ಶ್ರೀ ಸಂಕಷ್ಟಹರ ಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿ

KannadaprabhaNewsNetwork |  
Published : Sep 07, 2026, 02:00 AM IST
6ಎಚ್ಎಸ್ಎನ್9 :  | Kannada Prabha

ಸಾರಾಂಶ

ಪಿ ಅಂಡ್ ಟಿ ಕಾಲೋನಿಯಲ್ಲಿ 1986ರಲ್ಲಿ ಸ್ಥಾಪನೆಯಾದ ಶ್ರೀ ಸಂಕಷ್ಟಹರ ಗಣಪತಿ ದೇವಸ್ಥಾನವು ಹಲವು ವರ್ಷಗಳಿಂದ ಭಕ್ತರ ಧಾರ್ಮಿಕ ಹಾಗೂ ಆಧ್ಯಾತ್ಮಿಕ ಚಟುವಟಿಕೆಗಳ ಪ್ರಮುಖ ಕೇಂದ್ರವಾಗಿ ಬೆಳೆದುಬಂದಿದೆ. ಕಾಲಕ್ರಮೇಣ ದೇವಸ್ಥಾನದ ಆವರಣ ವಿಸ್ತರಣೆಯಾಗಿದ್ದು, ಶ್ರೀ ಸಂಕಷ್ಟಹರ ಗಣಪತಿ, ಶ್ರೀ ಅಮೃತೇಶ್ವರ, ಶ್ರೀ ಸತ್ಯನಾರಾಯಣ ಸ್ವಾಮಿ, ಶ್ರೀ ಆಂಜನೇಯ ಸ್ವಾಮಿ, ಶ್ರೀ ದುರ್ಗಾಪರಮೇಶ್ವರಿ ಅಮ್ಮನವರು, ಶ್ರೀ ಸುಬ್ರಹ್ಮಣೇಶ್ವರ ಸ್ವಾಮಿ ಹಾಗೂ ನವಗ್ರಹಗಳನ್ನು ಭಕ್ತಿಯಿಂದ ಆರಾಧಿಸಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಹಾಸನ

ನಗರದ ಪಿ ಅಂಡ್ ಟಿ ಕಾಲೋನಿ, ವಿನಾಯಕನಗರದಲ್ಲಿರುವ ಶ್ರೀ ಸಂಕಷ್ಟಹರ ಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಯ ಅಂಗವಾಗಿ ನೂತನ ಕಟ್ಟಡದಲ್ಲಿ ಶ್ರೀ ದೇವರ ಪುನರ್‌ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಸೆ.5 ಮತ್ತು 6ರಂದು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು.

ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಅಭಿವೃದ್ಧಿ ಕಾರ್ಯಗಳ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪುನರ್‌ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಪಿ ಅಂಡ್ ಟಿ ಕಾಲೋನಿಯಲ್ಲಿ 1986ರಲ್ಲಿ ಸ್ಥಾಪನೆಯಾದ ಶ್ರೀ ಸಂಕಷ್ಟಹರ ಗಣಪತಿ ದೇವಸ್ಥಾನವು ಹಲವು ವರ್ಷಗಳಿಂದ ಭಕ್ತರ ಧಾರ್ಮಿಕ ಹಾಗೂ ಆಧ್ಯಾತ್ಮಿಕ ಚಟುವಟಿಕೆಗಳ ಪ್ರಮುಖ ಕೇಂದ್ರವಾಗಿ ಬೆಳೆದುಬಂದಿದೆ. ಕಾಲಕ್ರಮೇಣ ದೇವಸ್ಥಾನದ ಆವರಣ ವಿಸ್ತರಣೆಯಾಗಿದ್ದು, ಶ್ರೀ ಸಂಕಷ್ಟಹರ ಗಣಪತಿ, ಶ್ರೀ ಅಮೃತೇಶ್ವರ, ಶ್ರೀ ಸತ್ಯನಾರಾಯಣ ಸ್ವಾಮಿ, ಶ್ರೀ ಆಂಜನೇಯ ಸ್ವಾಮಿ, ಶ್ರೀ ದುರ್ಗಾಪರಮೇಶ್ವರಿ ಅಮ್ಮನವರು, ಶ್ರೀ ಸುಬ್ರಹ್ಮಣೇಶ್ವರ ಸ್ವಾಮಿ ಹಾಗೂ ನವಗ್ರಹಗಳನ್ನು ಭಕ್ತಿಯಿಂದ ಆರಾಧಿಸಲಾಗುತ್ತಿದೆ.

