ನ್ಯಾಯಾಂಗ ವ್ಯವಸ್ಥೆಯಲ್ಲಿ ಮಧ್ಯಸ್ಥಿಕೆದಾರರ ಪಾತ್ರ ಮಹತ್ತರ; ನ್ಯಾಯಾಧೀಶೆ ಶಾಂತಿ

KannadaprabhaNewsNetwork |  
Published : Mar 29, 2026, 02:15 AM IST
ಬಳ್ಳಾರಿಯ ಹೊಸ ನ್ಯಾಯಾಲಯ ಸಭಾಂಗಣದಲ್ಲಿ ಏರ್ಪಡಿಸಿದ್ದ 40 ಗಂಟೆಗಳ ಮಧ್ಯಸ್ಥಿಕೆ ತರಬೇತಿ ಶಿಬಿರಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶೆ ಕೆ.ಜಿ.ಶಾಂತಿ ಅವರು ಉದ್ಘಾಟಿಸಿದರು.  | Kannada Prabha

ಸಾರಾಂಶ

ಸಾಂಪ್ರದಾಯಿಕ ನ್ಯಾಯಾಲಯದ ಪ್ರಕ್ರಿಯೆಗಿಂತ ಮಧ್ಯಸ್ಥಿಕೆಯು ಭಿನ್ನವಾಗಿದೆ.

ಬಳ್ಳಾರಿ: ನ್ಯಾಯಾಲಯಗಳಲ್ಲಿ ದಿನೇದಿನೇ ಹೆಚ್ಚುತ್ತಿರುವ ಪ್ರಕರಣಗಳ ಹೊರೆ ತಗ್ಗಿಸಲು ಮತ್ತು ಸಾರ್ವಜನಿಕರಿಗೆ ತ್ವರಿತ ನ್ಯಾಯ ಒದಗಿಸಲು ಮಧ್ಯಸ್ಥಿಕೆ ಪ್ರಕ್ರಿಯೆಯು ಅತ್ಯಂತ ಪರಿಣಾಮಕಾರಿ ಮಾರ್ಗವಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ. ಶಾಂತಿ ಹೇಳಿದರು.

ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಮಧ್ಯಸ್ಥಿಕೆದಾರರಿಗೆ ಮಾ.25 ರಿಂದ 29 ರ ವರೆಗೆ ನಗರದ ತಾಳೂರು ರಸ್ತೆಯ ಹೊಸ ನ್ಯಾಯಾಲಯ ಸಭಾಂಗಣದಲ್ಲಿ ಏರ್ಪಡಿಸಿದ್ದ 40 ಗಂಟೆಗಳ ಮಧ್ಯಸ್ಥಿಕೆ ತರಬೇತಿ ಶಿಬಿರಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.ಸಾಂಪ್ರದಾಯಿಕ ನ್ಯಾಯಾಲಯದ ಪ್ರಕ್ರಿಯೆಗಿಂತ ಮಧ್ಯಸ್ಥಿಕೆಯು ಭಿನ್ನವಾಗಿದೆ. ಇಲ್ಲಿ ಮಧ್ಯಸ್ಥಿಕೆದಾರರು ಕೇವಲ ಸಮಸ್ಯೆಯನ್ನು ಆಲಿಸದೆ, ಉಭಯ ಪಕ್ಷಗಳ ನಡುವೆ ಸೌಹಾರ್ದಯುತ ವಾತಾವರಣ ನಿರ್ಮಿಸಿ ಸಮಸ್ಯೆ ಇತ್ಯರ್ಥಕ್ಕೆ ಅನುವು ಮಾಡಿಕೊಡುತ್ತಾರೆ. ಈ 5 ದಿನಗಳ ತರಬೇತಿಯು ಕೇವಲ ಕಾನೂನು ತಿಳುವಳಿಕೆಯನ್ನಷ್ಟೇ ನೀಡದೆ, ಮಧ್ಯಸ್ಥಿಕೆದಾರರ ಶಾಂತಿಯುತ ಚಿಂತನೆಯನ್ನು ವೃದ್ಧಿಸಿ ಅವರ ವ್ಯಕ್ತಿತ್ವ ವಿಕಸನಕ್ಕೂ ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಮಧ್ಯಸ್ಥಿಕೆಯಿಂದ ಪ್ರಕರಣಗಳು ಶಾಶ್ವತವಾಗಿ ಇತ್ಯರ್ಥಗೊಳ್ಳುತ್ತವೆ ಮತ್ತು ಮೇಲ್ಮನವಿ ಸಲ್ಲಿಸುವ ಅಗತ್ಯವಿರುವುದಿಲ್ಲ. ‘ನಾನು’ ಎಂಬ ಅಹಂಕಾರದಿಂದಲೇ ಸಮಾಜದಲ್ಲಿ ಹೆಚ್ಚಿನ ವಿವಾದಗಳು ಹುಟ್ಟಿಕೊಳ್ಳುತ್ತವೆ. ಈ ಅಹಂಕಾರವನ್ನು ಬಿಟ್ಟು ‘ನಾವು’ ಎಂಬ ಭಾವನೆಯೊಂದಿಗೆ ಕೆಲಸ ಮಾಡಿದರೆ ನ್ಯಾಯಾಂಗ ವ್ಯವಸ್ಥೆಯ ಮೇಲಿನ ಒತ್ತಡ ಕಡಿಮೆಯಾಗಿ ಸಮಾಜದಲ್ಲಿ ನೆಮ್ಮದಿ ನೆಲೆಸಲು ಸಾಧ್ಯ ಎಂದು ನ್ಯಾಯಾಧೀಶರು ಕಿವಿಮಾತು ಹೇಳಿದರು.

