ಬಳ್ಳಾರಿ: ನ್ಯಾಯಾಲಯಗಳಲ್ಲಿ ದಿನೇದಿನೇ ಹೆಚ್ಚುತ್ತಿರುವ ಪ್ರಕರಣಗಳ ಹೊರೆ ತಗ್ಗಿಸಲು ಮತ್ತು ಸಾರ್ವಜನಿಕರಿಗೆ ತ್ವರಿತ ನ್ಯಾಯ ಒದಗಿಸಲು ಮಧ್ಯಸ್ಥಿಕೆ ಪ್ರಕ್ರಿಯೆಯು ಅತ್ಯಂತ ಪರಿಣಾಮಕಾರಿ ಮಾರ್ಗವಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ. ಶಾಂತಿ ಹೇಳಿದರು.
ಮಧ್ಯಸ್ಥಿಕೆಯಿಂದ ಪ್ರಕರಣಗಳು ಶಾಶ್ವತವಾಗಿ ಇತ್ಯರ್ಥಗೊಳ್ಳುತ್ತವೆ ಮತ್ತು ಮೇಲ್ಮನವಿ ಸಲ್ಲಿಸುವ ಅಗತ್ಯವಿರುವುದಿಲ್ಲ. ‘ನಾನು’ ಎಂಬ ಅಹಂಕಾರದಿಂದಲೇ ಸಮಾಜದಲ್ಲಿ ಹೆಚ್ಚಿನ ವಿವಾದಗಳು ಹುಟ್ಟಿಕೊಳ್ಳುತ್ತವೆ. ಈ ಅಹಂಕಾರವನ್ನು ಬಿಟ್ಟು ‘ನಾವು’ ಎಂಬ ಭಾವನೆಯೊಂದಿಗೆ ಕೆಲಸ ಮಾಡಿದರೆ ನ್ಯಾಯಾಂಗ ವ್ಯವಸ್ಥೆಯ ಮೇಲಿನ ಒತ್ತಡ ಕಡಿಮೆಯಾಗಿ ಸಮಾಜದಲ್ಲಿ ನೆಮ್ಮದಿ ನೆಲೆಸಲು ಸಾಧ್ಯ ಎಂದು ನ್ಯಾಯಾಧೀಶರು ಕಿವಿಮಾತು ಹೇಳಿದರು.
ಹಿರಿಯ ತರಬೇತುದಾರರಾದ ಬ್ರಿಂದಾ ನಂದಕುಮಾರ್ ಮಾತನಾಡಿ, ಇಂದಿನ ವೇಗದ ಯುಗದಲ್ಲಿ ನ್ಯಾಯಾಂಗ ವ್ಯವಸ್ಥೆಯ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಮತ್ತು ಸೌಹಾರ್ದಯುತವಾಗಿ ವಿವಾದಗಳನ್ನು ಬಗೆಹರಿಸಿಕೊಳ್ಳಲು ‘ಮಧ್ಯಸ್ಥಿಕೆ'''''''' ಅತ್ಯಂತ ಅವಶ್ಯಕ. ಮಧ್ಯಸ್ಥಿಕೆ ಎಂಬುದು ಕೇವಲ ವಕೀಲರಿಗೆ ಅಥವಾ ಮಧ್ಯಸ್ಥಿಕೆದಾರರಿಗೆ ಸೀಮಿತವಾದ ತಾಂತ್ರಿಕ ಪ್ರಕ್ರಿಯೆಯಲ್ಲ. ಇದೊಂದು ಜೀವನ ಕೌಶಲ್ಯ. ಇದನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಮನಸ್ಸಿಗೆ ಶಾಂತಿ ಸಿಗುತ್ತದೆ ಮತ್ತು ಉತ್ತಮ ಬಾಂಧವ್ಯ ವೃದ್ಧಿಯಾಗುತ್ತದೆ ಎಂದು ಹೇಳಿದರು.ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಮ್ ಬ್ರಹ್ಮಂ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ನ್ಯಾಯಾಲಯಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ, ‘ಮಧ್ಯಸ್ಥಿಕೆ'''''''' ಪ್ರಕ್ರಿಯೆಯು ವಿವಾದಗಳನ್ನು ಶಾಂತಿಯುತವಾಗಿ ಬಗೆಹರಿಸುವಲ್ಲಿ ಪ್ರಬಲ ಅಸ್ತçವಾಗಿ ಹೊರಹೊಮ್ಮುತ್ತಿದೆ ಎಂದು ಹೇಳಿದರು.
ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ತ್ರಿವೇಣಿ ಪತ್ತಾರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.