ಕನ್ನಡಪ್ರಭ ವಾರ್ತೆ ಹಾಸನ
ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರ ಕುಂದುಕೊರತೆಗಳನ್ನು ಆಲಿಸಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತುಕೊಂಡು ನಿಷ್ಟೆಯಿಂದ ಕೆಲಸ ಮಾಡಿ ಎಂದು ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ, ಅಲೆಮಾರಿ, ಅರೆ ಅಲೆಮಾರಿಗಳ ಕುಂದು ಕೊರತೆಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲರಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾನೂನು ಚೌಕಟ್ಟಿನಲ್ಲಿ ಸಾಧ್ಯವಿರುವುದನ್ನು ಕಲ್ಪಿಸಲು ಮೊದಲ ಆದ್ಯತೆ ನೀಡಿ ಬದ್ಧತೆಯಿಂದ ಕರ್ತವ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದುಕೊರತೆ ಆಲಿಸಲು ಎಲ್ಲಾ ತಾಲೂಕುಗಳಲ್ಲಿ ಸಭೆ ನಡೆಸುವಂತೆ ತಹಸೀಲ್ದಾರ್ಗಳಿಗೆ ಸೂಚಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಹಣವನ್ನು ಬೇರೆ ಉದ್ದೇಶಗಳಿಗೆ ಬಳಕೆ ಮಾಡುವಂತಿಲ್ಲ, ಈ ನಿಟ್ಟಿನಲ್ಲಿ ಅಧಿಕಾರಿಗಳು ನಿಗಾ ವಹಿಸುವಂತೆ ನಿರ್ದೇಶನ ನೀಡಿದರು. ಸರ್ಕಾರಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಟೆಂಡರ್ ಕರೆಯುವ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಇರುವ ಮೀಸಲಾತಿಗಾಗಿ ಸರ್ಕಾರಿ ಆದೇಶ ಪಾಲಿಸುವಂತೆ ತಿಳಿಸಿದರು.ಹಾಸನ ನಗರದ ಹುಣಸಿನಕೆರೆ ಬಳಿಯಲ್ಲಿ ಗೃಹಭಾಗ್ಯ ಯೋಜನೆಯಡಿ ನಿರ್ಮಾಣ ಮಾಡಿರುವ ಪೌರಕಾರ್ಮಿಕರ ಮನೆಗಳ ದುರಸ್ತಿ ಹಾಗೂ ಸಕಲೇಶಪುರದ ಕುಶಾಲನಗರದಲ್ಲಿ ಕೊಳಚೆ ನಿರ್ಮೂಲನಾ ಮಂಡಳಿಯಿಂದ ನಿರ್ಮಿಸಿರುವ ಮನೆಗಳ ದುರಸ್ತಿ ಕಾರ್ಯವನ್ನು ಒಂದು ತಿಂಗಳಲ್ಲಿ ಮಾಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಹಂದಿ ಜೋಗಿ ಸಮುದಾಯಕ್ಕೆ ಮೀಸಲಿಟ್ಟಿರುವ ಮೂರು ಎಕರೆ ಪ್ರದೇಶದಲ್ಲಿ ಎಕರೆ ನಿವೇಶನ ಹಂಚಿಕೆಯಾಗಿದೆ. ಉಳಿದ ಒಂದು ಎಕರೆ ಪ್ರದೇಶದಲ್ಲಿ ಇತರರು ಶೇಡ್ ನಿರ್ಮಾಣ ಮಾಡಿ ಬಾಡಿಗೆ ನೀಡಿದ್ದಾರೆ. ಇದನ್ನು ತೆರವುಗೊಳಿಸಿ ಸಮುದಾಯದ ಭವನ ಹಾಗೂ ಅಂಗನವಾಡಿ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿ ಕೊಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಪರಿಶೀಲಿಸಲು ತಹಸೀಲ್ದಾರ್ ಅವರಿಗೆ ಸೂಚನೆ ನೀಡಿದರು.ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಸೌಲಭ್ಯ ಒದಗಿಸಲು ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಸಾಮಾಜಿಕ ಕಳಕಳಿಯಿಂದ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು. ೫೩,೫೭ರಲ್ಲಿ ಅರ್ಜಿ ಸಲ್ಲಿಸಿದ್ದಾರೆ ಮಂಜೂರು ಮಾಡಲು ಅವಕಾಶ ಇರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಚೆಸ್ಕಾಂ ಅಧಿಕಾರಿಗಳು ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸಮನ್ವಯತೆ ಯಿಂದ ಕರ್ತವ್ಯ ನಿರ್ವಹಿಸಿ ಗಂಗಾ ಕಲ್ಯಾಣ ಯೋಜನೆಯಡಿ ಕೊರೆದಿರುವ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಒಂದು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.
