ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೇಮಾವತಿ ಜಲಾಶಯ ಯೋಜನೆ ವ್ಯಾಪ್ತಿ ಕೆರೆಕಟ್ಟೆಗಳಲ್ಲಿ ನೀರಿಲ್ಲದೆ ಬರಿದಾಗಿದೆ. ಜನ ಜಾನುವಾರುಗಳು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ಇನ್ನೊಂದು ವಾರದೊಳಗೆ ನೀರು ಹರಿಸಿ ಕೃಷ್ಣರಾಜಪೇಟೆ, ಪಾಂಡವಪುರ, ಚನ್ನರಾಯಪಟ್ಟಣ ಹಾಗೂ ನಾಗಮಂಗಲ ತಾಲೂಕು ವ್ಯಾಪ್ತಿಯ ಕೆರೆಕಟ್ಟೆಗಳನ್ನು ತುಂಬಿಸಲು ನೀರಾವರಿ ಇಲಾಖೆ ಅಧಿಕಾರಿಗಳು ಮುಂದಾಗದಿದ್ದರೆ ಜಲಾಶಯಕ್ಕೆ ಮುತ್ತಿಗೆ ಹಾಕಿ ಉಗ್ರ ಹೋರಾಟ ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು.
ರೈತರ ಜೀವನದೊಂದಿಗೆ ರಾಜ್ಯ ಸರ್ಕಾರ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳು ಚೆಲ್ಲಾಟವಾಡುತ್ತಿದ್ದಾರೆ. ನೀರಾವರಿ ಸಚಿವ ರಾಮಲಿಂಗಾರೆಡ್ಡಿಯವರಿಗೆ ರೈತರ ಕಷ್ಟಗಳು ಗೊತ್ತಿಲ್ಲ. ಕೆಆರ್ಎಸ್ ಜಲಾಶಯದಿಂದ ವಿಶ್ವೇಶ್ವರಯ್ಯ ನಾಲೆಗೆ ನೀರು ಬಿಡಿಸಿರುವ ಸರ್ಕಾರ ಹೇಮಾವತಿ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸುವಂತೆ ಆದೇಶ ನೀಡದೆ ನಿರ್ಲಕ್ಷ್ಯ ತಾಳಿದ್ದಾರೆ ಎಂದು ದೂರಿದರು.ಹೇಮಾವತಿ ಜಲಾಶಯ ಯೋಜನಾ ವ್ಯಾಪ್ತಿಯ ನೀರಾವರಿ ಸಲಹಾ ಸಮಿತಿ ಸಭೆ ನಡೆಸದೆ ಕಣ್ಮುಚ್ಚಿ ಕುಳಿತಿರುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಜನಜಾನುವಾರುಗಳು ಕುಡಿಯಲು ಅನುಕೂಲ ಕಲ್ಪಿಸಿಲ್ಲ ಎಂದು ಕಿಡಿಕಾರಿದರು.
ಒಂದು ವಾರ ಕಾಲಾವಕಾಶ ನೀಡುತ್ತೇನೆ. ಅಷ್ಟರೊಳಗೆ ನಾಲೆಗಳಿಗೆ ನೀರು ಹರಿಸಿ ಕೆರೆ ಕಟ್ಟೆಗಳನ್ನು ತುಂಬಿಸದಿದ್ದರೆ ಮುಂದಾಗಲಿರುವ ಅನಾಹುತಕ್ಕೆ ರಾಜ್ಯ ಸರ್ಕಾರವನ್ನೇ ಹೊಣೆಗಾರರನ್ನಾಗಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.