ರಾಮನಗರ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲಿನ ಗುಂಡಿನ ದಾಳಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ ಐದು ತನಿಖಾ ತಂಡಗಳನ್ನು ರಚಿಸಿದ್ದು, ತನಿಖೆಯನ್ನು ಚುರುಕುಗೊಳಿಸಿದೆ.1ನೇ ತಂಡ ಶಾರ್ಪ್ ಶೂಟರ್ಸ್ ಬಂದಿದ್ದ ರಸ್ತೆಯ ಸಿಸಿಟಿವಿ ಪರಿಶೀಲನೆಯಲ್ಲಿದ್ದರೆ, 2ನೇ ತಂಡ ಬಿಡದಿ ರಿಕ್ಕಿ ರೈ ಫಾರ್ಮ್ ಹೌಸ್ ಬಳಿ ಸಿಡಿಆರ್ ಸಂಗ್ರಹದಲ್ಲಿ ತೊಡಗಿದೆ. 3ನೇ ತಂಡ ರಿಕ್ಕಿ ರೈ ಮೇಲೆ ಹಳೇ ದ್ವೇಷ ಇರುವವರನ್ನು ಪತ್ತೆ ಮಾಡುತ್ತಿದ್ದರೆ, 4ನೇ ತಂಡ ರಿಕ್ಕಿ ರೈ ಕುಟುಂಬಸ್ಥರ ಬಳಿ ಮಾಹಿತಿ ಕಲೆ ಹಾಕುತ್ತಿದೆ. ಇನ್ನು 5ನೇ ತಂಡ ಸ್ಥಳದಲ್ಲಿ ಬೀಡು ಬಿಟ್ಟು ಮಾನಿಟರಿಂಗ್ ಮಾಡುತ್ತಿದೆ.
ಭದ್ರಕೋಟೆಯಂತೆ ಇರುವ ಮುತ್ತಪ್ಪ ರೈ ಅವರ ಮನೆಯಿಂದ ಹೊರಬರುತ್ತಿದ್ದಂತೆ ರಸ್ತೆಯಲ್ಲಿ ಕಾರಿನ ಮೇಲೆ ಅಟ್ಯಾಕ್ ನಡೆದಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಈ ಫೈರಿಂಗ್ ಹಿಂದೆ ಭೂಗತ ಲೋಕದ ಕೈವಾಡ ಇರುವ ಶಂಕೆ ಕೂಡ ವ್ಯಕ್ತವಾಗಿದೆ. ತಂದೆಯ ಮೇಲಿನ ದ್ವೇಷ, ರಿಕ್ಕಿಯ ವೈಯಕ್ತಿಕ ದ್ವೇಷಕ್ಕೆ ಫೈರಿಂಗ್ ನಡೆದಿರುವ ಅನುಮಾನಗಳು ಹುಟ್ಟಿಕೊಂಡಿವೆ.
ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆಯಾಮಗಳಲ್ಲಿ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಮನೆ ಸಿಬ್ಬಂದಿ, ಆಪ್ತರಿಂದ ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದಾರೆ. ರಿಕ್ಕಿ ರೈ ವಿದೇಶದಿಂದ ಬಂದಿದ್ದು ಯಾವಾಗ, ವ್ಯವಹಾರಗಳೇನು? ಇತ್ತೀಚೆಗೆ ಯಾವುದಾದರೂ ವ್ಯವಹಾರದಲ್ಲಿ ಗಲಾಟೆ ಆಗಿತ್ತಾ? ರಾಮನಗರ ತಾಲೂಕು ಬಿಡದಿ ಹೋಬಳಿ ಕರಿಯಪ್ಪನದೊಡ್ಡಿಯಲ್ಲಿರುವ ಮನೆಯಲ್ಲಿ ಯಾರ್ಯಾರು ಇದ್ದಾರೆ? ರಿಕ್ಕಿ ಮನೆಗೆ ಹೊಸದಾಗಿ ಯಾರಾದರು ಕೆಲಸಕ್ಕೆ ಸೇರಿಕೊಂಡಿದ್ದಾರಾ? ಹಳೇ ದ್ವೇಷ, ಅಸ್ತಿ ವಿವಾದ, ವ್ಯವಹಾರ ಕುರಿತು ಪೊಲೀಸರು ತನಿಖೆ ಶುರು ಮಾಡಿದ್ದಾರೆ.ಮಾಜಿ ಡಾನ್ ಮುತ್ತಪ್ಪ ರೈ ಸಾವಿನ ಬಳಿಕ ಆಸ್ತಿ ವಿಚಾರ ವ್ಯಾಜ್ಯವಿತ್ತು. ಮೊದಲ ಪತ್ನಿ ಮಕ್ಕಳು ಹಾಗೂ 2ನೇ ಪತ್ನಿ ನಡುವೆ ಆಸ್ತಿ ವಿಚಾರಕ್ಕೆ ವ್ಯಾಜ್ಯವಿತ್ತು. ಹೀಗಾಗಿ ಆಸ್ತಿ ಭಾಗದ ವಿಚಾರವಾಗಿ ಕುಟುಂಬ ಕೋರ್ಟ್ ಮೆಟ್ಟಿಲೇರಿತ್ತು. ಮುತ್ತಪ್ಪ ರೈ ಸಾವಿಗೂ ಮುನ್ನ, ಇಬ್ಬರು ಮಕ್ಕಳು, ಸಹೋದರನ ಮಗ, 2ನೇ ಪತ್ನಿ, ಮನೆ ಕೆಲಸಗಾರರು ಸೇರಿ ಎಲ್ಲರಿಗೂ ಆಸ್ತಿ ಭಾಗ ಮಾಡಿ ವಿಲ್ ಬರೆಸಲಾಗಿತ್ತು. ಸದ್ಯ ಎಲ್ಲಾ ಆಯಾಮಗಳಲ್ಲೂ ಬಿಡದಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪೊಲೀಸರು ಬಿಡದಿ ಠಾಣೆಗೆ ಕರೆತಂದು ರಿಕ್ಕಿ ರೈ ಸ್ನೇಹಿತ ಫರನ್ ಅಲಿ ಎಂಬುವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ವಿಚಾರಣೆ ನಡೆಸಿದ್ದಾರೆ. ಅಲ್ಲದೆ, ಆತನ ಮೊಬೈಲ್ ಕೂಡ ಪರಿಶೀಲನೆ ಮಾಡಿದ್ದಾರೆ. ಈತ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿರುವಾಗ ರಿಕ್ಕಿ ರೈ ಜೊತೆಯಲ್ಲಿ ಇದ್ದನು.
