ಬೆಳಗಾವಿ : ಮಹಾರಾಷ್ಟ್ರದಲ್ಲಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದ ಕನ್ನಡಿಗರ ಮಕ್ಕಳಿಗೆ ಕರ್ನಾಟಕದಲ್ಲಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸುವ ಕುರಿತು ಬರುವ ಏಪ್ರಿಲ್ ತಿಂಗಳಲ್ಲಿ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ ನಡೆಸಲು ನಿರ್ಧರಿಸಲಾಗಿದೆ.
ಗಡಿ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರೊಂದಿಗೆ ಈ ವಿಚಾರವನ್ನು ಚರ್ಚಿಸಲು ತೀರ್ಮಾನಿಸಲಾಗಿದ್ದು, ಶುಕ್ರವಾರ ಸಂಜೆ ಮಹಾರಾಷ್ಟ್ರದ ಜತ್ತದ ಮಾಜಿ ಶಾಸಕ ವಿಕ್ರಮ್ ಸಾವಂತ ಅವರೊಂದಿಗೆ ಬೆಳಗಾವಿಯ ಕನ್ನಡ ಸಂಘಟನೆಗಳು ನಡೆಸಿದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಜತ್ತದ ಕನ್ನಡ ಹೋರಾಟಗಾರರಾದ ವಾಹಬ್ ಮುಲ್ಲಾ, ಮಲಿಕ್ ಜಾನ್ ಹಾಗೂ ಬೆಳಗಾವಿಯ ಕನ್ನಡ ಹೋರಾಟಗಾರರಾದ ಅಶೋಕ ಚಂದರಗಿ, ಮಹಾದೇವ ತಳವಾರ, ವಾಜಿದ ಹಿರೇಕೋಡಿ, ಬಲರಾಮ ಮಾಸೇನಟ್ಟಿ, ಸಾಗರ ಬೋರಗಲ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಸಭೆಯಲ್ಲಿ ಮಹಾರಾಷ್ಟ್ರದ ಗಡಿ ಭಾಗಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಮುಂದಿನ ಹಂತದಲ್ಲಿ ಕರ್ನಾಟಕದಲ್ಲಿ ಉನ್ನತ ಶಿಕ್ಷಣ ಹಾಗೂ ಸರ್ಕಾರಿ ಉದ್ಯೋಗಗಳ ಅವಕಾಶಗಳಿಂದ ವಂಚಿತರಾಗುತ್ತಿರುವ ಸಮಸ್ಯೆಯನ್ನು ಗಂಭೀರವಾಗಿ ಚರ್ಚಿಸಲಾಯಿತು. ಈ ಹಿನ್ನೆಲೆಯಲ್ಲಿ ಅವರಿಗೆ ವಿಶೇಷ ಮೀಸಲಾತಿ ಅಥವಾ ಸೌಲಭ್ಯ ಕಲ್ಪಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಬೇಕೆಂದು ಒತ್ತಾಯಿಸಲಾಯಿತು.
ಅಲ್ಲದೆ, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವಿನ ನೀರು ವಿನಿಮಯ ಒಪ್ಪಂದ, ಸಾರಿಗೆ ವ್ಯವಸ್ಥೆಯ ಸುಧಾರಣೆ ಕುರಿತ ವಿಷಯಗಳನ್ನೂ ಸಭೆಯಲ್ಲಿ ಪ್ರಸ್ತಾಪಿಸಲಾಯಿತು. ಗಡಿ ಭಾಗದ ಜನತೆಗೆ ಈ ಮೂಲಭೂತ ಸೌಲಭ್ಯಗಳು ಸಮರ್ಪಕವಾಗಿ ದೊರೆಯುವಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲು ನಿರ್ಧರಿಸಲಾಯಿತು.
ಜತ್ತ ತಾಲೂಕಿನ 44 ಗ್ರಾಮಗಳು ಸಂಪೂರ್ಣ ಕನ್ನಡ ಭಾಷಾಭಿಮಾನಿಗಳ ಹಳ್ಳಿಗಳಾಗಿದ್ದು, ಅಲ್ಲಿನ ಕನ್ನಡಿಗರ ಹಕ್ಕುಗಳ ರಕ್ಷಣೆಗೆ ಮಾಜಿ ಶಾಸಕ ವಿಕ್ರಮ್ ಸಾವಂತ ನಿರಂತರವಾಗಿ ಪ್ರಯತ್ನಿಸುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಲಾಯಿತು. ಈ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರದ ಮಟ್ಟದಲ್ಲಿ ಸಮಗ್ರ ಚರ್ಚೆ ನಡೆಸಿ ಸ್ಪಷ್ಟ ನಿರ್ಣಯ ಕೈಗೊಳ್ಳಬೇಕು ಎಂದು ಸಭೆ ಒತ್ತಾಯಿಸಿತು.