- ಸಂಸದೆ ಡಾ.ಪ್ರಭಾ ಸಲಹೆ । ಆಸ್ತಿ ತೆರಿಗೆಯಲ್ಲಿ ಹೆಚ್ಚಿನ ವಸೂಲಾತಿ, ಪ್ರಗತಿ ಸಾಧಿಸಿರುವ ಅಧಿಕಾರಿ-ನೌಕರರಿಗೆ ಪ್ರಶಂಸನಾ ಪತ್ರ ವಿತರಣೆ - - -
ಸರ್ಕಾರಿ ಕಚೇರಿಗಳಿಗೆ ಬರುವ ಸಾರ್ವಜನಿಕರನ್ನು ಕೇವಲ ಅರ್ಜಿದಾರರನ್ನಾಗಿ ನೋಡದೇ, ಅವರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಿ, ಸೂಕ್ತ ಪರಿಹಾರ ಕಲ್ಪಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.
ನಗರದ ಮಹಾನಗರ ಪಾಲಿಕೆ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ ಮತ್ತು ಜಿಲ್ಲಾ ನಗರಾಭಿವೃದ್ಧಿ ಕೋಶ ವತಿಯಿಂದ ಮಹಾನಗರ ಪಾಲಿಕೆ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಸಕ್ತ ಸಾಲಿನ ಏಪ್ರಿಲ್ ಮಾಹೆಯಲ್ಲಿ ಸ್ವಯಂ ಘೋಷಿತ ಆಸ್ತಿ ತೆರಿಗೆಯಲ್ಲಿ ಹೆಚ್ಚಿನ ವಸೂಲಾತಿ ಮತು ಪ್ರಗತಿ ಸಾಧಿಸಿರುವ ಅಧಿಕಾರಿಗಳು, ನೌಕರರಿಗೆ ಪ್ರಶಂಸನಾ ಪತ್ರ ನೀಡುವ ಕಾರ್ಯಕ್ರಮ ಉದ್ಪಾಟಿಸಿ ಅವರು ಮಾತನಾಡಿದರು.ಪಾಲಿಕೆ ವ್ಯಾಪ್ತಿಯಲ್ಲಿ ಏಪ್ರಿಲ್ ಮತ್ತು ಮೇ ತಿಂಗಳ ಅವಧಿಯಲ್ಲಿ ಶೇಕಡ 50ಕ್ಕೂ ಹೆಚ್ಚು ತೆರಿಗೆ ವಸೂಲಾತಿಯಾಗಿ ಗಣನೀಯ ಸಾಧನೆಯಾಗಿದೆ. ನಗರದ ಅಭಿವೃದ್ಧಿಗೆ ಮೂಲಸೌಕರ್ಯ, ಹಸಿರೀಕರಣ ಹಾಗೂ ಸ್ವಚ್ಛತೆಯೇ ಮುಖ್ಯವಾಗಿದ್ದು, ಇದಕ್ಕೆ ತೆರಿಗೆ ವಸೂಲಾತಿ ಅತ್ಯಗತ್ಯವಾಗಿದೆ. ಇಂತಹ ಕಾರ್ಯಕ್ರಮಗಳಿಂದ ನೌಕರರಲ್ಲಿ ಉತ್ಸಾಹ ತುಂಬುತ್ತದೆ. ಯಾವುದೇ ಕೆಲಸ ಮಾಡುವಾಗ ಬೆನ್ನುತಟ್ಟಿ ಪ್ರೋತ್ಸಾಹಿಸಿದರೆ, ಇನ್ನೂ ಹೆಚ್ಚಿನ ಉತ್ಸಾಹದಿಂದ ಕೆಲಸ ಮಾಡಲು ಸಾಧ್ಯ. ನಮ್ಮ ಅಧಿಕಾರಿಗಳು ನಮ್ಮ ಕೆಲಸವನ್ನು ಗುರುತಿಸುತ್ತಿದ್ದಾರೆ ಎಂಬ ಭಾವನೆ ನೌಕರರಲ್ಲಿ ಮೂಡುತ್ತದೆ. ಶಾಲಾ-ಕಾಲೇಜುಗಳಲ್ಲಿ ಪ್ರಾವೀಣ್ಯತೆ ಪ್ರಮಾಣಪತ್ರ ನೀಡುವ ಮಾದರಿಯಲ್ಲಿಯೇ ಇಲ್ಲೂ ಗೌರವಿಸಲಾಗುತ್ತಿದೆ ಎಂದು ತಿಳಿಸಿದರು.
