ಹಾವೇರಿ ಜಿಲ್ಲೆಯಲ್ಲಿ ಮಳೆಯಿಲ್ಲದಿದ್ದರೂ ತುಂಬಿ ಹರಿಯುತ್ತಿರುವ ನದಿಗಳು

KannadaprabhaNewsNetwork |  
Published : Aug 08, 2026, 02:15 AM IST
ತುಂಗಭದ್ರಾ ನದಿ ತುಂಬಿ ಹರಿಯುತ್ತಿರುವುದರಿಂದ ರಾಣಿಬೆನ್ನೂರು ತಾಲೂಕಿನ ಚೌಡಯ್ಯದಾನಪುರದಲ್ಲಿರುವ ಚೌಡಯ್ಯನವರ ಐಕ್ಯ ಮಂಟಪ ಭಾಗಶಃ ಮುಳುಗಿರುವುದು. | Kannada Prabha

ಸಾರಾಂಶ

ಹಾವೇರಿ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಗಣನೀಯ ಮಳೆಯಾಗದಿದ್ದರೂ ಜಿಲ್ಲೆಯ ಪ್ರಮುಖ ನದಿಗಳಾದ ವರದಾ, ತುಂಗಭದ್ರಾ, ಧರ್ಮಾ ಹಾಗೂ ಕುಮದ್ವತಿ ನದಿಗಳು ತುಂಬಿ ಹರಿಯುತ್ತಿರುವ ದೃಶ್ಯ ಜನರಲ್ಲಿ ಸಂತಸ ಮೂಡಿಸಿದೆ.

ಹಾವೇರಿ: ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಗಣನೀಯ ಮಳೆಯಾಗದಿದ್ದರೂ ಜಿಲ್ಲೆಯ ಪ್ರಮುಖ ನದಿಗಳಾದ ವರದಾ, ತುಂಗಭದ್ರಾ, ಧರ್ಮಾ ಹಾಗೂ ಕುಮದ್ವತಿ ನದಿಗಳು ತುಂಬಿ ಹರಿಯುತ್ತಿರುವ ದೃಶ್ಯ ಜನರಲ್ಲಿ ಸಂತಸ ಮೂಡಿಸಿದೆ.

ಜಿಲ್ಲೆಯ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆಯಿದ್ದರೂ, ನದಿಗಳ ಮೇಲ್ಭಾಗದ ಪ್ರದೇಶಗಳಲ್ಲಿ ಸುರಿದ ಮಳೆಯ ಪರಿಣಾಮವಾಗಿ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮಘಟ್ಟ ಪ್ರದೇಶ ಹಾಗೂ ಶಿವಮೊಗ್ಗ, ದಾವಣಗೆರೆ ಭಾಗಗಳಲ್ಲಿ ಸುರಿದ ನಿರಂತರ ಮಳೆ ನದಿಗಳಿಗೆ ಜೀವ ತುಂಬಿದೆ. ಅದರ ಪರಿಣಾಮವಾಗಿ ಜಿಲ್ಲೆಯ ಮೂಲಕ ಹರಿಯುವ ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ. ನದಿ ತೀರದ ಗ್ರಾಮಗಳಲ್ಲಿ ಹಲವು ತಿಂಗಳ ಬಳಿಕ ಮತ್ತೆ ಜಲಧಾರೆ ಕಂಡು ರೈತರಲ್ಲಿ ಹೊಸ ಭರವಸೆ ಮೂಡಿದೆ.

ಮುಂಗಾರು ಹಂಗಾಮಿನಲ್ಲಿ ಮಳೆಯಿಲ್ಲದೇ ಬೆಳೆ ಒಣಗುವ ಸ್ಥಿತಿಯಿಂದ ಕಂಗೆಟ್ಟಿದ್ದ ರೈತರಿಗೆ ಈ ಬೆಳವಣಿಗೆ ಆಶಾದಾಯಕವಾಗಿದೆ. ನದಿಗಳ ಹರಿವು ಹೆಚ್ಚಿದರೆ ಅಂತರ್ಜಲ ಮಟ್ಟ ಏರಿಕೆಯಾಗುವುದರ ಜೊತೆಗೆ ಕೆರೆ-ಕಟ್ಟೆಗಳಿಗೂ ನೀರು ಸೇರುವ ಸಾಧ್ಯತೆ ಇದೆ. ಇದರಿಂದ ಮುಂದಿನ ದಿನಗಳಲ್ಲಿ ಕೃಷಿ ಹಾಗೂ ಕುಡಿಯುವ ನೀರಿನ ಸಮಸ್ಯೆ ಸ್ವಲ್ಪ ಮಟ್ಟಿಗೆ ಪರಿಹಾರವಾಗುವ ನಿರೀಕ್ಷೆ ವ್ಯಕ್ತವಾಗಿದೆ. ಜಲಾವೃತಗೊಂಡಿದ್ದ ಕಳಸೂರು ಸೇತುವೆ ಗುರುವಾರ ಸಂಚಾರಕ್ಕೆ ತೆರವಾಗಿದೆ. ತುಂಗಭದ್ರಾ ನದಿಯ ನೀರಿನ ಮಟ್ಟ ಏರಿದ್ದರಿಂದ ಅಂಬಿಗರ ಚೌಡಯ್ಯನವರ ಐಕ್ಯ ಮಂಟಪ ಮುಳುಗಿದೆ. ಇದು ಜಿಲ್ಲೆಯಲ್ಲಿ ಬರಿದಾಗಿರುವ ಕೆರೆಗಳನ್ನು ಭರ್ತಿ ಮಾಡಲು ಸಕಾಲವಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಈಗಲೇ ಎಚ್ಚೆತ್ತುಕೊಂಡು ಕೆರೆ ತುಂಬಿಸಲು ಕ್ರಮ ಕೈಗೊಳ್ಳಬೇಕಿದೆ.

