ಹೆಚ್ಚು ಸುರಿದ ಮಳೆಯಿಂದ ರಸ್ತೆ ಹಾನಿ

KannadaprabhaNewsNetwork |  
Published : Aug 16, 2024, 12:55 AM IST
ಚಿತ್ರ : 15ಎಂಡಿಕೆ5 : ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಮಾತನಾಡಿದರು.  | Kannada Prabha

ಸಾರಾಂಶ

ಮನೆ ಹಾನಿಗೆ ಪರಿಹಾರ ವಿತರಣೆ, ಡೆಂಘಿ ನಿಯಂತ್ರಣ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಸಚಿವರು ಮಾಹಿತಿ ಪಡೆದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕಳೆದ ಜೂನ್ ಮತ್ತು ಜುಲೈ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯ ರಸ್ತೆಗಳು ಹಾಳಾಗಿದ್ದು, ತ್ವರಿತಗತಿಯಲ್ಲಿ ಗುಂಡಿ ಮುಚ್ಚುವಂತೆ ಲೋಕೋಪಯೋಗಿ, ಪಂಚಾಯತ್ ರಾಜ್, ನೀರಾವರಿ ಹಾಗೂ ಪೌರಾಡಳಿತ ಇಲಾಖೆಯ ಎಂಜಿನಿಯರ್ ಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಸ್ಪಷ್ಟ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿದ ಸಚಿವರು ಕೊಡಗು ಜಿಲ್ಲೆಯಲ್ಲಿ ಸುರಿದ ಹೆಚ್ಚಿನ ಮಳೆಗೆ ರಸ್ತೆಗಳು ಗುಂಡಿಮಯವಾಗಿದ್ದು, ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಕೂಡಲೇ ರಸ್ತೆ ಗುಂಡಿ ಮುಚ್ಚುವಂತೆ ಎಂಜಿನಿಯರ್ ಗಳಿಗೆ ತಾಕೀತು ಮಾಡಿದರು.

ಈ ಬಗ್ಗೆ ವಿಷಯ ಪ್ರಸ್ತಾಪಿಸಿದ ಶಾಸಕರಾದ ಡಾ.ಮಂತರ್ ಗೌಡ ಅವರು ಶನಿವಾರಸಂತೆ- ಕೊಡ್ಲಿಪೇಟೆ, ಕೂಡಿಗೆ-ಸೋಮವಾರಪೇಟೆ ಮಾರ್ಗದ ರಸ್ತೆಗಳು ಸೇರಿದಂತೆ ಹಲವು ರಸ್ತೆಗಳು ಗುಂಡಿ ಬಿದ್ದಿದ್ದು, ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಆದ್ದರಿಂದ ಕೂಡಲೇ ಗುಂಡಿ ಮುಚ್ಚಬೇಕು ಎಂದು ನಿರ್ದೇಶನ ನೀಡಿದರು.

ಈ ಕುರಿತು ಮಾತನಾಡಿದ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಹೆಚ್ಚಿನ ಮಳೆಯಿಂದಾಗಿ ರಸ್ತೆಗಳು ಗುಂಡಿಯಾಗಿದ್ದು, ಇದನ್ನು ಸರಿಪಡಿಸುವ ಕೆಲಸ ಆಗಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಶ್ರೀಮಂಗಲ ಬಳಿ ರಸ್ತೆ ಕಾಮಗಾರಿಯ ಬಗ್ಗೆ ಶಾಸಕರು ಮಾಹಿತಿ ಪಡೆದರು. ಜಿಲ್ಲೆಯ ಎರಡು ಕ್ಷೇತ್ರದಲ್ಲಿ ಯಾವ ಯಾವ ರಸ್ತೆಗಳು ಹಾಳಾಗಿವೆ ಎಂಬ ಬಗ್ಗೆ ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿ, ಮಳೆ ಹಾನಿ ಕಾಮಗಾರಿಯನ್ನು ಕೈಗೊಳ್ಳಬಹುದಾಗಿದೆ. ಆದರೂ ಏಕೆ ಗುಂಡಿ ಮುಚ್ಚಲು ಮುಂದಾಗಿಲ್ಲ ಎಂದು ಪೊನ್ನಣ್ಣ ಅವರು ಪ್ರಶ್ನಿಸಿದರು.

ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹೆಚ್ಚಿನ ಮಳೆಯಿಂದಾಗಿ ರಸ್ತೆ, ಸೇತುವೆ ಮತ್ತಿತರ ಹಾನಿಯ ಕಾಮಗಾರಿಗಳ ಸಂಬಂಧ ವರದಿ ನೀಡಿ, ಕಾಮಗಾರಿ ಕೈಗೊಳ್ಳ ಬಹುದಾಗಿದೆ. ಆ ನಿಟ್ಟಿನಲ್ಲಿ ಎಂಜಿನಿಯರ್ ಗಳು ತಕ್ಷಣ ಕ್ರಮವಹಿಸಬೇಕು ಎಂದರು.

ಈ ಕುರಿತು ಮಾತನಾಡಿದ ಲೋಕೋಪಯೋಗಿ ಇಲಾಖೆಯ ಇಇ ಸಿದ್ದೇಗೌಡ ಅವರು ಇಲಾಖೆಯ ವ್ಯಾಪ್ತಿಯಲ್ಲಿ ಸುಮಾರು 75 ಕಾಮಗಾರಿ ಕೈಗೊಳ್ಳಬೇಕಿದ್ದು, ತಾತ್ಕಾಲಿಕ ದುರಸ್ತಿ ಕಾರ್ಯಕ್ಕೆ ಸುಮಾರು 346 ಲಕ್ಷ ರು. ಅನುದಾನ ಬೇಕಿದೆ, ಸದ್ಯ ರಸ್ತೆಯ ಗುಂಡಿ ಮುಚ್ಚುವ ಕಾರ್ಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅತಿವೃಷ್ಟಿಯಿಂದಾಗಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆ, ಸೇತುವೆ ಹಾಗೂ ಕಟ್ಟಡಗಳು ಸೇರಿದಂತೆ ಸುಮಾರು 76 ಕೋಟಿ ರು. ಗೂ ಹೆಚ್ಚಿನ ನಷ್ಟವಾಗಿದೆ ಎಂದು ಸಿದ್ದೇಗೌಡ ಅವರು ಮಾಹಿತಿ ನೀಡಿದರು.

ಪಂಚಾಯತ್ ರಾಜ್ ವಿಭಾಗದ ಎಇಇ ನಾರಾಯಣ ಮೂರ್ತಿ ಅವರು ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ ವ್ಯಾಪ್ತಿಯಲ್ಲಿ ಸುಮಾರು 40 ಕೋಟಿ ರು. ನಷ್ಟು ಹಾನಿಯಾಗಿದ್ದು, ಗ್ರಾಮೀಣ ರಸ್ತೆಯಲ್ಲಿ ಗುಂಡಿ ಮುಚ್ಚಲಾಗುವುದು ಎಂದರು.

ಹಾಗೆಯೇ ಸೆಸ್ಕ್ ವಿಭಾಗ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಿಂದಾಗಿ ವಿದ್ಯುತ್ ಕಂಬಗಳು, ಪರಿವರ್ತಕಗಳು ಸೇರಿದಂತೆ ಸುಮಾರು 4 ಕೋಟಿ ರು. ಗೂ ಹೆಚ್ಚು ಹಾನಿಯಾಗಿದೆ ಎಂದು ಸೆಸ್ಕ್ ಇಇ ಅನಿತಾ ಬಾಯಿ ವಿವರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಭೋಸರಾಜು ಅವರು ಮಳೆ ಹಾನಿ ಸಂಬಂಧ ಮುಖ್ಯಮಂತ್ರಿ ಅವರು ಕೊಡಗು ಜಿಲ್ಲೆಗೆ ಭೇಟಿ ನೀಡಿ, ರಸ್ತೆ ಸೇರಿದಂತೆ ಹಲವು ಕಾಮಗಾರಿ ಕೈಗೊಳ್ಳಲು ಸೂಚಿಸಿದ್ದಾರೆ. ನಾನು ಹಲವು ಬಾರಿ ಭೇಟಿ ನೀಡಿದ್ದೇನೆ, ಕಂದಾಯ ಸಚಿವರು ಜಿಲ್ಲೆಗೆ ಆಗಮಿಸಿ ಹಲವು ನಿರ್ದೇಶನ ನೀಡಿದ್ದಾರೆ. ಆದರೂ ಸಹ ರಸ್ತೆ ಗುಂಡಿ ಮುಚ್ಚುವ ಕೆಲಸ ಆಗಿಲ್ಲ ಎಂದರೆ ಹೇಗೆ ಎಂದು ಸಚಿವರು ಪ್ರಶ್ನಿಸಿದರು.