ಸುಮಾರು ನಾಲ್ಕು ದಶಕಗಳ ಇತಿಹಾಸ ಹೊಂದಿರುವ ದೇವಸ್ಥಾನದ ಮೂಲ ಕಟ್ಟಡ ಹಾಗೂ ಗೋಪುರವು ವರ್ಷಗಳ ಸವಕಳಿಯಿಂದ ಶಿಥಿಲಗೊಂಡ ಹಿನ್ನೆಲೆಯಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ತೀರ್ಮಾನಿಸಲಾಗಿತ್ತು. ದೇವಸ್ಥಾನದ ವಾರ್ಷಿಕ ಸಾಮಾನ್ಯ ಸಭೆಗಳಲ್ಲಿ ಈ ಕುರಿತು ಚರ್ಚಿಸಿ ಕೈಗೊಂಡ ನಿರ್ಣಯಗಳು ಹಾಗೂ ಧಾರ್ಮಿಕ ಮಾರ್ಗದರ್ಶನದ ಹಿನ್ನೆಲೆಯಲ್ಲಿ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ.

ಸುಮಾರು ₹2 ಕೋಟಿ ವೆಚ್ಚದ ಅಂದಾಜು:ದೇವಸ್ಥಾನದ ಜೀರ್ಣೋದ್ಧಾರ, ಅಭಿವೃದ್ಧಿ ಹಾಗೂ ಗುರುಮಂದಿರದ ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಸುಮಾರು ₹2 ಕೋಟಿ ವೆಚ್ಚವಾಗುವ ನಿರೀಕ್ಷೆಯಿದೆ ಎಂದು ಸಮಿತಿ ತಿಳಿಸಿದೆ. ಕಾಮಗಾರಿಗಳಿಗೆ ಭಕ್ತರು ತನು-ಮನ-ಧನದಿಂದ ಸಹಕಾರ ನೀಡಬೇಕು ಎಂದು ಮನವಿ ಮಾಡಲಾಗಿದೆ. ದೇವಸ್ಥಾನದ ನಿರ್ಮಾಣ ಕಾರ್ಯಕ್ಕೆ ಅಗತ್ಯವಿರುವ ಸಾಮಗ್ರಿಗಳನ್ನು ವಸ್ತುರೂಪದಲ್ಲಿ ಅಥವಾ ನಗದು ರೂಪದಲ್ಲಿ ನೀಡುವ ಮೂಲಕವೂ ಭಕ್ತರು ಕೈಜೋಡಿಸಬಹುದು. ದೇವಸ್ಥಾನದ ಅಭಿವೃದ್ಧಿ ಕಾರ್ಯವು ಸಮುದಾಯದ ಹಾಗೂ ಭಕ್ತರ ಸಹಭಾಗಿತ್ವದಿಂದ ಪೂರ್ಣಗೊಳ್ಳಲಿದ್ದು, ಪ್ರತಿಯೊಬ್ಬ ಭಕ್ತರೂ ತಮ್ಮ ಕೈಲಾದ ನೆರವು ನೀಡುವಂತೆ ಸಮಿತಿ ಮನವಿ ಮಾಡಿದೆ.

ಜೀರ್ಣೋದ್ಧಾರ ಕಾರ್ಯದಲ್ಲಿ ಪಾಲ್ಗೊಂಡು ದೇವಸ್ಥಾನದ ಅಭಿವೃದ್ಧಿಗೆ ಸಹಕರಿಸುವುದರಿಂದ ಧಾರ್ಮಿಕ ಕ್ಷೇತ್ರದ ಮತ್ತಷ್ಟು ಪ್ರಗತಿಗೆ ನೆರವಾಗುವುದರ ಜತೆಗೆ ಶ್ರೀ ದೇವರ ಕೃಪೆಗೆ ಪಾತ್ರರಾಗಬಹುದು ಎಂದು ದೇವಸ್ಥಾನದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಜೀರ್ಣೋದ್ಧಾರ ಸಮಿತಿ ಸದಸ್ಯರು ತಿಳಿಸಿದ್ದಾರೆ.ಶ್ರೀ ಸಂಕಷ್ಟಹರ ಗಣಪತಿ ದೇವಸ್ಥಾನ ಸಮಿತಿ, ಪಿ ಅಂಡ್ ಟಿ ಕಾಲೋನಿ, ವಿನಾಯಕನಗರ, ಹಾಸನ ವತಿಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ದೇವಸ್ಥಾನದ ಅಧ್ಯಕ್ಷರು, ಉಪಾಧ್ಯಕ್ಷರು, ಖಜಾಂಚಿ, ನಿರ್ದೇಶಕರು, ಪ್ರಧಾನ ಅರ್ಚಕರು ಹಾಗೂ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರು, ಗೌರವ ಉಪಾಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲೋಕ ಕಲ್ಯಾಣಾರ್ಥ ಕಲ್ಯಾಣೋತ್ಸವ ಪೂಜಾ ಮಹೋತ್ಸವ
ಶಿಕ್ಷಕ ವೃತ್ತಿಗೆ ಸಿಗುವ ಗೌರವ ಮತ್ತ್ಯಾವ ವೃತ್ತಿಗೂ ಸಿಗಲಾರದು