ಮುತ್ತಪ್ಪ ರೈ ಮೇಲಿನ ದ್ವೇಷ ರಿಕ್ಕಿ ರೈ ಮೇಲಿರಬಹುದು: ಪ್ರಕಾಶ್ ರೈ
ಮುತ್ತಪ್ಪ ರೈ ಮೇಲಿನ ದ್ವೇಷ ಮಗನ ಮೇಲೂ ಇರುವ ಸಾಧ್ಯತೆ ಇದೆ. ಯಾರೋ ಟಾರ್ಗೆಟ್ ಮಾಡಿ ರಿಕ್ಕಿ ರೈ ಹತ್ಯೆಗೆ ಸ್ಕೆಚ್ ಹಾಕಿದ್ದಾರೆ ಎಂದು ಮುತ್ತಪ್ಪ ರೈ ಸಂಬಂಧಿ ಪ್ರಕಾಶ್ ರೈ ಶಂಕೆ ವ್ಯಕ್ತಪಡಿಸಿದ್ದಾರೆ.
ಮುತ್ತಪ್ಪ ರೈ ಇದ್ದಾಗಲೇ ರಿಕ್ಕಿ ಮೊದಲ ಪತ್ನಿಯಿಂದ ಡೈವರ್ಸ್ ಆಗಿತ್ತು. 2ನೇ ಪತ್ನಿ ವಿದೇಶದವರು, ಅವರು ಮಗು ಜತೆ ವಿದೇಶದಲ್ಲಿದ್ದಾರೆ. ರಿಕ್ಕಿ ರೈ ಕೂಡ ಹೆಚ್ಚಿನ ಸಮಯ ವಿದೇಶದಲ್ಲೇ ಕಳೆಯುತ್ತಿದ್ದರು ಎಂದು ಹೇಳಿದರು.
ಮೊಬೈಲ್ ಮತ್ತು ಬುಲೆಟ್ ಶೆಲ್ ಪತ್ತೆ
ಕೋಟ್ ...............
ರಿಕ್ಕಿ ರೈ ಹೇಳಿಕೆ ಪಡೆದು ತನಿಖೆ ಮುಂದುವರೆಸುತ್ತೇವೆ. ಘಟನಾ ಸ್ಥಳದಲ್ಲಿ ಸಿಕ್ಕ ಸಾಕ್ಷ್ಯಗಳನ್ನು ಪರಿಶೀಲಿಸುತ್ತಿದ್ದು, ಯಾವ ಗನ್ನಿಂದ ಫೈರಿಂಗ್ ಆಗಿದೆ ಅಂತ ತನಿಖೆ ಮಾಡುತ್ತಿದ್ದೇವೆ. ರಿಕ್ಕಿ ರೈ ಹೆಚ್ಚಾಗಿ ಹೊರದೇಶದಲ್ಲಿ ಇರುತ್ತಾರೆ. ಯಾವುದೋ ಕೋರ್ಟ್ ಕೇಸ್ ಅಟೆಂಡ್ ಮಾಡಲು ಬಂದಿದ್ದರು. ನಿನ್ನೆ ಬಿಡದಿ ನಿವಾಸಕ್ಕೆ ಬಂದು ವಾಪಸ್ ಹೋಗುವಾಗ ಅಟ್ಯಾಕ್ ಆಗಿದೆ. ರಿಕ್ಕಿ ರೈ ಜೊತೆ ಡ್ರೈವರ್, ಗನ್ ಮ್ಯಾನ್ ಇದ್ದರು. ಸಿವಿಲ್ ಡಿಸ್ಬೂಟ್ ರಿಲೇಟೆಡ್ ಕೆಲವರ ಮೇಲೆ ಅನುಮಾನ ವ್ಯಕ್ತಪಡಿಸಿ ಚಾಲಕ ದೂರು ನೀಡಿದ್ದಾನೆ. ಭೂಗತ ಲೋಕದ ನಂಟಿನ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಘಟನೆ ಸಂಬಂಧ ಯಾರನ್ನೂ ವಶಕ್ಕೆ ಪಡೆದಿಲ್ಲ. ಸದ್ಯಕ್ಕೆ ಐದು ತಂಡ ರಚಿಸಿ, ಆರೋಪಿ ಪತ್ತೆಗೆ ತನಿಖೆ ಮುಂದುವರಿಸಿದ್ದೇವೆ.- ಶ್ರೀನಿವಾಸ್ ಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ರಾಮನಗರ