ಕನ್ನಡಪ್ರಭ ವಾರ್ತೆ ಮಡಿಕೇರಿ
ಕೊಡಗು ಜಿಲ್ಲೆಯಲ್ಲಿ ಕೆಲಸದಲ್ಲಿ ತೊಡಗಿರುವ ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಿ, ಪುನರ್ವಸತಿಗೊಳಿಸಿ ಶಿಕ್ಷಣ ಮುಂದುವರಿಕೆಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಆ.31 ರ ವರೆಗೆ ರಕ್ಷಣಾ ಕಾರ್ಯಾಚರಣೆ ನಡೆಸಲು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನಿರ್ದೇಶನ ನೀಡಿದೆ.ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯಾದ್ಯಂತ ಮಕ್ಕಳ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದ್ದು, ಈ ಸಂದರ್ಭದಲ್ಲಿ ಕೆಲಸದಲ್ಲಿ ತೊಡಗಿರುವ ಬಾಲ ಹಾಗೂ ಕಿಶೋರ ಕಾರ್ಮಿಕರು ಕಂಡುಬಂದಲ್ಲಿ, ಅವರನ್ನು ರಕ್ಷಿಸಿ, ಪುನರ್ವಸತಿಗೊಳಿಸಿ, ಶಿಕ್ಷಣ ಮುಂದುವರಿಕೆಗೆ ಅವಕಾಶ ಮಾಡಿಕೊಡಲಾಗುವುದು. ಕೆಲಸಕ್ಕೆ ನಿಯೋಜಿಸಿಕೊಂಡ ಮಾಲೀಕರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದು ಈ ಕಾರ್ಯಾಚರಣೆ ಉದ್ದೇಶ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಕಾವೇರಿ ಮಾಹಿತಿ ನೀಡಿದ್ದಾರೆ.
ಸ್ವಾತಂತ್ರ ದಿನಾಚರಣೆ ಪ್ರಯುಕ್ತ ಆ.31 ರ ವರೆಗೆ ಮಕ್ಕಳ ರಕ್ಷಣಾ ಕಾರ್ಯಾಚರಣೆಗೆ ಸಂಬಂಧಿಸಿದಂತೆ ತಪಾಸಣೆ ಮತ್ತು ಹಠಾತ್ ದಾಳಿ ನಡೆಸುವಂತೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಮಡಿಕೇರಿ ನಗರದ ಹಳೇ ಖಾಸಗಿ ಬಸ್ ನಿಲ್ದಾಣ, ಕೆಎಸ್ಆರ್ಟಿಸಿ. ಬಸ್ ನಿಲ್ದಾಣ, ಹೊಸ ಖಾಸಗಿ ಬಸ್ ನಿಲ್ದಾಣ, ಟಾಟಾ ಮೋಟಾರ್ಸ್ ಹಾಗೂ ಇತರೆ ಸಂಸ್ಥೆಗಳಿಗೆ ಸತ್ಯ ಎಸ್ಜೆ, ಮಹಿಳಾ ಪೊಲೀಸ್ ಹೆಡ್ ಕಾನ್ಸ್ಟೇಬಲ್, ಹರ್ಷಿತಾ ಬಿ.ಆರ್. ಮಕ್ಕಳ ಸಹಾಯವಾಣಿ-1098 ಮೇಲ್ವಿಚಾರಕರು, ಅಬ್ದುಲ್ ನಿಸಾರ್ ಪಿ.ಆರ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಒ.ಆರ್.ಡಬ್ಲ್ಯೂ, ಮಲ್ಲಿಕಾರ್ಜುನ ಸಿ.ಆರ್, ಕೆ.ಎಸ್.ಆರ್.ಟಿ.ಸಿಯ ಟಿ.ಸಿ, ಪಿ.ಬಿ.ಸುರೇಶ, ನಗರಸಭೆಯ ಆರೋಗ್ಯ ನಿರೀಕ್ಷಕರು, ಎಂ.ಪಿ ಉತ್ತಪ್ಪ, ಎಎಸ್ಐ, ಸಿ.ವಿ.ಶ್ರೀಧರ, ಪಿಎಸ್ಐ ಮಹೇಶ ಯು.ಎ., ಎಎಸ್ಸಿಡಬ್ಲ್ಯುಪಿಒ ಎಸ್.ಜೆ.ಪಿ.ಯು, ಕಾರ್ಮಿಕ ಅಧಿಕಾರಿ ಕಾವೇರಿ ಟಿ., ಆರ್.ಶಿರಾಜ್ ಅಹ್ಮದ್, ಯೋಜನಾ ನಿರ್ದೇಶಕರು, ಜಿ.ಬಾ.ಕಾ.ಯೋ.ಸೊ, ಜರೀನಾ, ಡಿ.ಇ.ಒ ಹಾಗೂ ಎಂ.ಎ.ಯತ್ನಟ್ಟಿ, ಹಿರಿಯ ಕಾರ್ಮಿಕ ನಿರೀಕ್ಷಕರು, ಮಡಿಕೇರಿ ವೃತ್ತ, ಮಡಿಕೇರಿ ತಂಡದೊಂದಿಗೆ ಭೇಟಿ ನೀಡಿ ತಪಾಸಣೆ ನಡೆಸಲಾಯಿತು. ತಪಾಸಣೆಯಲ್ಲಿ ಯಾವುದೇ ಬಾಲಕಾರ್ಮಿಕ ಮಕ್ಕಳು ಕಂಡುಬಂದಿರುವುದಿಲ್ಲ.