್ಸ್ನ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.