ಮಳೆಹಾನಿ ಕಾಮಗಾರಿಯನ್ನು ಎಂಜಿನಿಯರ್ ಗಳು ಗಂಭೀರವಾಗಿ ಪರಿಗಣಿಸಬೇಕು ಎಂದು ಸಚಿವರು ತಾಕೀತು ಮಾಡಿದರು.

ಮಳೆಗಾಲದ ಸಂದರ್ಭದಲ್ಲಿ ಸೆಸ್ಕ್ ವಿಭಾಗ ವ್ಯಾಪ್ತಿಯ ಎಲ್ಲ ಹಂತದ ಸಿಬ್ಬಂದಿ, ಉತ್ತಮವಾಗಿ ಕೆಲಸ ಮಾಡಿರುವುದಕ್ಕೆ ಇದೇ ಸಂದರ್ಭ ಮೆಚ್ಚುಗೆ ವ್ಯಕ್ತಪಡಿಸಿದರು.

ವಿವಿಧ ಇಲಾಖೆಯ ಎಂಜಿನಿಯರ್ ಗಳು ಕೆಲಸ ಮಾಡುವ ಬಗ್ಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಬಂದಲ್ಲಿ ಸರ್ಕಾರಕ್ಕೆ ಒಳ್ಳೆಯ ಹೆಸರು ಬರಲಿದೆ. ಆ ದಿಸೆಯಲ್ಲಿ ಎಂಜಿನಿಯರ್ ಗಳು ಸೆಸ್ಕ್ ವಿಭಾಗದ ಸಿಬ್ಬಂದಿಗಳ ಮಾದರಿಯಲ್ಲಿ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಭೋಸರಾಜು ಅವರು ಹೇಳಿದರು.

ಹಾರಂಗಿ ಜಲಾಶಯ ಬಗ್ಗೆ ಮಾಹಿತಿ ಪಡೆದ ಸಚಿವರು ಮಳೆ ಹೆಚ್ಚಾದಲ್ಲಿ ಜಲಾಶಯದಿಂದ ನೀರು ಹೊರ ಬಿಡುವ ಬಗ್ಗೆ ಅಚ್ಚುಕಟ್ಟು ಪ್ರದೇಶದ ಜನರಿಗೆ ಮೊದಲೇ ಮಾಹಿತಿ ನೀಡಬೇಕು ಎಂದು ಸಲಹೆ ಮಾಡಿದರು.

ಮನೆ ಹಾನಿಗೆ ಪರಿಹಾರ ವಿತರಣೆ, ಡೆಂಘಿ ನಿಯಂತ್ರಣ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಬಗ್ಗೆ ಸಚಿವರು ಮಾಹಿತಿ ಪಡೆದರು.

ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಹಾರಂಗಿ ವಿಭಾಗದ ಅಧೀಕ್ಷಕ ಎಂಜಿನಿಯರ್ ರಘುಪತಿ, ಇಇ ಪುಟ್ಟಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ. ವಿಶಾಲ್ ಕುಮಾರ್, ಜಿಲ್ಲಾ ಸರ್ಜನ್ ಡಾ. ನಂಜುಂಡಯ್ಯ, ಡಾ. ಶ್ರೀನಿವಾಸ, ತಹಸೀಲ್ದಾರರಾದ ಪ್ರವೀಣ್ ಕುಮಾರ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾವೇರಿ 33 ಹಳ್ಳಿಗಳಲ್ಲಿ ಪ್ರತಿ ದಿನ ಸಂಜೆ 7- 9 ಗಂಟೆವರೆಗೆ ಮೊಬೈಲ್‌, ಟಿವಿ ಬಂದ್‌
ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್ ಕೊಟ್ರು ಸಚಿವೆ ಲಕ್ಷ್ಮೀ