ಕುಕನೂರು: ಆಡಳಿತದಲ್ಲಿ ಕಾಂಗ್ರೆಸ್ ಹಗರಣಗಳ ಸರಮಾಲೆಯೇ ಇದ್ದು, ನಾಗೇಂದ್ರ ರಾಜೀನಾಮೆ ಜತೆ ವಾಲ್ಮೀಕಿ ನಿಗಮದ ಹಗರಣದ ಹಣ ಸಹ ವಾಪಸ್ಸಾಗಲಿ ಎಂದು ಮಾಜಿ ಸಚಿವ ಹಾಲಪ್ಪ ಆಚಾರ ಆಗ್ರಹಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬ ನಾಗರಿಕನೂ ಪ್ರಾಮಾಣಿಕವಾಗಿ ಮತದಾನದ ಹಕ್ಕು ಚಲಾಯಿಸಬೇಕು ಎಂಬ ಉದ್ದೇಶದಿಂದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಕೈಗೊಂಡಿದ್ದಾರೆ. ನಕಲಿ ಹಾಗೂ ಸುಳ್ಳು ಮತದಾರರ ಹೆಸರು ತೆಗೆದುಹಾಕುವ ಪ್ರಕ್ರಿಯೆಯಲ್ಲಿ ಬಿಎಲ್ಎ–2 ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದೆ. ಇದರಿಂದ ಪರಿಷ್ಕೃತ ಮತದಾರರ ಪಟ್ಟಿ ಸಿದ್ಧವಾಗಲಿದೆ ಎಂದು ಹೇಳಿದರು.
ಜಿಲ್ಲೆ ಈ ಬಾರಿ ತೀವ್ರ ಬರಗಾಲಕ್ಕೆ ತುತ್ತಾಗಿದ್ದರೂ ಕ್ಷೇತ್ರದ ಶಾಸಕರು ಸಾರ್ವಜನಿಕರ ಸಂಕಷ್ಟ ನಿರ್ಲಕ್ಷಿಸಿದ್ದಾರೆ. ಬಿಜೆಪಿ ಆಡಳಿತದ ಅವಧಿಯಲ್ಲಿ ಕ್ಷೇತ್ರದ ಕೆರೆಗಳನ್ನು ತುಂಬಿಸಿ ರೈತರ ಹಿತ ಕಾಪಾಡಲಾಗಿತ್ತು. ಆದರೆ ಪಕ್ಕದ ಬೇಣಕಲ್ ಕೆರೆಗೆ ನೀರು ಹರಿಸುವ ಸಣ್ಣ ಕೆಲಸ ಈಗಿನ ಸರ್ಕಾರಕ್ಕೆ ಮಾಡಲು ಸಾಧ್ಯವಾಗಿಲ್ಲ ಎಂದು ದೂರಿದರು.ಕ್ಷೇತ್ರದ ಜನರು ತಮ್ಮ ಹಕ್ಕನ್ನು ಕೇಳಬೇಕು. ಮುಂಬರುವ ದಿನಗಳಲ್ಲಿ ಜನರೇ ಕಾಂಗ್ರೆಸ್ಗೆ ತಕ್ಕ ಉತ್ತರ ನೀಡಲಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನಾಯಕತ್ವದಲ್ಲಿ ನಡೆಯುತ್ತಿರುವ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಲಾಗುವುದು ಎಂದು ಹೇಳಿದರು.