ಬೆಳಗಾವಿ-ಬಾಚಿ ರಸ್ತೆಯ ಗುಂಡಿಗಳಿಗೆ ಮುಕ್ತಿ

KannadaprabhaNewsNetwork |  
Published : Sep 30, 2024, 01:25 AM IST
ಬೆಳಗಾವಿ- ಬಾಜಿ ರಸ್ತೆ ಗುಂಡಿ ಮುಚ್ಚುವ ಕಾರ್ಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಚಾಲನೆ ನೀಡಿದರು | Kannada Prabha

ಸಾರಾಂಶ

ಮಳೆಯಿಂದಾಗಿ ತೀವ್ರವಾಗಿ ಹದಗೆಟ್ಟಿರುವ ಬೆಳಗಾವಿ-ಬಾಚಿ ರಸ್ತೆಯ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಭಾನುವಾರ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಮಳೆಯಿಂದಾಗಿ ತೀವ್ರವಾಗಿ ಹದಗೆಟ್ಟಿರುವ ಬೆಳಗಾವಿ-ಬಾಚಿ ರಸ್ತೆಯ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಭಾನುವಾರ ಚಾಲನೆ ನೀಡಿದರು.

ನಗರದ ಮಹಾತ್ಮ ಗಾಂಧಿ ವೃತ್ತದಿಂದ ಕುದ್ರೆಮನಿ ಗ್ರಾಮದವರೆಗಿನ ರಸ್ತೆ ಮಳೆಯಿಂದಾಗಿ ಸಂಪೂರ್ಣ ಹಾಳಾಗಿದೆ. ವಾಹನ ಸಂಚಾರಕ್ಕೆ ತೀವ್ರ ತೊಂದರೆ ಆಗಿತ್ತು. ಗ್ರಾಮಸ್ಥರು ರಸ್ತೆ ದುರಸ್ತಿ ಮಾಡುವಂತೆ ಆಗ್ರಹಿಸಿ ರಸ್ತೆಯಲ್ಲಿ ಬಿದ್ದಿದ್ದ ಗುಂಡಿಗಳಲ್ಲಿ ಸಸಿನೆಟ್ಟು ಪ್ರತಿಭಟಿಸಿದ್ದರು. ಸುಮಾರು 15 ದಿನದ ಹಿಂದೆ ಈ ರಸ್ತೆಯ ದುಸ್ಥಿತಿ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದರು.

ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ರಾತ್ರೋರಾತ್ರಿ ಸ್ಥಳ ಪರಿಶೀಲನೆ ನಡೆಸಿ, ತುರ್ತಾಗಿ ಗುಂಡಿಗಳನ್ನು ಮುಚ್ಚುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಆದೇಶಿಸಿದ್ದರು. ನಿತ್ಯ ಸಾವಿರಾರು ವಾಹನಗಳು, ಸಾರ್ವಜನಿಕರು ಓಡಾಡುವ, ಹಿಂಡಲಗಾ-ಸುಳಗಾ-ತುರಮರಿ-ಬಾಚಿ ಮುಂತಾದ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದೆ.

ಭಾನುವಾರ ಸ್ವತಃ ಸ್ಥಳಕ್ಕೆ ಆಗಮಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿದರು. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಕೂಡ ಆಗಮಿಸಿದ್ದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸಹ ಸಚಿವರಿಗೆ ಸಾಥ್ ನೀಡಿದರು.

ವಾಹನ ಸಂಚಾರ ಸಾಧ್ಯವೇ ಇಲ್ಲ ಎನ್ನುವಷ್ಟರ ಮಟ್ಟಿಗೆ ರಸ್ತೆ ಹಾಳಾಗಿದೆ. ಹಾಗಾಗಿ ಒಂದೇ ಒಂದು ಗುಂಡಿ ಕೂಡ ಉಳಿಯದಂತೆ ಮುಚ್ಚಬೇಕು. ಗುಣಮಟ್ಟ ಕಾಯ್ದುಕೊಂಡು, ಸಮಯ ಮಿತಿಯಲ್ಲಿ ಕೆಲಸ ಮಾಡಬೇಕು. ಸಾರ್ವಜನಿಕರು, ವಾಹನಗಳ ಓಡಾಟಕ್ಕೆ ಯಾವುದೇ ರೀತಿಯ ತೊಂದರೆ ಆಗದಂತೆ ರಸ್ತೆ ದುರಸ್ತಿಯಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ವಿಳಂಬ ಮಾಡದೇ ಕೆಲಸ ಮಾಡಬೇಕು. ಸಾರ್ವಜನಿಕರಿಂದ ಯಾವುದೇ ರೀತಿಯ ದೂರು ಬಾರದಂತೆ ಕೆಲಸ ಪೂರ್ಣಗೊಳಿಸಿ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಆದೇಶಿಸಿದರು.

ಈ ವೇಳೆ ಪಿಡಬ್ಲುಡಿ ಎಕ್ಸಿಕ್ಯೂಟಿವ್ ಎಂಜಿನಿಯರ್ ಸೊಬರದ, ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ ಶಶಿಕಾಂತ ಕೋಳೆಕರ ಹಾಗೂ ಸ್ಥಳೀಯ ನಿವಾಸಿಗಳು ಇದ್ದರು. ಈ ರಸ್ತೆಯ ಪುನರ್ ನಿರ್ಮಾಣಕ್ಕೆ ₹15 ಕೋಟಿ ಅನುದಾನ ಮಂಜೂರು ಮಾಡಿಸಿದ್ದೇನೆ. ಮಳೆಗಾಲ ಮುಗಿದ ತಕ್ಷಣ ಕೆಲಸ ಆರಂಭಿಸಬೇಕು. ಅಲ್ಲಿಯವರೆಗೆ ಜನರಿಗೆ ಅನಾನುಕೂಲವಾಗಬಾರದೆನ್ನುವ ಕಾರಣಕ್ಕೆ ತುರ್ತಾಗಿ ಗುಂಡಿಗಳನ್ನು ಮುಚ್ಚಬೇಕು.

- ಲಕ್ಷ್ಮೀ ಹೆಬ್ಬಾಳಕರ ಸಚಿವೆ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