ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಪರಿಸರ ಸಂಘಟನೆಗಳ ಪ್ರಮುಖರು ಮುಖ್ಯಮಂತ್ರಿ ಜೊತೆ ವಿಶೇಷ ಸಮಾಲೋಚನೆ
ಬೇಡ್ತಿ ಮತ್ತು ಅಘನಾಶಿನಿ ಕಣಿವೆಗಳ ನದಿ ತಿರುವು ಯೋಜನೆಗಳನ್ನು ರಾಜ್ಯ ಸರ್ಕಾರ ಕೈಬಿಡಬೇಕು. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ನೀಡಿರುವ ಅನುಮತಿ ಹಿಂಪಡೆಯಬೇಕು ಎಂದು ಒತ್ತಾಯಿಸಿ ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.
ಬೆಂಗಳೂರಿನ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಪರಿಸರ ಸಂಘಟನೆಗಳ ಪ್ರಮುಖರು ಮುಖ್ಯಮಂತ್ರಿ ಜೊತೆ ವಿಶೇಷ ಸಮಾಲೋಚನೆ ನಡೆಸಿ ಪಶ್ಚಿಮಘಟ್ಟದ ಸಂರಕ್ಷಣೆಗೆ ಒತ್ತಾಯ ಮಾಡಿದರು.ಈ ಸಂದರ್ಭ ಮಾತನಾಡಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಉತ್ತರ ಕನ್ನಡ ಜಿಲ್ಲೆ ಈಗಾಗಲೇ ಹತ್ತಾರು ಬೃಹತ್ ಯೋಜನೆಗಳ ಭಯದಿಂದ ನಲುಗಿ ಹೋಗಿದೆ. ಪರಿಸರ ಧಾರಣ ಸಾಮರ್ಥ್ಯ ಮುಗಿದಿದೆ. ಬೇಡ್ತಿ-ಅಘನಾಶಿನಿ-ಶರಾವತಿ ಯೋಜನೆಗಳು ಜಾರಿಯಾದರೆ ಭಾರೀ ಅವಘಡಗಳು ನಡೆಯುವ ಗಂಭೀರ ಪರಿಸ್ಥಿತಿ ಉಂಟಾಗಲಿದೆ ಎಂದು ಹೇಳಿದರು.
ಶಾಸಕ ಭೀಮಣ್ಣ ನಾಯ್ಕ, ಈ ಯೋಜನೆಯಿಂದ ಬೇಡ್ತಿ-ಅಘನಾಶಿನಿ-ಶರಾವತಿ ನದಿಗಳಲ್ಲಿ ನೀರೇ ಇಲ್ಲದ ಪರಿಸ್ಥಿತಿ ಬರಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಬೇಡ್ತಿ-ಅಘನಾಶಿನಿ ಸಮಿತಿಯ ಅಧ್ಯಕ್ಷ ಅನಂತ ಹೆಗಡೆ ಅಶೀಸರ, ಪಶ್ಚಿಮಘಟ್ಟದಲ್ಲಿ ಬೇಡ್ತಿ - ಅಘನಾಶಿನಿ - ಶರಾವತಿ ನದಿ ಯೋಜನೆಗಳನ್ನು ಸ್ಥಗಿತಗೊಳಿಸಿ, ವಿಜ್ಞಾನಿಗಳು, ಜನಪ್ರತಿನಿಧಿಗಳು ಸಂಘಟನೆಗಳ ಜೊತೆ ವಿಶೇಷ ಪುನಃ ವಿಮರ್ಶೆ ಮಾಡಬೇಕೆಂದು ಮನವಿ ಮಾಡಿದರು.
ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಬೇಡ್ತಿ-ಅಘನಾಶಿನಿ-ಶರಾವತಿ ಯೋಜನೆಗಳ ಕುರಿತು ಸಂಬಂಧಿಸಿದ ಇಲಾಖೆಗಳ ಜೊತೆ ಚರ್ಚಿಸಿ ತಮ್ಮೆಲ್ಲರ ಜೊತೆಗೆ, ವಿಜ್ಞಾನಿಗಳೊಂದಿಗೆ ಸಭೆ ಏರ್ಪಡಿಸುವುದಾಗಿ ಭರವಸೆ ನೀಡಿದರು.