ಕನ್ನಡಪ್ರಭ ವಾರ್ತೆ ಚಾಮರಾಜನಗರರೈತರ ಸಮಸ್ಯೆಗಳ ಕುರಿತು ಚರ್ಚಿಸಿದ ರೈತ ಮುಖಂಡರು ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಸರ್ಕಾರ ಕೂಡಲೇ ಬಗೆಹರಿಸಬೇಕು ಎಂದು ಆಗ್ರಹಿಸಿದರು.ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ನಗರದ ಪ್ರವಾಸಿ ಮಂದಿರದಲ್ಲಿ ನಡೆಸಿದ ಸಭೆಯಲ್ಲಿ ಮಾತನಾಡಿದ ಮುಖಂಡರು, ಕಾರ್ಖಾನೆಗಳು ಕಬ್ಬಿನ ಉಪ ಉತ್ಪನ್ನಗಳ ಲಾಭಾಂಶ ನೀಡದೆ ವಂಚಿಸುತ್ತಿವೆ. ರೈತರಿಗೆ ಕಳೆದ ವರ್ಷದ ಬಾಕಿ 950 ಕೋಟಿ ರು. ಕೂಡಲೇ ಪಾವತಿಸಬೇಕು ಎಂದು ಒತ್ತಾಯಿಸಿದರು.ಜಿಲ್ಲೆಯಲ್ಲಿ ವಿದ್ಯುತ್ ಸಮಸ್ಯೆ ತಲೆದೋರಿದ್ದು ಜಮೀನಿಗೆ ರೈತರು ನೀರು ಹಾಯಿಸಲು ಸಾಧ್ಯವಾಗುತ್ತಿಲ್ಲ. ರಾತ್ರಿ ಕಾಡುಪ್ರಾಣಿ ಭಯದಿಂದ ಜಮೀನುಗಳಿಗೆ ತೆರಳಲು ಆಗುತ್ತಿಲ್ಲ. ರೈತರಿಗೆ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿದರು. ಸಿಬಿಲ್ ಸ್ಕೋರ್ ಪರಿಗಣಿಸಬಾರದು, ಹೈನುಗಾರರಿಗೆ ಬಾಕಿ ಇರುವ 800 ಕೋಟಿ ರು. ಪ್ರೋತ್ಸಾಹಧನ ವಿತರಿಸಬೇಕು ಎಂದು ಒತ್ತಾಯಿಸಿದರು. ಬಿತ್ತನೆ ಬೀಜ, ರಸಗೊಬ್ಬರ ದರ ಏರಿಕೆ ರೈತರಿಗೆ ಆರ್ಥಿಕ ಹೊರೆ, ದರ ಕಡಿತಗೊಳಿಸಲು ಕ್ರಮ ಕೈಗೊಳ್ಳಬೇಕು, ರೈತರ ಬೆಳೆಗೆ ವೈಜ್ಞಾನಿಕ ಬೆಲೆ ಸಿಗದೆ ಸಂಕಷ್ಟದಲ್ಲಿ ಸಿಲುಕಿದ್ದು ಬೆಂಬಲ ಬೆಲೆ ನೀಡಬೇಕು ಎಂದು ಸಭೆಯಲ್ಲಿ ರೈತ ಒತ್ತಾಯಿಸಿದರು.