ಸಾರ್ವಜನಿಕರು ತಂದ ಸಮಸ್ಯೆಗಳು ತಮ್ಮ ಇಲಾಖೆಗೆ ಸಂಬಂಧಿಸಿಲ್ಲದಿದ್ದರೂ, ಅದು ಯಾವ ಇಲಾಖೆಗೆ ಸಂಬಂಧಿಸಿದೆ ಮತ್ತು ಆ ಕಚೇರಿ ಎಲ್ಲಿದೆ ಎಂಬ ಸಂಪೂರ್ಣ ಮಾಹಿತಿ ನೀಡಿ ಮಾರ್ಗದರ್ಶನ ಮಾಡಬೇಕು. ಇದು ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯಿತಿ ಅಥವಾ ಜಿಲ್ಲಾಡಳಿತಕ್ಕೆ ಸಂಬಂಧಿಸಿದ್ದೇ ಎಂಬುದನ್ನು ಸಿಬ್ಬಂದಿ ಮೊದಲು ತಿಳಿದುಕೊಂಡಿರಬೇಕು ಎಂದು ತಿಳಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಜನಕಲ್ಯಾಣ ಯೋಜನೆಗಳು, ಸಹಾಯವಾಣಿ ಸಂಖ್ಯೆಗಳು ಹಾಗೂ ಆಂಬ್ಯುಲೆನ್ಸ್ ಸೇರಿದಂತೆ ತುರ್ತು ಸೇವೆಗಳ ಸಂಪೂರ್ಣ ಮಾಹಿತಿಯನ್ನು ಸಾರ್ವಜನಿಕರಿಗೆ ಕಾಣಿಸುವಂತೆ ಪ್ರತಿಯೊಂದು ಕಚೇರಿಯಲ್ಲೂ ಪ್ರದರ್ಶಿಸಬೇಕು ಎಂದು ತಿಳಿಸಿದರು.
ಸಾರ್ವಜನಿಕರಿಂದ ಮುಖ್ಯವಾಗಿ ಇ-ಸ್ವತ್ತು, ಖಾತಾ ಬದಲಿವಣೆ ಹಾಗೂ ತಿದ್ದುಪಡಿಗೆ ಸಂಬಂಧಿಸಿದಂತೆ ಹೆಚ್ಚಿನ ದೂರುಗಳು ಬರುತ್ತಿವೆ. ನಿಗದಿತ ಕಾಲಮಿತಿಯೊಳಗೆ ಇವುಗಳನ್ನು ಇತ್ಯರ್ಥಪಡಿಸಲು ಅಧಿಕಾರಿಗಳು ಮತ್ತು ಸಿಬ್ಬಂದಿ ಕ್ರಮವಹಿಸುವಂತೆ ತಿಳಿಸಿದರು.
ಇದೇ ಸಂದರ್ಭದಲ್ಲಿ ತೆರಿಗೆ ವಸೂಲಾತಿಯಲ್ಲಿ ಉತ್ತಮ ಸಾಧನೆ ಮಾಡಿದ 18 ಮಂದಿ ನೌಕರರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ಅರ್ಹ ಫಲಾನುಭವಿಗಳಿಗೆ ವಿಶೇಷಚೇತನ ಮಕ್ಕಳಿಗೆ ಬ್ರೈಲ್ ಉಪಕರಣಗಳು, ಉದ್ಯೋಗ ಅವಕಾಶಕ್ಕಾಗಿ ಲ್ಯಾಪ್ಟಾಪ್ಗಳು, ಹೊಲಿಗೆ ಯಂತ್ರಗಳು ಹಾಗೂ ಚಲನವಲನದ ನೆರವಿಗಾಗಿ ವ್ಹೀಲ್ ಚೇರ್ ಮತ್ತು ವಿಶೇಷ ವಾಹನಗಳನ್ನು ವಿತರಿಸಿದರು.
- - -
- ಡಾ.ಪ್ರಭಾ ಮಲ್ಲಿಕಾರ್ಜುನ್, ಸಂಸದೆ.
- - --27ಕೆಡಿವಿಜಿ33:
ದಾವಣಗೆರೆಯ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ನಡೆದ ಸ್ವಯಂಘೋಷಿತ ಆಸ್ತಿ ತೆರಿಗೆಯಲ್ಲಿ ಹೆಚ್ಚಿನ ವಸೂಲಾತಿ ಮತು ಪ್ರಗತಿ ಸಾಧಿಸಿರುವ ಅಧಿಕಾರಿ/ ನೌಕರರಿಗೆ ಪ್ರಶಂಸನಾ ಪತ್ರ ನೀಡುವ ಕಾರ್ಯಕ್ರಮವನ್ನು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಉದ್ಪಾಟಿಸಿದರು.