ಹಾವೇರಿ: ಎರಡು ವರ್ಷಗಳ ಹಿಂದೆ ಆರಂಭಿಸಿದ ಹಾವೇರಿ ವಿಶ್ವ ವಿದ್ಯಾಲಯ ಮುಚ್ಚಲು ಪ್ರಸ್ತುತ ರಾಜ್ಯ ಸರ್ಕಾರದ ಸಚಿವ ಸಂಪುಟ ಉಪಸಮಿತಿ ತೀರ್ಮಾನಿಸಿದ್ದು, ಈ ತೀರ್ಮಾನ ಕೈಬಿಟ್ಟು ಯಥಾಸ್ಥಿತಿಯಲ್ಲಿ ವಿಶ್ವ ವಿದ್ಯಾಲಯವನ್ನು ಉಳಿಸಿ ಅಭಿವೃದ್ಧಿಪಡಿಸಬೇಕು ಎಂದು ಶಾಸಕ ಬಸವರಾಜ ಶಿವಣ್ಣನವರ ಅವರಿಗೆ ಹಾವೇರಿ ವಿಶ್ವವಿದ್ಯಾಲಯ ಉಳಿಸಿ ಹೋರಾಟ ಸಮಿತಿ ಸದಸ್ಯರು ಮನವಿ ಸಲ್ಲಿಸಿದರು.
ಶಾಸಕ ಬಸವರಾಜ ಶಿವಣ್ಣನವರ ಮನವಿ ಸ್ವೀಕರಿಸಿ ಮಾತನಾಡಿ, ಹಾವೇರಿ ವಿವಿ ಉಳಿಸಲು ಸರ್ಕಾರದ ಮಟ್ಟದಲ್ಲಿ ಅಗತ್ಯ ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿದರು.
ಆನಂತರ ಹಾವೇರಿ ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ, ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ, ನಗರಸಭೆ ಮಾಜಿ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಅವರಿಗೆ ಹಾವೇರಿ ವಿಶ್ವವಿದ್ಯಾಲಯ ಉಳಿಸುವ ಭಾಗವಾಗಿ ನಗರಸಭೆಯಿಂದ ಠರಾವು ಪಾಸ್ ಮಾಡಲು ವಿನಂತಿಸಲಾಯಿತು. ಇದಕ್ಕೆ ಸೂಕ್ತವಾಗಿ ಸ್ಪಂದಿಸಿದ ಅವರು ಠರಾವ್ ಪಾಸು ಮಾಡಲಾಗುವುದು ಎಂದರಲ್ಲದೇ, ಹಾವೇರಿ ವಿಶ್ವ ವಿದ್ಯಾಲಯದ ಉಳಿವಿಗಾಗಿ ನಡೆಯುವ ಹೋರಾಟಕ್ಕೆ ಕೈಜೋಡಿಸುವುದಾಗಿ ಭರವಸೆ ನೀಡಿದರು.ಹೋರಾಟ ಸಮಿತಿಯ ಸಂಚಾಲಕ ಹಾಗೂ ಸದಸ್ಯರಾದ ಬಸವರಾಜ ಪೂಜಾರ, ಸತೀಶ ಕುಲಕರ್ಣಿ, ಪರಿಮಳಾ ಜೈನ, ಸತೀಶ ಎಂ.ಬಿ., ನೇತ್ರಾ ಅಂಗಡಿ, ರೇಣುಕಾ ಗುಡಿಮನಿ, ಜುಬೇದಾ ನಾಯಕ್, ಬಸವರಾಜ ಎಸ್., ಉಡಚಪ್ಪ ಮಾಳಗಿ, ಪೃಥ್ವಿರಾಜ ಬೆಟಗೇರಿ, ಎಂ. ಆಂಜನೇಯ, ರಾಜೇಂದ್ರ ಹೆಗಡೆ, ಮಾಲತೇಶ ಕರ್ಜಗಿ ಇನ್ನಿತರರು ಉಪಸ್ಥಿತರಿದ್ದರು.