ಸಂಚಾರಿ ನಿಯಮಗಳನ್ನು ಪಾಲಿಸಿ ಅಪಘಾತರಹಿತ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ವಾಹನ ಚಾಲಕರೂ ಸೇರಿದಂತೆ ಪ್ರತಿಯೊಬ್ಬರೂ ಸಹಕಾರ ನೀಡಬೇಕೆಂದು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಮಲ್ಲಿಕಾರ್ಜುನ್ ತಿಳಿಸಿದರು
ಕನ್ನಡಪ್ರಭ ವಾರ್ತೆ ನಾಗಮಂಗಲ
ಸಂಚಾರಿ ನಿಯಮಗಳನ್ನು ಪಾಲಿಸಿ ಅಪಘಾತರಹಿತ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ವಾಹನ ಚಾಲಕರೂ ಸೇರಿದಂತೆ ಪ್ರತಿಯೊಬ್ಬರೂ ಸಹಕಾರ ನೀಡಬೇಕೆಂದು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಮಲ್ಲಿಕಾರ್ಜುನ್ ತಿಳಿಸಿದರು. ತಾಲೂಕು ಆಡಳಿತ ಮತ್ತು ಪಟ್ಟಣದ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ವತಿಯಿಂದ 35ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಪ್ರಯಕ್ತ ಬುಧವಾರ ಪಟ್ಟಣದಲ್ಲಿ ಆಯೋಜಿಸಿದ್ದ ಜನಜಾಗೃತಿ ಜಾಥಾ ಚಾಲನೆ ನೀಡಿದ ಮಾತನಾಡಿದರು. ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಅಮೂಲ್ಯ ಜೀವಗಳನ್ನು ರಕ್ಷಣೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ. ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್, ಕಾರು ಚಾಲಕರು ಸೀಟ್ ಬೆಲ್ಟ್ ಧರಿಸಬೇಕು. ಅತಿವೇಗ ಮತ್ತು ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಬಾರದು ಎಂದರು. ಬಿಇಒ ಯೋಗೇಶ್ ಮಾತನಾಡಿ, ಚಾಲನೆ ವೇಳೆ ಸವಾರರು ಮೊಬೈಲ್ ಬಳಸಬಾರದು. ಮಕ್ಕಳಿಗೆ ವಾಹನ ನೀಡಬಾರದು. ವೀಲಿಂಗ್ ಮಾಡುವುದು ಶಿಕ್ಷಾರ್ಹ ಅಪರಾಧ ಎಂದು ಹೇಳಿದರು. ಎಆರ್ಟಿಓ ಕಚೇರಿ ಮೋಟಾರು ವಾಹನ ನಿರೀಕ್ಷಕ ಸಿ.ಎಸ್. ಸತೀಶ್ ಮಾತನಾಡಿ, ಏಕಾಗ್ರತೆ ವಾಹನ ಚಾಲನೆ ಮಾಡಿದಲ್ಲಿ ಅಪಘಾತಗಳು ಸಂಭವಿಸುವುದಿಲ್ಲ ಎಂದು ತಿಳಿಸಿದರು. ಇದಕ್ಕೂ ಮುನ್ನ ಪಟ್ಟಣದ ಟಿ.ಬಿ. ಬಡಾವಣೆ ಬಿಜಿಎಸ್ ವೃತ್ತದಿಂದ ಚಾಮರಾಜನಗರ-ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಮತ್ತು ಶೀರಾಪಟ್ಟಣದ ವಿಸ್ಡಂ ಶಾಲೆಯ ವಿದ್ಯಾರ್ಥಿಗಳ ಜೊತೆಗೂಡಿ ತಾಲೂಕು ಮಟ್ಟದ ಅಧಿಕಾರಿಗಳು ಘೋಷವಾಕ್ಯಗಳ ಫಲಕ ಹಿಡಿದು ಜನಜಾಗೃತಿ ಜಾಥ ನಡೆಸಿದರು. ಪಟ್ಟಣದ ಮಂಡ್ಯ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ಸುರಕ್ಷತೆ ಮತ್ತು ಸಂಚಾರಿ ನಿಯಮಗಳನ್ನು ಪಾಲಿಸುವ ಕುರಿತು ಜನರಲ್ಲಿ ಅರಿವು ಮೂಡಿಸಿದರು.
ಈ ವೇಳೆ ತಾಪಂ ಇಒ ಚಂದ್ರಮೌಳಿ, ಪಟ್ಟಣ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಶೋಕ್ಕುಮಾರ್, ಪಿಎಸ್ಐ ಸತೀಶ್, ಎಆರ್ಟಿಒ ಕಚೇರಿಯ ಅಧೀಕ್ಷಕ ಕೆ.ಡಿ. ಸತೀಶ್, ಕಚೇರಿಯ ಅಧಿಕಾರಿಗಳಾದ ರಾಧಾಕೃಷ್ಣ, ನೇಹಾ ಅಫ್ಸರ್, ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ವೆಂಕಟೇಶ್, ಕೃಷಿ ಇಲಾಖೆ ಅಧೀಕ್ಷಕ ಲೋಕೇಶ್, ಮುಖ್ಯ ಶಿಕ್ಷಕ ಎಚ್.ಎನ್. ಜಯಶಂಕರ್, ರಾಜು, ವಿಸ್ಡಂ ಶಾಲೆ ಶಿಕ್ಷಕರು, ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕರು ಸೇರಿದಂತೆ ನೂರಾರು ಮಂದಿಯಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.