ಹಿರಿಯ ತರಬೇತುದಾರರಾದ ಬ್ರಿಂದಾ ನಂದಕುಮಾರ್ ಮಾತನಾಡಿ, ಇಂದಿನ ವೇಗದ ಯುಗದಲ್ಲಿ ನ್ಯಾಯಾಂಗ ವ್ಯವಸ್ಥೆಯ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಮತ್ತು ಸೌಹಾರ್ದಯುತವಾಗಿ ವಿವಾದಗಳನ್ನು ಬಗೆಹರಿಸಿಕೊಳ್ಳಲು ‘ಮಧ್ಯಸ್ಥಿಕೆ'''''''' ಅತ್ಯಂತ ಅವಶ್ಯಕ. ಮಧ್ಯಸ್ಥಿಕೆ ಎಂಬುದು ಕೇವಲ ವಕೀಲರಿಗೆ ಅಥವಾ ಮಧ್ಯಸ್ಥಿಕೆದಾರರಿಗೆ ಸೀಮಿತವಾದ ತಾಂತ್ರಿಕ ಪ್ರಕ್ರಿಯೆಯಲ್ಲ. ಇದೊಂದು ಜೀವನ ಕೌಶಲ್ಯ. ಇದನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಮನಸ್ಸಿಗೆ ಶಾಂತಿ ಸಿಗುತ್ತದೆ ಮತ್ತು ಉತ್ತಮ ಬಾಂಧವ್ಯ ವೃದ್ಧಿಯಾಗುತ್ತದೆ ಎಂದು ಹೇಳಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಮ್ ಬ್ರಹ್ಮಂ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ನ್ಯಾಯಾಲಯಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ, ‘ಮಧ್ಯಸ್ಥಿಕೆ'''''''' ಪ್ರಕ್ರಿಯೆಯು ವಿವಾದಗಳನ್ನು ಶಾಂತಿಯುತವಾಗಿ ಬಗೆಹರಿಸುವಲ್ಲಿ ಪ್ರಬಲ ಅಸ್ತçವಾಗಿ ಹೊರಹೊಮ್ಮುತ್ತಿದೆ ಎಂದು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಸೇರಿದಂತೆ ಬಳ್ಳಾರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ನೂತನವಾಗಿ ಆಯ್ಕೆಯಾದ ಮಧ್ಯಸ್ಥಿಕೆದಾರರು, ವಕೀಲರು ಮತ್ತು ನ್ಯಾಯಾಂಗ ಅಧಿಕಾರಿಗಳು ಉಪಸ್ಥಿತರಿದ್ದರು.

ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ತ್ರಿವೇಣಿ ಪತ್ತಾರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಹಿಳಾ ನೌಕರರ ಆರೋಗ್ಯ ಆಡಳಿತದ ಅಡಿಪಾಯ: ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ
ಮೇ 9,10ರಂದು ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ: ಶ್ರೀನಿವಾಸ ಕಂಟ್ಲಿ