ವರದಾ, ತುಂಗಭದ್ರಾ, ಧರ್ಮಾ ಹಾಗೂ ಕುಮದ್ವತಿ ನದಿಗಳ ಉಕ್ಕಿ ಹರಿಯುವ ದೃಶ್ಯವನ್ನು ವೀಕ್ಷಿಸಲು ಜನರು ಸೇತುವೆಗಳು ಮತ್ತು ನದಿ ತೀರಗಳಿಗೆ ಆಗಮಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಈ ದೃಶ್ಯಗಳು ವ್ಯಾಪಕವಾಗಿ ಹರಿದಾಡುತ್ತಿವೆ.

ಆದರೆ ನದಿಗಳಲ್ಲಿ ಹರಿವು ಹೆಚ್ಚಿರುವ ಕಾರಣ ಜನರು ಅನಗತ್ಯವಾಗಿ ನೀರಿಗೆ ಇಳಿಯದಂತೆ ಹಾಗೂ ಸೇತುವೆಗಳ ಮೇಲೆ ಅಪಾಯಕಾರಿಯಾಗಿ ನಿಂತು ಛಾಯಾಚಿತ್ರ ಅಥವಾ ಸೆಲ್ಫಿ ತೆಗೆಯದಂತೆ ಎಚ್ಚರಿಕೆ ವಹಿಸಬೇಕಿದೆ. ಪೋಷಕರು ಮಕ್ಕಳ ಮೇಲೆ ವಿಶೇಷ ನಿಗಾ ವಹಿಸುವ ಅಗತ್ಯವೂ ಇದೆ.

ಕೋಡಿ ಬಿದ್ದ ಮದಗ–ಮಾಸೂರು ಕೆರೆ: ಇತ್ತೀಚಿನ ಮಳೆಯ ಪರಿಣಾಮ ರಟ್ಟಿಹಳ್ಳಿ ತಾಲೂಕಿನ ಪ್ರಮುಖ ಜಲಮೂಲವಾಗಿರುವ ಮದಗ–ಮಾಸೂರು ಕೆರೆ ತುಂಬಿ ಕೋಡಿ ಬಿದ್ದಿದೆ. ಕೆರೆಯ ಕೋಡಿ ಮೂಲಕ ನೀರು ಭೋರ್ಗರೆಯುತ್ತ ಹರಿಯುತ್ತಿರುವ ದೃಶ್ಯ ಮನಮೋಹಕವಾಗಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ.

ಕಳೆದ ಕೆಲ ದಿನಗಳಿಂದ ಸುರಿದ ಮಳೆ ಹಾಗೂ ಕೆರೆ ವ್ಯಾಪ್ತಿಯಲ್ಲಿ ಹರಿದು ಬಂದ ನೀರಿನ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಕೆರೆ ಸಂಪೂರ್ಣ ಭರ್ತಿಯಾದ ಬಳಿಕ ಹೆಚ್ಚುವರಿ ನೀರು ಕೋಡಿ ಮೂಲಕ ಹೊರಹರಿಯುತ್ತಿದೆ. ನೀರು ರಭಸವಾಗಿ ಹರಿಯುವ ಜಲವೈಭವದ ದೃಶ್ಯ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗುತ್ತಿಗೆ ಉದ್ಯೋಗಕ್ಕಾಗಿ ಹರಿದು ಬಂದ ಉದ್ಯೋಗಾಕಾಂಕ್ಷಿಗಳು
ಮೊಬೈಲ್ ದುರ್ಬಳಕೆಯಿಂದ ಹಾಳಾಗಬೇಡಿ