ಕೊಪ್ಪಳ: ನಗರದ ವಾರ್ಡ್ ಸಂಖ್ಯೆ 18 ರ ತೆಗ್ಗಿನಕೇರಿ ಪ್ರದೇಶದಲ್ಲಿ ಚರಂಡಿ ಸ್ವಚ್ಛತೆ ಮಾಡದಿರುವುದನ್ನು ಖಂಡಿಸಿ ಸ್ಥಳೀಯ ನಿವಾಸಿಗಳು ಶನಿವಾರ ರಸ್ತೆ ತಡೆ ನಡೆಸಿ ನಗರಸಭೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಸಮಸ್ಯೆ ಕುರಿತು ಜನವರಿಯಲ್ಲಿಯೇ ವಾರ್ಡ್ ನಿವಾಸಿಗಳು ನಗರಸಭೆಗೆ ಮನವಿ ಸಲ್ಲಿಸಿದ್ದರೂ, ಐದು ತಿಂಗಳು ಕಳೆದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಯುವಕರು ಹಾಗೂ ಮಹಿಳೆಯರು ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು.
ಜವಾಹರ ರಸ್ತೆಯ ದುರಗಮ್ಮ ಗುಡಿ ಸಮೀಪದಿಂದ ನಗರ ಪೊಲೀಸ್ ಠಾಣೆ ಹತ್ತಿರ ಹಸನ್ ರಸ್ತೆಗೆ ಸಂಪರ್ಕ ಕಲ್ಪಿಸುವ ಲಿಂಕ್ ರಸ್ತೆಯಲ್ಲಿ ಬೈಕ್, ಬಿದಿರು ಹಾಗೂ ನೀರಿನ ಬಂಡಿಗಳನ್ನು ಅಡ್ಡಗಟ್ಟಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದರು.ರಸ್ತೆಯ ಎರಡೂ ಬದಿಯ ಕೆಲ ಮನೆಗಳು ಚರಂಡಿ ಒತ್ತುವರಿ ಮಾಡಿಕೊಂಡಿರುವುದರಿಂದ ಸ್ವಚ್ಛತಾ ಕಾರ್ಯಕ್ಕೂ ಅಡಚಣೆ ಉಂಟಾಗುತ್ತಿದೆ ಎಂದು ಸ್ಥಳೀಯರು ತಿಳಿಸಿದರು.
ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.