ಕನ್ನಡಪ್ರಭ ವಾರ್ತೆ ಬಂಟ್ವಾಳ ಮಕ್ಕಳನ್ನು ದೇಶದ ಉತ್ತಮ ಪ್ರಜೆಯನ್ನಾಗಿ ರೂಪಿಸುವಲ್ಲಿ ಶಿಕ್ಷಕ ವೃಂದದ ನಿಷ್ಠೆ ಮತ್ತು ಪಾತ್ರ ಮಹತ್ತರವಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.
ಶಾಲಾ ವಾರ್ಷಿಕೋತ್ಸವ ಸಂದರ್ಭದಲ್ಲಿ ಪುಟ್ಟ ಮಕ್ಕಳಿಗೆ ಬಣ್ಣ ಹಚ್ಚಿ ಕಾಯಿಸುವುದು ಸರಿಯಲ್ಲ, ಮಕ್ಕಳ ಪ್ರತಿಭೆಯನ್ನು ನೋಡಲು ಪೋಷಕರು, ಗ್ರಾಮಸ್ಥರು ಆಗಮಿಸಿರುತ್ತಾರೆ. ಜನಪ್ರತಿನಿಧಿಗಳು, ಗಣ್ಯರಿಗಾಗಿ ಸಣ್ಣ ಮಕ್ಕಳನ್ನು ಕಾಯಿಸದೆ ಶಿಕ್ಷಕರು ಕಾರ್ಯಕ್ರಮ ನಡೆಸಬೇಕು. ಈ ಬಗ್ಗೆ ಸುತ್ತೋಲೆ ಹೊರಡಿಸುವಂತೆ ಶಾಸಕ ರಾಜೇಶ್ ನಾಯ್ಕ್ ಅಧಿಕಾರಿಗಳಿಗೆ ಸೂಚಿಸಿದರು.
ನಗರ ವಿದ್ಯಾರ್ಥಿಗಳಿಗೆ ಹೋಲಿಸಿದರೆ ಹಳ್ಳಿಯ ವಿದ್ಯಾರ್ಥಿಗಳು ಹೆಚ್ಚು ಸ್ವತಂತ್ರರು. ಕೋವಿಡ್ ಸಂದರ್ಭದಲ್ಲಿ ನಗರದ ವಿದ್ಯಾರ್ಥಿಗಳು ನಾಲ್ಕು ಕೋಣೆಗಳ ಮಧ್ಯೆ ಬಂಧಿಯಾದರೆ, ಹಳ್ಳಿಯ ಮಕ್ಕಳು ಪರಿಸರದೆಲ್ಲೆಡೆ ಸ್ವತಂತ್ರವಾಗಿ ಸುತ್ತಾಡುವ ಅವಕಾಶವನ್ನು ಹೊಂದಿದ್ದರು. ಮಕ್ಕಳ ಆಸಕ್ತಿಯನ್ನು ಅರಿತುಕೊಂಡು ಅವರಿಗೆ ಸೂಕ್ತ ತರಬೇತಿ ನೀಡಿದಾಗ ಅವರು ಡಿಪ್ರೆಶನ್ಗೆ ಹೋಗಲು ಸಾಧ್ಯವಿಲ್ಲ ಎಂದರು.ಕರ್ನಾಟಕ ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಡಿ.ಎಸ್. ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಬಿ. ರಮಾನಾಥ ರೈ, ಬಂಟ್ವಾಳ ಪುರಸಭಾಧ್ಯಕ್ಷ ವಾಸು ಪೂಜಾರಿ ಲೊರೆಟ್ಟೋ, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ.ಕೆ, ಬಂಟ್ವಾಳ ತಹಸೀಲ್ದಾರ್ ಅರ್ಚನಾ ಡಿ. ಭಟ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್, ಶಾಲಾ ಶಿಕ್ಷಣ ಇಲಾಖೆಯ ಡಯಟ್ ಪದನಿಮಿತ್ತ ಉಪನಿರ್ದೇಶಕಿ ರಾಜಲಕ್ಷ್ಮೀ ಕೆ. ಅತಿಥಿಗಳಾಗಿ ಭಾಗವಹಿಸಿದ್ದರು.
ಪ್ರಶಸ್ತಿ ಪ್ರದಾನ: ಇದೇ ವೇಳೆ ದ.ಕ. ಜಿಲ್ಲಾ ಮಟ್ಟದ ಮತ್ತು ಬಂಟ್ವಾಳ ತಾಲೂಕು ಮಟ್ಟದ ‘ಉತ್ತಮ ಶಿಕ್ಷಕ ಪ್ರಶಸ್ತಿ’ಗೆ ಭಾಜನರಾದ ಶಿಕ್ಷಕ- ಶಿಕ್ಷಕಿಯರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಅದೇ ರೀತಿ ಬಂಟ್ವಾಳ ತಾಲೂಕು ಮಟ್ಟದ ನಿವೃತ್ತ ಶಿಕ್ಷಕ ಮತ್ತು ಶಿಕ್ಷಕೇತರ ನೌಕರರನ್ನು ಸನ್ಮಾನಿಸಲಾಯಿತು. ಕನ್ನಡ ಮಾಧ್ಯಮದಲ್ಲಿ ಕಲಿತು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ಸುಬ್ರಾಯ ಪಟಗಾರ್ ಸ್ವಾಗತಿಸಿದರು. ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ಎಂ.ಜಿ. ವಂದಿಸಿದರು. ಸಂತೋಷ್ ಕುಮಾರ್ ತುಂಬೆ, ಮಹೇಶ್ ಕರ್ಕೇರ ಸಿದ್ದಕಟ್ಟೆ, ಹರಿಣಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮ: ಸಭಾ ಕಾರ್ಯಕ್ರಮಕ್ಕೆ ಮುನ್ನ ಬಂಟ್ಚಾಳ ತಾಲೂಕಿನ ವಿವಿಧ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ನೆರೆದ ಶಿಕ್ಷಕ ವೃಂದದ ಗಮನಸೆಳೆಯಿತು. ಈ ಸಂದರ್ಭದಲ್ಲಿ ಶಿಕ್ಷಕರ ವಿವಿಧ ಬೇಡಿಕೆಯ ಮನವಿಯನ್ನು ಸರಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಹಾಗೂ ಪದಾಧಿಕಾರಿಗಳು ಶಾಸಕ ರಾಜೇಶ್ ನಾಯ್ಕ್ ಅವರಿಗೆ ಸಲ್ಲಿಸಿದರು.