ಸಾರ್ವಜನಿಕ ಆಸ್ಪತ್ರೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಹಾಗೂ ಬಿ.ಪಿ.ಎಲ್ ಫಲಾನುಭವಿಗಳಿಗೆ ಉಚಿತ ಚಿಕಿತ್ಸೆ ನೀಡಬೇಕು ಎಂದು ಸರ್ಕಾರದ ಆದೇಶವಿದೆ. ಈ ನಿಟ್ಟಿನಲ್ಲಿ ಅದನ್ನು ಪಾಲಿಸಲು ತಿಳಿಸದ ಜಿಲ್ಲಾಧಿಕಾರಿಯವರು ತುರ್ತಾಗಿ ಆ್ಯಂಬುಲೆನ್ಸ್ ಸೌಲಭ್ಯ ಕಲ್ಪಿಸುವಂತೆ ಸೂಚಿಸಿದರು. ಹಿಮ್ಸ್ನಲ್ಲಿ ಅತ್ಯಾಧುನಿಕ ಯಂತ್ರಗಳಿವೆ ಅವುಗಳ ಬಳಕೆ ಆಗಬೇಕು ಎಂದರು.ಸಭೆಯಲ್ಲಿ ಹಾಜರಿದ್ದ ಸಮುದಾಯದವರ ಮನವಿ ಮೇರೆಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯನ್ನು ಅಂಬೇಡ್ಕರ್ ಭವನಕ್ಕೆ ಸ್ಥಳಾಂತರ ಮಾಡುವಂತೆ ಸೂಚಿಸಿದರು. ಸದರಿ ಸಭೆಯಲ್ಲಿ ಸಲ್ಲಿಕೆಯಾಗಿರುವ ೧೬೫ ಅರ್ಜಿಗಳು ಪರಿಶೀಲಿಸಿ ಕೈಗೊಂಡಿರುವ ಪರಿಹಾರ ಬಗ್ಗೆ ಮುಂದಿನ ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಬೇಕು ಎಂದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಅವರ ಮಾತನಾಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಬರುವ ಸಮಸ್ಯೆಗಳನ್ನು ಬಗೆಹರಿಸಲು ಕ್ರಮವಹಿಸಲಾಗುವುದು ಎಂದರು. ಜಿಲ್ಲಾ ಪೊಲೀಸ್ ವರಿ?ಧಿಕಾರಿ ಮೊಹಮ್ಮದ್ ಸುಜೀತ ಅವರು ಮಾತನಾಡಿ, ಪ್ರತಿ ಮಾಹೆ ಪೊಲೀಸ್ ಇಲಾಖೆ ವತಿಯಿಂದ ನಡೆಸುವ ಸಭೆಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ದೂರುಗಳು ಬರುವುದರಿಂದ ಕಂದಾಯ ಇಲಾಖೆಯ ಸಿಬ್ಬಂದಿಯವರು ಭಾಗವಹಿಸಿದರೆ ಅನುಕೂಲವಾಗುತ್ತದೆ ಎಂದರು.
ಸಂದೇಶ್, ಅಂಬುಗ ಮಲ್ಲೇಶ್, ಆರ್.ಪಿ.ಸತೀಶ್, ಹೆತ್ತೂರು ನಾಗರಾಜ್, ವಿಜಯಕುಮಾರ್ ಮತ್ತಿತರ ಮುಖಂಡರು ಸಭೆಯಲ್ಲಿ ಹಕ್ಕು ಪತ್ರ, ಚರಂಡಿ, ರಸ್ತೆ, ಮನೆ ಮಂಜೂರಾತಿ, ಒತ್ತುವರಿ, ನಿವೇಶನ, ಜಮೀನು ಮಂಜೂರಾತಿ ಮತ್ತಿತರ ಸಮಸ್ಯೆಗಳ ಕುರಿತು ಸಭೆಯ ಗಮನಕ್ಕೆ ತಂದರು.ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್, ಹೆಚ್ಚುವರಿ ಪೊಲೀಸ್ ವರಿ?ಧಿಕಾರಿ ತಮ್ಮಯ್ಯ, ಸಮುದಾಯದ ಮುಖಂಡರು ಹಾಜರಿದ್ದರು.