ಕನ್ನಡಪ್ರಭ ವಾರ್ತೆ ಯಾದಗಿರಿ
ನಗರಸಭೆಯ ಕಂದಾಯ ನಿರೀಕ್ಷಕ ಮಾನಪ್ಪ ಬಡಿಗೇರ್, ಪ್ರಭಾರಿ ಮೈನೋದ್ದೀನ್ ಮೊಹ್ಮದ್ ಹಜರತ್ ಹಾಗೂ ಶಹಾಪುರ ನಗರಸಭೆಯಲ್ಲಿ ನೀರು ಸರಬರಾಜು ವಿಭಾಗದ ಮೇಲ್ವಿಚಾರಕರಾಗಿರುವ ಹಣಮಂತಪ್ಪ ಆಶನಾಳ ಎಂಬುವವರನ್ನು ಬಂಧಿಸಲಾಗಿದೆ.
ಘಟನೆ ವಿವರ :ಯಾದಗಿರಿ ಸೀಮಾಂತರದ ಸರ್ವೆ ನಂ. 151 ರಲ್ಲಿನ ನಿವೇಶನ ಸಂಖ್ಯೆ 42ನ್ನು ಮಲ್ಲಮ್ಮ ರಾಮಣ್ಣ ಎಂಬುವವರ ಹೆಸರಿಗೆ ಮಾಡಿಕೊಟ್ಟಿದ್ದ ಈ ಮೂವರು, ರಜೆ ದಿನವಾದ ಭಾನುವಾರ ಸಂಜೆ 4ರ ಸುಮಾರಿಗೆ ನಗರಸಭೆ ಕಚೇರಿಗೆ ಬಂದು, ಅಲ್ಲಿದ್ದ ಕಾವಲುಗಾರ ತಿಪ್ಪಣ್ಣ ಎಂಬುವವನಿಗೆ ಬೆದರಿಸಿ ಕಚೇರಿ ಬೀಗ ತೆಗೆದುಕೊಂಡು ಕೋಣೆಗಳಿಗೆ ಹೋಗಿ ಹಲವಾರು ಕಡತಗಳನ್ನು ಪರಿಶೀಲಿಸಿ ಅಕ್ರಮ ಎಸಗಿದ್ದು ಸಿಸಿಟಿವಿ ಮೂಲಕ ಕಂಡು ಬಂದಿದೆ ಮತ್ತು ಈ ವೇಳೆ ಓರ್ವ ಸಾರ್ವಜನಿಕ ವ್ಯಕ್ತಿ ಅಲ್ಲಿರುವುದು ಕಾಣಿಸಿದೆ ಎಂದು ನಗರಸಭೆ ಪೌರಾಯುಕ್ತ ಉಮೇಶ ಚವ್ಹಾಣ, ನಗರ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ ಹೇಳಿದ್ದಾರೆ.
ಆ ರೀತಿಯಾಗಿ ಸರ್ಕಾರಕ್ಕೂ ಮತ್ತು ಇಲಾಖೆಗೂ ಮೋಸ ಮಾಡಿರುವ ಇವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಆಶ್ರಯ ಯೋಜನೆ ನಿವೇಶನಗಳಿಗೆ ಸುಳ್ಳು ದಾಖಲೆ ಸೃಷ್ಟಿ :ಯಾದಗಿರಿ ನಗರದ ಯಾದಗಿರಿ (ಅ) ಸರ್ವೆ ನಂ. 151 ರಲ್ಲಿಯ ಆಶ್ರಯ ಯೋಜನೆಯ ನಿವೇಶನಗಳಿಗೆ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಮಾರಾಟ ಮಾಡಿರುವ ಪ್ರಕರಣ ಆರೋಪ ಈ ಮೂವರ ಮೇಲಿದೆ. ಇದರ ದೂರಿಗೆ ಸಂಬಂಧಿಸಿದಂತೆ ಜಂಟಿ ತನಿಖೆ ಕೈಗೊಂಡು ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಆದೇಶದ ಮೇರೆಗೆ ಒಂದು ತಂಡ ರಚಿಸಲಾಗಿತ್ತು.
ಇದರಂತೆ, ತಂಡ ಸಲ್ಲಿಸಿದ ಸದರಿ ವರದಿಯಲ್ಲಿ ಸರ್ವೆ ನಂ. 151/1 ರ ಆಶ್ರಯ ಲೇಔಟ್ನಲ್ಲಿರುವ ಒಟ್ಟು 96 ನಿವೇಶನಗಳಲ್ಲಿ ಆಶ್ರಯ ನಿವೇಶನ ಹಂಚಿಕೆ ಪುಸ್ತಕ ಪರಿಶೀಲಿಸಿದಾಗ, ಒಟ್ಟು 45 ನಿವೇಶನಗಳನ್ನು ಹಂಚಿಕೆ ಮಾಡಲಾಗಿರುತ್ತದೆ. ಉಳಿದ ಒಟ್ಟು 51 ನಿವೇಶನಗಳನ್ನು ನಗರಸಭೆಯಿಂದ ಹಂಚಿಕೆ ಮಾಡದಿರುವುದು ಕಂಡು ಬಂದಿರುತ್ತದೆ ಎಂದು ವರದಿಯಲ್ಲಿ ತಿಳಿಸಿರುತ್ತಾರೆ . ಆದರೂ ಸಹ, ಕೆಲವೊಂದು ನಿವೇಶನಗಳಿಗೆ ಇ-ಆಸ್ತಿ ತಂತ್ರಾಂಶದ ಮೂಲಕ ನಮೂನೆ-3 ನೀಡಿರುವುದು ಕಂಡು ಬಂದಿರುತ್ತದೆ.ಆದರೆ, ಸದರಿ ಕಡತಗಳನ್ನು ತನಿಖೆಗೆ ಹಾಜರುಪಡಿಸಿರುವುದಿಲ್ಲ ಎಂದು ತಿಳಿಸಿರುತ್ತಾರೆ. ಪ್ರಯುಕ್ತ ಸರ್ವೆ ನಂ. 151/1 ರ ಆಶ್ರಯ ಲೇಔಟ್ನಲ್ಲಿನ ಮೂಲ ಫಲಾನುಭವಿಗಳ ದಾಖಲಾತಿಗಳೊಂದಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿ, ಮೂಲ ಫಲಾನುಭವಿಗಳು ಅಥವಾ ಅನಧಿಕೃತ ಫಲಾನುಭವಿಗಳು ಇರುವ ಕುರಿತು ಸಮಗ್ರ ವರದಿಯನ್ನು ತಯಾರಿಸಿ ಸಲ್ಲಿಸುವುದು ಹಾಗೂ ಹಂಚಿಕೆಯಾಗದ ಕೆಲವೊಂದು ನಿವೇಶನಗಳಿಗೆ ಯಾವ ಆಧಾರದ ಮೇಲೆ ನಮೂನೆ-3 ಮತ್ತು ಪಿ.ಐ.ಡಿ. ಸಂಖ್ಯೆ ನೀಡಲಾಗಿರುತ್ತದೆ ಎಂಬುದರ ಕುರಿತು ಸಂಪೂರ್ಣ ವರದಿಯನ್ನು ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಲು ಸೂಚಿಸಲಾಗಿತ್ತು. ಇದರನ್ವಯ, ಪೌರಾಯುಕ್ತರು ವರದಿ ಸಲ್ಲಿಸಿ ದೂರು ದಾಖಲಿಸಿದ್ದಾರೆ.