ಕನ್ನಡಪ್ರಭ ವಾರ್ತೆ ರಾಯಚೂರುಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಬೇಕು ಹಾಗೂ ಅತಿಥಿ ಉಪನ್ಯಾಸಕ ಸಮಸ್ಯೆ ಪರಿಹರಿಸಬೇಕು ಎಂದು ಆಗ್ರಹಿಸಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕ ಸಂಘದ ಜಿಲ್ಲಾ ಸಮಿತಿಯಿಂದ ಮಾನವ ಸರಪಳಿ ನಿರ್ಮಿಸಿ, ಪ್ರತಿಭಟನಾ ರ್ಯಾಲಿ ಶನಿವಾರ ನಡೆಸಲಾಯಿತು.
ಸ್ಥಳೀಯ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸೇರಿದ ಸಂಘದ ಪದಾಧಿಕಾರಿಗಳು, ಸದಸ್ಯರು ಮಾನವ ಸರಪಳಿ ನಿರ್ಮಿಸಿ ಬೇಡಿಕೆ ಈಡೇರಿಸಬೇಕು ಎಂದು ಘೋಷಣೆ ಕೂಗಿದರು. ಮಾನವ ಸರಪಳಿಯಿಂದಾಗಿ ವೃತ್ತದಲ್ಲಿ ಕೆಲಕಾಲ ಸಂಚಾರಕ್ಕೆ ಸಮಸ್ಯೆ ಉಂಟಾಯಿತು. ನಂತರ ಮುಖ್ಯ ರಸ್ತೆ ಮುಖಾಂತರ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ರ್ಯಾಲಿ ನಡೆಸಿ ಜಿಲ್ಲಾಡಳಿತದ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಸೇವೆ ಕಾಯಂಗೊಳಿಸಲು ಒತ್ತಾಯಿಸಿ ಕಳೆದ ನ.23 ರಿಂದ ತರಗತಿ ಬಹಿಷ್ಕರಿಸಿ ಅನಿರ್ದಿಷ್ಟ ಧರಣಿ ನಡೆಸುತ್ತಿದ್ದು, ಕಳೆದ ಡಿ.1ಕ್ಕೆ ಉನ್ನತ ಶಿಕ್ಷಣ ಸಚಿವರು ಬೆಂಗಳೂರಿನ ಉನ್ನತ ಶಿಕ್ಷಣ ಪರಿಷತ್ ಸಭಾಂಗಣದಲ್ಲಿ ಹಾಗೂ ಡಿ.7ರಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ಸಭೆಯಲ್ಲಿ ಅತಿಥಿ ಉಪನ್ಯಾಸಕರ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸಿ ಬೇಡಿಕೆ ಈಡೇರಿಸಲಾಗುವುದು ಎಂದು ಭರವಸೆ ನೀಡಿದರೂ ಇದುವರೆಗೆ ಸ್ಪಂದನೆ ನೀಡದೇ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ರಾಜ್ಯದ ಎಲ್ಲಾ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 11,500 ರಾಯಚೂರು ಜಿಲ್ಲೆಯ 13 ಕಾಲೇಜುಗಳಲ್ಲಿ 374 ಅತಿಥಿ ಉಪನ್ಯಸಕರು ಬಹುತೇಕರು 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರೂ ಕಾಯಂ ಮಾಡದೇ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಕಡಿಮೆ ವೇತನದಿಂದ ಜೀವನ ನಡೆಸಲು ಸಮಸ್ಯೆಯಾಗಿದೆ. ಸಾಮಾಜಿಕ, ಆರ್ಥಿಕ ಅಭಿವೃದ್ಧಿಗೆ ಕಾಯಂಗೊಳಿಸಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಕಾಂಗ್ರೆಸ್ ಪಕ್ಷವು ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಬೇಕು ಹಾಗೂ ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಕೂಡಲೇ ಪರಿಹರಿಸಬೇಕು ಎಂದು ಆಗ್ರಹಿಸಿದರು.ನಿಯಮದಲ್ಲಿ ಉಲ್ಲೇಖಿಸಿರುವಂತೆ ಪ್ರತಿ ತಿಂಗಳ 10 ನೇ ತಾರೀಖಿನೊಳಗಾಗಿ ಅತಿಥಿ ಉಪನ್ಯಾಸಕರ ವೇತನ ಬಿಡುಗಡೆಗೊಳಿಸಬೇಕು, ಆತ್ಮಹತ್ಯೆ ಮಾಡಿಕೊಂಡ ಅತಿಥಿ ಉಪನ್ಯಾಸಕರ ಕುಟುಂಬಗಳಿಗೆ 10 ಲಕ್ಷ ರುಪಾಯಿಗಳ ಪರಿಹಾರ ನೀಡಬೇಕು, ಅವರ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು.
ಸಂಘದ ಜಿಲ್ಲಾಧ್ಯಕ್ಷ ಡಾ.ಶ್ರೀನಿವಾಸ ಹೊಸಪೇಟೆ, ಪ್ರಧಾನ ಕಾರ್ಯದರ್ಶಿ ಡಾ.ಹನುಮಂತ ಎನ್.ಕುರಡಿ,ಪದಾಧಿಕಾರಿ ಈರಣ್ಣ ಗಟ್ಟುಬಿಚ್ಚಾಲಿ, ಶರಣ ಬಸವ,ವಿಶ್ವನಾಥ ಪಾಟೀಲ್, ಮಹಾದೇವಪ್ಪ, ಸುರೇಶ ಬಳಗಾನೂರು, ಚಂದ್ರಶೇಖರ ಅಕ್ಕರಿಕಿ, ಮಹಾದೇವಿ, ಶಾಹೀನ್ ಬೇಗಂ,ಜೊಹರಾ ಜುಬೇನ್,ಎಂ.ಡಿ ರಿಯಾಜ್,ವೀರೇಶ,ಸಿದ್ಧಯ್ಯ ಎಂ,ಗುಂಡಪ್ಪ ಪುಷ್ಪಾವತಿ, ಡಾ.ಅರ್ಚನಾ,ಡಾ.ಶರಣಪ್ಪ, ನಲ್ಲಾರೆಡ್ಡಿ ಸೇರಿ ಇತರರು ಇದ್ದರು.