ಪುನೀತ್ ರಾಜ್ ಕುಮಾರ್ ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ, ಅವರು ಮಾಡಿರುವ ಸಾಮಾಜಿಕ ಕಾರ್ಯಕ್ರಮಗಳು ನಮ್ಮ ಮುಂದೆ ಇವೆ. ಪುನೀತ್ ಅವರು ಯುವಕರಿಗೆ ಆದರ್ಶ ವ್ಯಕ್ತಿಯಾಗಿದ್ದಾರೆ. ವಿಜಯಪುರ ಬಸ್ ನಿಲ್ದಾಣಕ್ಕೆ ಪುನೀತ್ ರಾಜ್ ಕುಮಾರ್ ನಿಲ್ದಾಣವೆಂದು ನಾಮಕರಣ ಮಾಡಬೇಕು.
ಕನ್ನಡಪ್ರಭ ವಾರ್ತೆ ವಿಜಯಪುರ
ಪಟ್ಟಣದ ಬಸ್ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯ ಡಾ.ಬಿ.ಆರ್.ಅಂಬೇಡ್ಕರ್ ರಕ್ಷಣಾ ಸಮಿತಿಯ ವತಿಯಿಂದ ಪುನೀತ್ ರಾಜ್ ಕುಮಾರ್ ಅವರ ಪುಣ್ಯಸ್ಮರಣೆ ಅಂಗವಾಗಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.
ಈ ವೇಳೆ ಶಾಲಾ ವಿದ್ಯಾರ್ಥಿಗಳಿಗೆ ಕಲಿಕೋಪಕರಣಗಳು, ಬ್ಯಾಗುಗಳನ್ನು ವಿತರಣೆ ಮಾಡಿ, ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಪುರಸಭೆ ಸದಸ್ಯ ವಿ.ನಂದಕುಮಾರ್ ಮಾತನಾಡಿ, ಪುನೀತ್ ರಾಜ್ ಕುಮಾರ್ ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ, ಅವರು ಮಾಡಿರುವ ಸಾಮಾಜಿಕ ಕಾರ್ಯಕ್ರಮಗಳು ನಮ್ಮ ಮುಂದೆ ಇವೆ. ಪುನೀತ್ ಅವರು ಯುವಕರಿಗೆ ಆದರ್ಶ ವ್ಯಕ್ತಿಯಾಗಿದ್ದಾರೆ. ವಿಜಯಪುರ ಬಸ್ ನಿಲ್ದಾಣಕ್ಕೆ ಪುನೀತ್ ರಾಜ್ ಕುಮಾರ್ ನಿಲ್ದಾಣವೆಂದು ನಾಮಕರಣ ಮಾಡಬೇಕು ಎಂದು ಒತ್ತಾಯಿಸಿದರು.
ಮುಖಂಡ ಕೆ.ಎಂ.ಮಧು ಮಹೇಶ್ ಮಾತನಾಡಿ, ಪುನೀತ್ ರಾಜ್ ಕುಮಾರ್ ಅವರು ಇಂದಿಗೂ ನಮ್ಮೊಂದಿಗೆ ಇದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿರುವ ಕೊಡುಗೆಯನ್ನು ನಾವೆಲ್ಲರೂ ಮಾದರಿಯಾಗಿ ತೆಗೆದುಕೊಳ್ಳಬೇಕು ಎಂದರು.
ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಭಾನುಚಂದ್ರ ಮಾತನಾಡಿ, ನಾವು ಬಸ್ ನಿಲ್ದಾಣದಲ್ಲಿ ಪುನೀತ್ ರಾಜ್ ಕುಮಾರ್ ಅವರ ಪುತ್ಥಳಿ ಪ್ರತಿಷ್ಠಾಪನೆ ಮಾಡುವ ಮೂಲಕ ಅವರ ಸಾಮಾಜಿಕ ಕಾರ್ಯಗಳ ಕುರಿತು, ಯುವಪೀಳಿಗೆ ಅರಿವು ಮೂಡಿಸು ಕಾರ್ಯಕ್ರಮ ರೂಪಿಸುತ್ತಾ ಬಂದಿದ್ದೇವೆ. ಪಟ್ಟಣದ ಪುರಸಭೆ ಅಧ್ಯಕ್ಷರೂ ಸೇರಿ ನಾಗರಿಕರು ಪ್ರೋತ್ಸಾಹ ನೀಡುತ್ತಿರುವುದು ಸಂತಸ ತಂದಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಗೌಸ್ ಖಾನ್, ಮುಖಂಡರಾದ ಸೈಫುಲ್ಲಾ, ಸುರೇಶ್, ಮಂಜುನಾಥ್, ವೆಂಕಟೇಶ್, ಮುನ್ನಾಖಾನ್ ಸೇರಿ ಮುಖಂಡರು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.