ಕನ್ನಡಪ್ರಭ ವಾರ್ತೆ ಮದ್ದೂರು
ಮದ್ದೂರು ವಿಧಾನಸಭಾ ಕ್ಷೇತ್ರದ ಯಡಗನಹಳ್ಳಿಗೆ ತೆರಳುವ ಮಾರ್ಗ ಮಧ್ಯೆ ಪಟ್ಟಣದ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ನಿವಾಸಕ್ಕೆ ಭೇಟಿ ನೀಡಿ ಮುಖಂಡರು ಮತ್ತು ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಮದ್ದೂರು ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಬಲಿಷ್ಠ ಗೊಳಿಸಬೇಕಾದರೆ ಮೊದಲು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕಿದೆ. ಹೀಗಾಗಿ ಪಕ್ಷದ ತಾಲೂಕು ಘಟಕ, ಮಹಿಳಾ ಘಟಕ, ಯುವ ಘಟಕ ಸೇರಿದಂತೆ ವಿವಿಧ ಘಟಕಗಳ ಪುನರ್ ರಚನೆ ಅಗತ್ಯವಾಗಿದೆ ಎಂದರು.ಮುಖಂಡರು ಮತ್ತು ಕಾರ್ಯಕರ್ತರು ಜೆಡಿಎಸ್ ಪಕ್ಷದ ಅಡಿಪಾಯವಾಗಿದೆ. ಈ ತಿಂಗಳಾಂತ್ಯದಲ್ಲಿ ಸಭೆ ಕರೆದು ಅವರ ಸಲಹೆ ಸೂಚನೆ ಪಡೆದು ಪುನರ್ ರಚನೆ ಮಾಡಲಾಗುವುದು ಎಂದರು.
ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಈ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯೊಂದಿಗೆ ಸ್ಪರ್ಧಿಸಬೇಕೆ ಎಂಬ ಬಗ್ಗೆ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ. ಎಲ್ಲರೂ ತೀರ್ಮಾನಕ್ಕೆ ಬದ್ಧರಾಗಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಮಾತನಾಡಿ, ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಕೇವಲ ಪಕ್ಷದ ನಾಯಕರು ಬಂದಾಗ ಮಾತ್ರ ಹಾರ ತುರಾಯಿ ಹಾಕಿ ಅಭಿನಂದಿಸಿದ ನಂತರ ಮನೆ ಸೇರುವ ಪ್ರವೃತ್ತಿ ಬಿಡಬೇಕು. ಪಕ್ಷದ ಸಂಘಟನೆ ಹೆಚ್ಚು ಒತ್ತು ನೀಡುವ ವ್ಯಕ್ತಿಗಳ ಕಾರ್ಯವೈಖರಿಯನ್ನು ಗುರುತಿಸಿ ಘಟಕಗಳ ಪುನಾರಚನೆ ವೇಳೆ ಆದ್ಯತೆ ನೀಡಲಾಗುವುದು ಎಂದರು.
ಈ ವೇಳೆ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿಳಿಯಪ್ಪ, ಜಿಲ್ಲಾಧ್ಯಕ್ಷ ಡಿ.ರಮೇಶ್, ಕಾರ್ಯಾಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ, ಮುಖಂಡರಾದ ಕೆಸ್ತೂರು ರಾಜಣ್ಣ, ಕೆಂಗಲ್ ಗೌಡ, ಕೆ ರವಿ ಮತ್ತಿತರರಿದ್ದರು.