ರಸ್ತೆ ಅಪಘಾತ: ಮೂವರ ದುರ್ಮರಣ

KannadaprabhaNewsNetwork |  
Published : Aug 12, 2024, 12:45 AM IST
ಫೋಟೋ 5 : ಕುಲುವನಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ೪೮ರಲ್ಲಿ ಅಪಘಾತವಾಗಿರುವುದು | Kannada Prabha

ಸಾರಾಂಶ

ದಾಬಸ್‌ಪೇಟೆ: ಕ್ಯಾಂಟರ್ ಲಾರಿ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರು ಪ್ರಯಾಣಿಸುತ್ತಿದ್ದ 407 ಟೆಂಪೋ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟು, ನಾಲ್ವರ ಸ್ಥಿತಿ ಗಂಭೀರವಾಗಿರುವ ದುರ್ಘಟನೆ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-೪೮ರ ಕುಲುವನಹಳ್ಳಿ ಬಳಿ ಸಂಭವಿಸಿದೆ.

ದಾಬಸ್‌ಪೇಟೆ: ಕ್ಯಾಂಟರ್ ಲಾರಿ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರು ಪ್ರಯಾಣಿಸುತ್ತಿದ್ದ 407 ಟೆಂಪೋ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟು, ನಾಲ್ವರ ಸ್ಥಿತಿ ಗಂಭೀರವಾಗಿರುವ ದುರ್ಘಟನೆ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-೪೮ರ ಕುಲುವನಹಳ್ಳಿ ಬಳಿ ಸಂಭವಿಸಿದೆ.

ಯಾದಗಿರಿ ಮೂಲದ ನರಸಪ್ಪ(35), ಹುಸೇನಪ್ಪ(34), ರಸ್ತೆ ದಾಟಲು ನಿಂತಿದ್ದ ತುಮಕೂರು ಜಿಲ್ಲೆಯ ಸೀತಕಲ್ಲು ಗ್ರಾಮದ ಶಿವಗಂಗಪ್ಪ(55) ಮೃತಪಟ್ಟ ದುರ್ದೈವಿಗಳು.

ಕಾರ್ಮಿಕರಾದ ಸಾಬಣ್ಣ, ಕಟ್ಟಪ್ಪ, ಬಂಗಾರಪ್ಪಗೆ ಗಂಭೀರ ಗಾಯಾಳುಗಳಾಗಿದ್ದು, ಯಾದಗಿರಿ ಮೂಲದ ಲಕ್ಷ್ಮೀ, ಅನಂತಪ್ಪ, ಭಾನುಪ್ರಿಯ, ನಾಗರಾಜು ಮತ್ತು 3-4 ಮಂದಿ ಮಕ್ಕಳು ವಾಹನದಲ್ಲಿದ್ದವರು.

ಭಾನುವಾರ ಸಂಜೆ 5.30ರಲ್ಲಿ ತ್ಯಾಮಗೊಂಡ್ಲು ಕಡೆಯಿಂದ ಬಂದ ಮೋಲ್ಡ್ ಹಾಕುವ ಟೆಂಪೋ ಕಾಂಕ್ರೀಟ್ ಕಲಬೆರಕೆ ಮಾಡುವ ಟ್ರ್ಯಾಲಿ ರಾಷ್ಟ್ರೀಯ ಹೆದ್ದಾರಿಗೆ ಬಂದ ಕೂಡಲೇ ತುಮಕೂರು ಕಡೆಯಿಂದ ಬಂದ ಕ್ಯಾಂಟರ್‌ಗೆ ಡಿಕ್ಕಿ ಹೊಡೆದಿದೆ.

ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿ: 15ಕ್ಕೂ ಅಧಿಕ ಕಟ್ಟಡ ಕಾರ್ಮಿಕರು ಮತ್ತು ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ತುಂಬಿಕೊಂಡು ಬಂದ 407 ಟೆಂಪೋ ಅಪಘಾತದಲ್ಲಿ ಕಾರ್ಮಿಕರು ಮತ್ತು ಸಾಮಗ್ರಿಗಳು ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿತ್ತು, ಕ್ರೇನ್ ಮೂಲಕ ಡಿಕ್ಕಿಗೆ ಒಳಗಾಗಿದ್ದ ವಾಹನಗಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಅಪಘಾತ ವಲಯ: ರಾಷ್ಟ್ರೀಯ ಹೆದ್ದಾರಿ ೪೮ರ ಕುಲುವನಹಳ್ಳಿ ಬಸ್‌ ನಿಲ್ದಾಣದ ಬಳಿ, ಇಳಿಜಾರು ಪ್ರದೇಶ ಹಾಗೂ ವಾರಂತ್ಯದಲ್ಲಿ ಅಧಿಕ ವಾಹನ ದಟ್ಟಣೆ, ಅತಿಯಾದ ವೇಗ, ಹೆದ್ದಾರಿ ದುರಸ್ತಿಯಿಂದ ಪದೇಪದೇ ಅಪಘಾತಗಳು ಸಂಭವಿಸುತ್ತಿವೆ. ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

10 ಕಿ.ಮೀ ಟ್ರಾಫಿಕ್ ಜಾಂ:

ವಾರಂತ್ಯದಲ್ಲಿ ಅಧಿಕ ವಾಹನ ದಟ್ಟಣೆ ಹಾಗೂ ಪರಊರುಗಳಿಂದ ರಾಜಧಾನಿ ಬೆಂಗಳೂರಿಗೆ ಬರುವವರ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಪ್ರತಿ ವಾರಂತ್ಯದಲ್ಲಿ ಟ್ರಾಫಿಕ್ ದಟ್ಟಣೆ, ವಾಹನಗಳ ಸಂಖ್ಯೆ ಹೆಚ್ಚಳದಿಂದ ಅಪಘಾತಗಳೂ ಹೆಚ್ಚಿದೆ. ಅಪಘಾತದ ಬಳಿಕ 10 ಕಿಮೀವರೆಗೂ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸಂಚಾರ ಪೊಲೀಸರು ಟ್ರಾಫಿಕ್ ನಿಯಂತ್ರಿಸಲು ಹರಸಾಹಸಪಟ್ಟರು.

ಪೊಲೀಸ್ ವಾಹನದಲ್ಲೇ ಗಾಯಾಳು ಆಸ್ಪತ್ರೆಗೆ: ಅಪಘಾತದಲ್ಲಿ ಕ್ಯಾಂಟರ್ ಚಾಲಕನಿಗೆ ಗಂಭೀರ ಗಾಯವಾಗಿದ್ದು, ವಾಹನದಿಂದ ಹೊರಗೆ ಬರಲು ಸಾಧ್ಯವಾಗದಿದ್ದಾಗ ಸ್ಥಳದಲ್ಲೇ ಇದ್ದ ಪೊಲೀಸರು, ಪೊಲೀಸ್ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು.

ಘಟನಾ ಸ್ಥಳಕ್ಕೆ ಬೆಂ.ಗ್ರಾ. ಜಿಲ್ಲಾ ಎಎಸ್ಪಿ ನಾಗೇಶ್ ಕುಮಾರ್, ನೆಲಮಂಗಲ ಪೊಲೀಸ್ ಉಪವಿಭಾಗದ ಡಿವೈಎಸ್ಪಿ ಜಗದೀಶ್, ಪಿಎಸ್‌ಐಗಳಾದ ರವಿ, ಶಶಿಧರ್, ರಂಜನ್ ಕುಮಾರ್ ರಾಜೀವ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಗಾಯಾಳುಗಳನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫೋಟೋ 5 :

ಕುಲುವನಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಕ್ಯಾಂಟರ್ ಲಾರಿ -ಟೆಂಪೋ ನಡುವೆ ಭೀಕರ ಅಪಘಾತ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕ್ಷೇತ್ರ ಘೋಷಿಸಿದ ನಿಖಿಲ್
ಬೆಂಬಲ ಬೆಲೆಯಡಿ ರಾಗಿ ಖರೀದಿಗೆ ಚುರುಕು