ಕನ್ನಡಪ್ರಭ ವಾರ್ತೆ ಮಂಗಳೂರು
ರಾ.ಹೆ -75 ಹಾಗೂ ರಾ.ಹೆ 275ನ್ನು ಸಂಪರ್ಕಿಸುವ ಪೆರಿಯಶಾಂತಿ-ಪೈಚಾರು ರಸ್ತೆಯನ್ನು ಸ್ಪರ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಬೇಕು. ಸದ್ಯ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬರುವಾಗ ಬೆಂಗಳೂರು ಕಡೆಯ ಯಾತ್ರಾರ್ಥಿಗಳು ಶಿರಾಡಿ ಘಾಟಿ ಮೂಲಕ ರಾ.ಹೆ-75 ಹಾಗೂ ಕೇರಳ ಕಡೆಯಿಂದ ಬರುವವರು ರಾ.ಹೆ- 275 ಹೆದ್ದಾರಿಯನ್ನು ದಾಟಿ ಬರಬೇಕು. ಹೀಗಿರುವಾಗ ರಾ.ಹೆ-75 ಮತ್ತು ರಾ.ಹೆ 275 ಸಂಪರ್ಕಿಸುವ ಪೆರಿಯಶಾಂತಿ-ಪೈಚಾರು ರಸ್ತೆಯನ್ನು ಸ್ಪರ್ ರಸ್ತೆಯಾಗಿ ಮೇಲ್ದರ್ಜೆಗೇರಿಸುವುದರಿಂದ ಭಕ್ತರು-ಪ್ರವಾಸಿಗರಿಗೆ ಕುಕ್ಕೆ-ಧರ್ಮಸ್ಥಳಕ್ಕೆ ಬರುವುದಕ್ಕೆ ನೇರ ಸಂಪರ್ಕ ರಸ್ತೆಯಾಗಲಿದೆ ಎಂದು ಕ್ಯಾ. ಚೌಟ ಸಚಿವ ಗಡ್ಕರಿಗೆ ಮನವರಿಕೆ ಮಾಡಿದ್ದಾರೆ.
ಇನ್ನೊಂದೆಡೆ ರಾ.ಹೆ-73 ಹಾಗೂ ರಾ.ಹೆ 169 ಹೆದ್ದಾರಿಯನ್ನು ಸಂಪರ್ಕಿಸುವಲ್ಲಿ ಬೆಳ್ತಂಗಡಿಯ ಗುರುವಾಯನಕೆರೆ-ಬಜಗೋಳಿ ರಸ್ತೆಯನ್ನು ಸ್ಪರ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಬೇಕು. ಈ ಹೊಸ ರಸ್ತೆ ನಿರ್ಮಿಸುವುದರಿಂದ ಧರ್ಮಸ್ಥಳ ಕ್ಷೇತ್ರ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರಕ್ಕೆ ಬಂದು ಹೋಗುವ ಯಾತ್ರಾರ್ಥಿಗಳಿಗೆ ಪ್ರಯಾಣ ಅವಧಿ ಕಡಿಮೆಗೊಳಿಸುವ ಜತೆಗೆ ಪ್ರವಾಸೋದ್ಯಮದ ಅಭಿವೃದ್ಧಿಗೂ ಹೆಚ್ಚಿನ ಉತ್ತೇಜನ ದೊರೆಯಲಿದೆ. ಜತೆಗೆ ಈ ಮಾರ್ಗದಲ್ಲಿ ಹಾಲಿ ಇರುವ ಹೆದ್ದಾರಿಗಳಲ್ಲಿನ ವಾಹನಗಳ ದಟ್ಟಣೆ ಕಡಿಮೆ ಮಾಡುವುದಕ್ಕೂ ಸಹಕಾರಿಯಾಗಲಿದೆ. ಈ ಹಿನ್ನೆಲೆಯಲ್ಲಿ ಗುರುವಾಯನಕೆರೆ-ಬಜಗೋಳಿ ಸ್ಪರ್ ರಸ್ತೆ ನಿರ್ಮಾಣ ಯೋಜನೆಯ ಬಗ್ಗೆಯೂ ಪರಿಶೀಲನೆ ನಡೆಸಿ ಮಂಜೂರಾತಿ ನೀಡುವಂತೆ ಕ್ಯಾ. ಚೌಟ ಅವರು ಇದೇ ವೇಳೆ ಸಚಿವ ಗಡ್ಕರಿ ಅವರಲ್ಲಿ ಕೋರಿದ್ದಾರೆ.