ಹೊಸಪೇಟೆ: ವಿವಿಧ ಕ್ರಿಮಿನಲ್ ಪ್ರಕರಣಗಳಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ವಿಜಯನಗರ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ವತಿಯಿಂದ ನಗರದ ಎಸ್ಪಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಸೀರಿಯಲ್ ರೇಪಿಸ್ಟ್ ಉಮೇಶ್ ರೆಡ್ಡಿಯಂತಹ ಅಪರಾಧಿಗಳಿಗೆ ಐಷಾರಾಮಿ ಸವಲತ್ತುಗಳನ್ನು ನೀಡಿರುವುದು ಕಣ್ಣಿಗೆ ರಾಚುವಂತಿದೆ. ಅಕ್ರಮ ಚಿನ್ನ ಸಾಗಾಣಿಕೆ ಪ್ರಕರಣದಲ್ಲಿ ಜೈಲು ಸೇರಿದ ತರುಣ್ ಎನ್ನುವ ಆರೋಪಿಗೂ ರೆಸಾರ್ಟ್ ಸೌಲಭ್ಯ ನೀಡಿರುವುದನ್ನು ಗಮನಿಸಿದರೆ ಗೃಹ ಸಚಿವರು ನಿದ್ದೆ ಮಾಡುತ್ತಿದ್ದಾರೋ ಅಥವಾ ಎಲ್ಲದನ್ನು ಅವರೇ ವ್ಯವಸ್ಥೆ ಮಾಡಲು ಜೈಲಿನ ಅಧಿಕಾರಿಗಳಿಗೆ ಮೌಖಿಕ ಸೂಚನೆ ನೀಡಿದ್ದಾರೋ ಎನ್ನುವ ಅನುಮಾನಗಳು ಕಾಡುತ್ತಿವೆ. ಈ ಕೃತ್ಯವನ್ನು ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸುತ್ತದೆ. ಇದರ ನೈತಿಕ ಹೊಣೆ ಹೊತ್ತು ರಾಜ್ಯದ ಮುಖ್ಯಮಂತ್ರಿ ಹಾಗೂ ಗೃಹಸಚಿವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಅಲ್ಲದೇ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಲು ಎನ್ಐಎಗೆ ಪ್ರಕರಣ ನೀಡಬೇಕು ಎಂದು ಆಗ್ರಹಿಸಿದರು.
ನಂತರ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿಗಳು ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ರವಾನಿಸಿದರು. ಈ ಸಂದರ್ಭದಲ್ಲಿ ಯುವ ಮುಖಂಡರಾದ ನಟರಾಜ್, ಸಚಿನ್ ಕುಮಾರ್, ಸೂರಿ ಬಂಗಾರು, ಸಂಗಮೇಶ್ ಕಡೆಮನಿ, ವ್ಯಾಸರಾಜ್, ಸಂಪತ್ ಮೂರ್ತಿ, ಗಿರೀಶ್, ಹನುಮ ನಾಯ್ಕ, ಗೌಳಿ ಬಸವರಾಜ್, ರುದ್ರಪ್ಪ ಗೌಳಿ, ಹೊನ್ನೂರಪ್ಪ, ಉಮಾದೇವಿ, ಎಚ್.ರಾಘವೇಂದ್ರ, ಮಣಿಕಂಠ ಕೊಟ್ಟೂರು, ವಿಕಾಶ್, ವೆಂಕೋಬಿ ದೇವಲಾಪುರ ಮತ್ತಿತರರಿದ್ದರು.