ಕಸ್ತೂರಿ ರಂಗನ್ ವರದಿ ವಿರುದ್ಧ ಅಧಿವೇಶನದಲ್ಲಿ ನಿರ್ಣಯ: ಸಿಎಂ

KannadaprabhaNewsNetwork |  
Published : Sep 19, 2026, 02:00 AM IST
ಕದ್ರಿ ದೇವಾಲಯಕ್ಕೆ ಸಿಎಂ ಭೇಟಿ | Kannada Prabha

ಸಾರಾಂಶ

ಪಶ್ಚಿಮ ಘಟ್ಟದಲ್ಲಿ ಕಸ್ತೂರಿ ರಂಗನ್ ವರದಿ ಅಧಿಸೂಚನೆ ಜಾರಿ ವಿರುದ್ಧ ಸೆ. 21, 22, 23 ರಂದು ನಡೆಯುವ ವಿಶೇಷ ಅಧಿವೇಶನದಲ್ಲಿ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಹೆಬ್ರಿ:

ಪಶ್ಚಿಮ ಘಟ್ಟದಲ್ಲಿ ಕಸ್ತೂರಿ ರಂಗನ್ ವರದಿ ಅಧಿಸೂಚನೆ ಜಾರಿ ವಿರುದ್ಧ ಸೆ. 21, 22, 23 ರಂದು ನಡೆಯುವ ವಿಶೇಷ ಅಧಿವೇಶನದಲ್ಲಿ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ.

ಅವರು ಶುಕ್ರವಾರ, ಉಡುಪಿ ಜಿಲ್ಲೆ ಹೆಬ್ರಿಯ ಸರ್ಕಾರಿ ಪಿಯು ಕಾಲೇಜು ಮೈದಾನದಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಈ ಅಧಿಸೂಚನೆ ಜಾರಿ ಬಗ್ಗೆ ಸ್ಥಳೀಯರ ಅಭಿಪ್ರಾಯ ಆಲಿಸಿ ಮಾತನಾಡಿದರು.

ಅವರು ಸಭೆಯಲ್ಲಿ ಅಧಿಸೂಚನೆಯ ಪರ ಅಥವಾ ವಿರುದ್ಧ ಸ್ಪಷ್ಟ ನಿರ್ಣಯವನ್ನು ಘೋಷಿಸಲಿಲ್ಲ, ಆದರೆ, ಜನರ ಅಭಿಪ್ರಾಯವೇ ನನ್ನ ಸರ್ಕಾರದ ಅಭಿಪ್ರಾಯ, ನಾನು ಜನರ ಭಾವನೆಗಳ ಮೇಲೆ ರಾಜಕಾರಣ ಮಾಡುವುದಿಲ್ಲ, ಜನರ ಬದುಕಿಗಾಗಿ ರಾಜಕಾರಣ ಮಾಡುತ್ತೇನೆ ಎಂದು ಮಾರ್ಮಿಕವಾಗಿ ನುಡಿದರು.

ವಿಶೇಷ ಅಧಿವೇಶನದ ಮೊದಲ ದಿನವಿಡೀ ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ ನಡೆಸಿ ನಿರ್ಣಯ ಕೈಗೊಳ್ಳಲಾಗುತ್ತದೆ, ಜನರಿಗೆ ಆತಂಕ ಬೇಡ, ನಿಮ್ಮ ಜೊತೆ ಸರ್ಕಾರ ಇದೆ, ಸಮಸ್ಯೆಗೆ ಪರಿಹಾರ ನೀಡುತ್ತೇವೆ ಎಂದವರು ಹೇಳಿದರು.

ಈ ವರದಿಯ ಬಾಧಿತ ಗ್ರಾಮಗಳಲ್ಲಿ ಸಭೆ, ಸರ್ವೇ ನಡೆಸಬೇಕಾದ ಅಗತ್ಯ ಇದೆ, ಸರ್ವೇಗೆ ತಾಂತ್ರಿಕ ಸಮಿತಿ ರಚನೆಗೆ ಬೇಡಿಕೆ ವ್ಯಕ್ತವಾಗಿದೆ, ಆದ್ದರಿಂದ ನಾನು ಇನ್ನೆರಡು ದಿನಗಳಲ್ಲಿ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಿಗೂ ಹೋಗಿ ಸಭೆ ನಡೆಸಿ ಜನರ ಅಭಿಪ್ರಾಯ ಕೇಳುತ್ತೇನೆ ಎಂದರು.

ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿ ಮಾತನಾಡಿ, ರಾಜ್ಯ ಸರ್ಕಾರ ಈಗಾಗಲೇ ಕಸ್ತೂರಿರಂಗನ್ ವರದಿ ಜಾರಿ ವಿರುದ್ಧ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದೆ, ಜನರಿಗೆ ಆತಂಕ ಬೇಡ ಎಂದರು.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಮಾತನಾಡಿ, ಜನರ ವಿರುದ್ಧ ಯಾವುದೇ ಯೋಜನೆ, ಕಾಯ್ದೆ ಬಂದರೂ ವಿರೋಧಿಸುತ್ತೇವೆ, ಅಗತ್ಯವಾದರೆ ಕಾನೂನು ಹೋರಾಟವನ್ನೂ ಮಾಡುತ್ತೇವೆ ಎಂದರು.ಕಸ್ತೂರಿ ರಂಗನ್‌ ವರದಿ ವಿರೋಧಿಸಿ ಶಿಕಾರಿಪುರದಲ್ಲಿ ಬಿಜೆಪಿ ಪ್ರತಿಭಟನೆ:

ರಾಜ್ಯದ ಕಾಂಗ್ರೆಸ್ ಸರ್ಕಾರ ಕುಂಭಕರ್ಣ ನಿದ್ರೆಯಲ್ಲಿದ್ದು, ಈ ಬಗ್ಗೆ ಎಚ್ಚರಿಸಲು ಹೋರಾಟ, ಪಾದಯಾತ್ರೆ, ಸತ್ಯಾಗ್ರಹ ಅನಿವಾರ್ಯವಾಗಿದೆ ಎಂದು ಪ್ರತಿಪಾದಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಜನಸಾಮಾನ್ಯರ ನೆಮ್ಮದಿಗಾಗಿ ಸರ್ಕಾರವನ್ನು ಎಚ್ಚರಿಸಲು ಯಡಿಯೂರಪ್ಪನವರ ರೀತಿಯಲ್ಲಿ ಹೋರಾಟ ಹಮ್ಮಿಕೊಂಡು ನ್ಯಾಯ ದೊರಕಿಸಿಕೊಡಲು ಸಿದ್ಧ ಎಂದು ಘೋಷಿಸಿದ್ದಾರೆ.ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ತಾಲೂಕು ಕಚೇರಿ ಮುಂಭಾಗ ತಾಲೂಕು ಬಿಜೆಪಿ ಹಾಗೂ ರೈತ ಮೋರ್ಚಾ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡೆದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ರಾಜ್ಯದ ಕಾಂಗ್ರೆಸ್‌ ಸರ್ಕಾರ ಬಡವರಿಗೆ ಮನೆ, ಗಂಗಾಕಲ್ಯಾಣ, ವಿಕಲಚೇತನರಿಗೆ, ವೃದ್ಧರಿಗೆ ಪಿಂಚಣಿ, ಸಂಧ್ಯಾಸುರಕ್ಷಾ, ವಿಧವಾ ವೇತನ ಮತ್ತಿತರ ಎಲ್ಲ ಯೋಜನೆಯನ್ನು ಸ್ಥಗಿತಗೊಳಿಸಿ ದರಿದ್ರ ಸರ್ಕಾರ ಎಂಬ ಹೆಗ್ಗಳಿಕೆಯನ್ನು ಹೊಂದಿದೆ. ಗ್ಯಾರಂಟಿ ನೆಪದಲ್ಲಿ ಅಬಕಾರಿ ಇಲಾಖೆ ಮೂಲಕ ಹಣ ಕಿತ್ತುಕೊಳ್ಳಲು ಕುಡುಕರ ರಾಜ್ಯ ಮಾಡಲು ಸಿದ್ಧತೆ ನಡೆದಿದೆ. ವಿಧಾನಸಭೆ ಚುನಾವಣೆಗೆ 2 ವರ್ಷ ಉಳಿದ ಹಿನ್ನೆಲೆಯಲ್ಲಿ ಇದೀಗ ಎಚ್ಚೆತ್ತು ಪ್ರಜಾಸೇವೆ ಎಂಬ ಕಪಟ ನಾಟಕದ ಮೂಲಕ ಜನತೆಗೆ ಮಂಕುಬೂದಿ ಎರಚಲು ಸಿದ್ಧವಾಗಿದೆ ಎಂದರು.ಕಾಂಗ್ರೆಸ್‌ನ ಪಾಪದ ಕೊಡ ಭರ್ತಿಯಾಗಿದ್ದು, 2028ಕ್ಕೆ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ನಿಶ್ಚಿತ. ನಂತರದಲ್ಲಿ ರಾಜ್ಯದಲ್ಲಿ ಅಭಿವೃದ್ಧಿಯ ಗತವೈಭವ ಪುನಃ ಆರಂಭಗೊಳ್ಳಲಿದ್ದು, ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್
ದಸರಾ ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಿ: ಬಿ.ಬಿ. ಅಸೂಟಿ