ಧರ್ಮ ಉಳಿಯಬೇಕು. ಧಾರ್ಮಿಕ ಕ್ಷೇತ್ರಗಳ ರಕ್ಷಣೆಯಾಗಬೇಕು ಎಂದು ಶ್ರೀ ಸ್ವತಂತ್ರ ಬಸವಲಿಂಗ ಸ್ವಾಮೀಜಿ ಹೇಳಿದರು.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಧರ್ಮ ಉಳಿಯಬೇಕು, ಧಾರ್ಮಿಕ ಕ್ಷೇತ್ರಗಳ ರಕ್ಷಣೆಯಾಗಬೇಕು ಎಂದು ಮುಳ್ಳೂರು ಮಠದ ಶ್ರೀ ಸ್ವತಂತ್ರ ಬಸವಲಿಂಗ ಸ್ವಾಮೀಜಿ ಹೇಳಿದರು.ಸಮೀಪದ ನೇಗಳ್ಳೆ -ಕರ್ಕಳ್ಳಿ ವೀರಭದ್ರ ದೇವಾಲಯ ಸಮಿತಿ, ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ವೀರಭದ್ರೇಶ್ವರ ವರ್ಧಂತಿ ಮಹೋತ್ಸವದ ಅಂಗವಾಗಿ ದೇವಾಲಯದಲ್ಲಿ ಬುಧವಾರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು.ಸನಾತನ ಹಿಂದೂ ಧರ್ಮ ಉತ್ತಮ ಸಂಸ್ಕೃತಿಯನ್ನು ಹೊಂದಿದೆ. ಬಹಳ ಹಿಂದಿನಿಂದಲೂ ನಮ್ಮ ಧರ್ಮದ ಮೇಲೆ ದಬ್ಬಾಳಿಕೆ ನಡೆಯುತ್ತಲೇ ಬಂದಿದೆ. ಇಂದಿಗೂ ನಡೆಯುತ್ತಲಿದೆ, ಆದರೆ ನಾವುಗಳು ಯಾವುದಕ್ಕೂ ಜಗ್ಗದೇ, ಕುಗ್ಗದೆ ನಮ್ಮ ಧರ್ಮವನ್ನು ಉಳಿಸಿಕೊಳ್ಳುವ ಜವಾಬ್ದಾರಿ ಹಿಂದೂಗಳ ಮೇಲಿದೆ ಎಂದರು.ಈಗಲೂ ನಮ್ಮ ಧಾರ್ಮಿಕ ಕೇಂದ್ರಗಳ ಮೇಲೆ ಪ್ರತ್ಯಕ್ಷ ಹಾಗು ಪರೋಕ್ಷ ದಾಳಿಗಳು, ಅಪಚಾರಗಳು ನಡೆಯುತ್ತಿವೆ ಅವುಗಳನ್ನೆಲ್ಲಾ ಮೀರಿ ಇವತ್ತು ನಮ್ಮ ಧಾರ್ಮಿಕ ಕೇಂದ್ರಗಳನ್ನು ರಕ್ಷಿಸಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ ಎಂದರು.ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ಮಾತನಾಡಿ, ಇಂದು ವೀರಭದ್ರ ಸ್ವಾಮಿ ವರ್ಧಂತಿಯನ್ನು ಹಳ್ಳಿಗಳಲ್ಲಿ, ದೇಶ-ವಿದೇಶಗಳಲ್ಲೂ ಆಚರಿಸುತ್ತಿರುವುದು ವಿಶೇಷವಾಗಿದೆ. ವೀರಭದ್ರ ಜಾಗೃತಿಯ ಸಂಕೇತ ವಾಗಿದೆ ಎಂದರು.ವೇದಿಕೆಯಲ್ಲಿ ತಪೋಕ್ಷೇತ್ರ ಮನೆಹಳ್ಳಿ ಮಠದ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ, ಶಿಡಿಗಳಲೆ ಮಠದ ಶ್ರೀ ಇಮ್ಮಡಿ ಶಿವಲಿಂಗ ಸ್ವಾಮೀಜಿ, ಸೋಮವಾರಪೇಟೆ ವಿರಕ್ತ ಮಠದ ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ, ಕೊಡಗು ಜಿಲ್ಲಾ ವೀರಶೈವ ಲಿಂಗಾಯತ ಜಂಗಮ ಅರ್ಚಕರ ಸಂಘದ ಅಧ್ಯಕ್ಷ ಹಿರೇಮಠ, ಪುರೋಹಿತರಾದ ಶೇಕಯ್ಯ, ವೇದಮೂರ್ತಿ, ದೇವಾಲಯ ಸಮಿತಿ ಉಪಾಧ್ಯಕ್ಷ ಧರ್ಮಪ್ಪ, ಕಾರ್ಯದರ್ಶಿ ರವಿಕುಮಾರ್ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.