ಉಡುಪಿ: ಜಿಲ್ಲೆಯಲ್ಲಿ ಹೆಚ್ಚು ಮಳೆಯಿಂದಾಗಿ ಹಾಳಾದ ರಸ್ತೆಗಳನ್ನು ತ್ವರಿತವಾಗಿ ದುರಸ್ತಿ ಮಾಡಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಸೂಚನೆ ನೀಡಿದರು.
ಶುಕ್ರವಾರ ರಜತಾದ್ರಿಯ ಜಿಪಂ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಹವಾಮಾನ ಇಲಾಖೆಯಿಂದ ಪ್ರತಿದಿನ ನೀಡುವ ಹವಾಮಾನ ಮುನ್ಸೂಚನೆಯ ಮಾಹಿತಿಯನ್ನು ಸಾರ್ವಜನಿಕರಿಗೆ ಹಾಗೂ ವಿಶೇಷವಾಗಿ ಮೀನುಗಾರಿಕೆಗೆ ತೆರಳುವ ಮೀನುಗಾರರುಗಳಿಗೆ ಒದಗಿಸಬೇಕು. ಮೀನುಗಾರರು ಸಮುದ್ರದಲ್ಲಿ ಮೀನುಗಾರಿಕೆ ಚಟುವಟಿಕೆಗಳಿಗೆ ಹೋಗುವಾಗ ಕಡ್ಡಾಯವಾಗಿ ಲೈಫ್ ಜಾಕೆಟ್ ಗಳನ್ನು ಬಳಸುವಂತೆ ಮನವೊಲಿಸಬೇಕು. ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣವಿದ್ದಲ್ಲಿ ಮೀನುಗಾರಿಕೆಗೆ ಹೋಗದಂತೆ ಎಚ್ಚರವಹಿಸಬೇಕು ಎಂದರು.
ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಬಂದರಿನ ವಿಸ್ತರಣೆಗೆ ಯೋಜನೆ ರೂಪಿಸಬೇಕು. ನೂತನ ಹೆಜಮಾಡಿ ಬಂದರಿನಲ್ಲಿ ಮೀನುಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದರು.ಕರಾವಳಿ ಭಾಗಗಳಲ್ಲಿ ಕಡಲಕೊರೆತ ಪ್ರತಿ ವರ್ಷವೂ ಉಂಟಾಗುತ್ತಿದೆ. ಇವುಗಳ ತಡೆಗೆ ಶಾಶ್ವತ ವೈಜ್ಞಾನಿಕ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಮುಂದಾಗಬೇಕು. ಮಳೆಯಿಂದ ಭತ್ತದ ಬೆಳೆ ಹಾಗೂ ತೋಟಗಾರಿಕೆ ಹಾನಿಗಳನ್ನು ನಿಖರವಾಗಿ ಗುರುತಿಸಿ, ರೈತರಿಗೆ ಪರಿಹಾರವನ್ನು ಒದಗಿಸಬೇಕು ಎಂದರು.
ಈಗಾಗಲೇ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕೈಗೊಂಡಿರುವ ಕಾಲುಸಂಕ ನಿರ್ಮಾಣ ಕಾಮಗಾರಿಗಳನ್ನು ಮಳೆ ಕಡಿಮೆಯಾದ ಕೂಡಲೇ ಪುನರಾರಂಭಿಸಿ, ತ್ವರಿತವಾಗಿ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದರು.ಜನರಿಗೆ ಮನೆಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ 9/11 ಎ ದಾಖಲೆಗಳನ್ನು ಪಡೆಯಲು ಕೆಲವು ನಿಯಮಾವಳಿಗಳಿಂದ ತೊಂದರೆ ಉಂಟಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ. ನಿಯಮಾವಳಿಯಲ್ಲಿ ಕೆಲವೊಂದು ವಿನಾಯಿತಿ ನೀಡಿದ್ದಲ್ಲಿ ಸಮಸ್ಯೆಗಳು ಪರಿಹರಿಸಬಹುದಾಗಿದೆ. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕೂಡಲೇ ಕಳುಹಿಸಿ ಎಂದರು.
ಜಲಜೀವನ್ ಮಿಷನ್ ಅಡಿಯಲ್ಲಿ ಗ್ರಾಪಂ ವ್ಯಾಪ್ತಿಯ ಮನೆಮನೆಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ 525 ನಳ ಸಂಪರ್ಕ ಕಾಮಗಾರಿಗಳಲ್ಲಿ 487 ಪೂರ್ಣಗೊಳಿಸಲಾಗಿದೆ. ಪ್ರಗತಿಯಲ್ಲಿರುವ 38 ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದರು.ಸಂಸದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.