ಹುಬ್ಬಳ್ಳಿ: ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಶೇ. 15ರಷ್ಟು ಮೀಸಲಾತಿ ನೀಡುವ ರಾಜ್ಯ ಸರ್ಕಾರದ ನಿರ್ಧಾರ ತುಷ್ಟೀಕರಣದ ಪರಮಾವಧಿ ಎಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ ಶೆಟ್ಟರ್ ಕಿಡಿಕಾರಿದ್ದಾರೆ.
ಮುಂಬರುವ ಚುನಾವಣೆಯಲ್ಲಿ ಕರ್ನಾಟಕದಲ್ಲೂ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳಲಿದೆ. ಬೇರೆ ಕಡೆ ಆ ಪಕ್ಷ ಅಧಿಕಾರಕ್ಕೆ ಬರುವುದು ದೂರದ ಮಾತು. ಚುನಾವಣೆಯಲ್ಲಿ ಗೆಲ್ಲಬೇಕು ಎನ್ನುವ ಒಂದೇ ಒಂದು ಉದ್ದೇಶ ಕಾಂಗ್ರೆಸ್ನವರು ಹೊಂದಿದ್ದಾರೆ. ಅದೇ ಕಾರಣಕ್ಕೆ ಹಿಂದೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಿದ್ದರು. ಇದೀಗ ವಸತಿ ಇಲಾಖೆ ಮನೆ ಹಂಚಿಕೆಯಲ್ಲೂ ಮೀಸಲಾತಿ ನೀಡಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಅಭಿಪ್ರಾಯಪಟ್ಟರು.
ರಾಜ್ಯದಲ್ಲಿ ಹಿಂದೂಗಳನ್ನು ಉದ್ದೇಶಪೂರ್ವಕವಾಗಿ ಟಾರ್ಗೆಟ್ ಮಾಡಲಾಗುತ್ತಿದೆ. ಮಂಗಳೂರಲ್ಲಿ ಆಗಿರುವ ಘಟನೆಗಳೇ ಇದಕ್ಕೆ ಸಾಕ್ಷಿ. ಜನರಿಂದ ಆಯ್ಕೆಯಾದ ಸರ್ಕಾರ ವೈಯಕ್ತಿಕವಾಗಿ ಒಂದು ಸಮಾಜವನ್ನು ಟಾರ್ಗೆಟ್ ಮಾಡುವುದು ಸರಿಯಲ್ಲ ಎಂದು ಹೇಳಿದರು.ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿಲ್ಲ. ಸರ್ಕಾರದಲ್ಲಿರುವ ಸಚಿವರು, ರಾಜ್ಯದಲ್ಲಿನ ಶಾಂತಿ, ಸುವ್ಯವಸ್ಥೆಗೆ ಗಮನ ಹರಿಸುವುದು ಬಿಟ್ಟು ಸಿಎಂ ಕುರ್ಚಿಗೆ ಹೊಡೆದಾಟ ನಡೆಸಿದ್ದಾರೆ. ಅದೇ ರೀತಿ ಸಚಿವ ಸ್ಥಾನ ಉಳಿಸಿಕೊಳ್ಳಲು ಫೈಟ್ ನಡೆಸಿದ್ದಾರೆ. ಇದೇ ಕಾರಣಕ್ಕೆ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಮಂಜೂರಾಗಿರುವ ಕೆಲಸಗಳನ್ನೇ ಮಾಡುತ್ತಾ ಬರುತ್ತಿದ್ದಾರೆ ಎಂದರು.