ಕನ್ನಡಪ್ರಭ ವಾರ್ತೆ ಉಡುಪಿ
ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ದೆಹಲಿಯಲ್ಲಿ ಕೇಂದ್ರ ಸರ್ಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಹಾಗೂ ಸಚಿವಾಲಯದ ಜಂಟಿ ಕಾರ್ಯದರ್ಶಿ ತನ್ಮಯಕುಮಾರ್ ಅವರನ್ನು ಭೇಟಿಯಾಗಿ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾರವಾರದ ಸಿಆರ್ಝಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆ ಅನುಮತಿ ಬಗ್ಗೆ ಚರ್ಚೆ ನಡೆಸಿ ಮರಳುಗಾರಿಕೆ ಅವಕಾಶ ನೀಡಲು ವಿಶೇಷ ಕ್ರಮವಹಿಸುವಂತೆ ಮನವಿ ಮಾಡಿದರು.ಸಿಆರ್ಝಡ್ ಅಧಿಸೂಚನೆಯ ಪ್ರಕಾರ ಕರಾವಳಿ ಜಿಲ್ಲೆಯಲ್ಲಿ ಈ ವ್ಯಾಪ್ತಿಯ ಮರಳುಗಾರಿಕೆ ಸಂಪೂರ್ಣ ನಿಷೇಧವಾಗಿದ್ದು, ಕಟ್ಟಡ ನಿರ್ಮಾಣ ಕ್ಷೇತ್ರಕ್ಕೆ ಗಂಭೀರ ಸಮಸ್ಯೆ ಉಂಟಾಗುತ್ತಿದೆ ಎಂದು ಸಚಿವರಿಗೆ ಮನವರಿಕೆ ಮಾಡಿದ ಸಂಸದರು ಮತ್ತು ಶಾಸಕರು, ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳಿಗೆ ತೊಡಕಾಗಿರುವ ಮತ್ತು ಈಗಾಗಲೇ ಜಿಲ್ಲಾಡಳಿತದಿಂದ ಶಿಫಾರಸ್ಸಿನೊಂದಿಗೆ ಸಲ್ಲಿಸಲಾಗಿರುವ ಸಿಆರ್ಝಡ್ ಕರಡು ಅಧಿಸೂಚನೆಯಲ್ಲಿನ ಅಗತ್ಯ ತಿದ್ದುಪಡಿಯನ್ನು ಅಂಗೀಕರಿಸಿದ್ದಲಿ ಸಿಆರ್ಝಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆಗೆ ಅನುಮತಿ ಪಡೆಯಲು ಸಾಧ್ಯವಾಗಲಿದೆ ಎಂದರು.ಈಗಾಗಲೇ ಕೆಲವು ರಾಜ್ಯಗಳಲ್ಲಿ ಅಳವಡಿಸಿಕೊಂಡಿರುವ ಬದಲಾವಣೆಯನ್ನು ಸ್ಥಳೀಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕರಾವಳಿ ಜಿಲ್ಲೆಯ ಜಿಲ್ಲಾಡಳಿತ ಅಗತ್ಯ ತಿದ್ದುಪಡಿಯ ಬಗ್ಗೆ ರಾಜ್ಯ ಸರ್ಕಾರದ ಮೂಲಕ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಪ್ರಸ್ತಾವನೆಯನ್ನು ರಾಷ್ಟ್ರೀಯ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದು ಮರಳುಗಾರಿಕೆ ಆರಂಭಿಸಲು ಅವಕಾಶ ನೀಡುವಂತೆ ಸಚಿವರಿಗೆ ಮನವಿ ಮಾಡಿದರು.ಈಗಾಗಲೇ ಸಿಆರ್ಝಡ್ ವಲಯದಲ್ಲಿ ಮರಳುಗಾರಿಕೆ ನಿಷೇಧದಿಂದ ಕರಾವಳಿ ಜಿಲ್ಲೆಯ ಆರ್ಥಿಕ ವ್ಯವಸ್ಥೆಗೆ ಹಿನ್ನಡೆಯಾಗುತ್ತಿದ್ದು, ಮರಳು ಕೊರತೆಯಿಂದ ಕಟ್ಟಡ ನಿರ್ಮಾಣ ವಲಯದ ಕಾರ್ಮಿಕರು, ಟೆಂಪೋ ಲಾರಿ ವಾಹನ ಮಾಲೀಕರು ಹಾಗೂ ಜನಸಾಮಾನ್ಯರು ಮನೆ ನಿರ್ಮಾಣ ಕಾರ್ಯ ನಡೆಸಲು ಸಮಸ್ಯೆ ಅನುಭವಿಸುತ್ತಿದ್ದು, ತಕ್ಷಣ ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಸಹಕಾರ ನೀಡುವಂತೆ ತಿಳಿಸಿದರು.