ಕಿರಿಯರ ಮತ್ತು 23ರ ವಯೋಮಿತಿಯ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಚಾಲನೆಕನ್ನಡಪ್ರಭ ವಾರ್ತೆ ಉಡುಪಿಗ್ರಾಮೀಣ ಪ್ರದೇಶಗಳಲ್ಲಿರುವ ಕ್ರೀಡಾ ಪ್ರತಿಭೆಗಳನ್ನು ಹುಡುಕಬೇಕು. ಅವರೇ ನಿಜವಾದ ಮತ್ತು ಉತ್ತಮ ಕ್ರೀಡಾಪಟುಗಳಾಗುತ್ತಾರೆ ಎಂದು ರಾಜ್ಯ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ, ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.ಅವರು ಶನಿವಾರ ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ನಗರದ ಅಜ್ಜರಕಾಡು ಜಿಲ್ಲಾ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ 3 ದಿನಗಳ ಕರ್ನಾಟಕ ರಾಜ್ಯ ಕಿರಿಯರ ಮತ್ತು 23ರ ವಯೋಮಿತಿಯ ರಾಜ್ಯಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದದರು.ಕ್ರೀಡಾಪಟುಗಳ ಮನಸ್ಸು ಗಟ್ಟಿ ಮತ್ತು ಶುದ್ಧವಾಗಿರಬೇಕು ಆಗ ಮಾತ್ರ ಸಾಧನೆ ಸಾಧ್ಯ. ಮನಸ್ಸು ವಿಕೃತವಾದರೇ ಸೋಲು ಗ್ಯಾರಂಟಿ ಎಂದರು.
ಈ ಕ್ರೀಡಾಕೂಟ ಬೆಂಗಳೂರಿನಲ್ಲಿ ನಡೆಯಬೇಕಾಗಿತ್ತು. ಆದರೆ ವಿಪರೀತ ಮಳೆಯಿಂದಾಗಿ ಬೆಂಗಳೂರಿನಿಂದ ಉಡುಪಿಗೆ ಸ್ಥಳಾಂತರ ಮಾಡಿದೆವು. ಉಡುಪಿ ಜಿಲ್ಲೆಯಲ್ಲಿ ಕ್ರೀಡಾಕೂಟಗಳಿಗ ಅಗತ್ಯ ಸೌಲಭ್ಯಗಳಿವೆ. ಇನ್ನೂ ಹೆಚ್ಚಿನ ಕ್ರೀಡಾ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಜಿಲ್ಲೆಗೆ 3 ಕೋಟಿ ರು. ನೀಡುವುದಾಗಿ ಸಚಿವರು ಘೋಷಿಸಿದರು.ಉಡುಪಿ ಜಿಲ್ಲೆಯಲ್ಲಿ ಹೊಸದಾಗಿ ಬಾಸ್ಕೆಟ್ ಬಾಲ್ ಅಸೋಸಿಯೇಶನ್ ಆರಂಭವಾಗಿರುವುದನ್ನು ಪ್ರಶಂಸಿದ ಸಚಿವರು, ಮಣಿಪಾಲದ ಮಾಹೆಯಲ್ಲಿ ಅಂತಾರಾಷ್ಟ್ರೀಯ ಬಾಸ್ಕೆಟ್ ಬಾಲ್ ಚಾಂಪಿಯನ್ಶಿಪ್ ನಡೆಸೋಣ ಎಂದು ಮಾಹೆಯ ಸಹಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ಅವರಿಗೆ ಸಲಹೆ ನೀಡಿದರು.ಕಾರ್ಯಕ್ರಮದ ಮುಖ್ಯ ಅತಿಥಿ ಡಾ. ಎಚ್.ಎಸ್. ಬಲ್ಲಾಳ್, ಉಡುಪಿ ಜಿಲ್ಲೆಯಲ್ಲಿ ನಡೆಯುವ ಎಲ್ಲ ಕ್ರೀಡಾ ಚಟುವಟಿಕೆಗಳಿಗೆ ಮಾಹೆಯ ಪೂರ್ಣ ಬೆಂಬಲವಿದೆ ಎಂದರು.ವೇದಿಕೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಪ.ವಲಯ ಐಜಿಪಿ ಅಮಿತ್ ಸಿಂಗ್, ಉಡುಪಿ ಡಿಸಿ ಸ್ವರೂಪ ಡಿ.ಕೆ., ಎಸ್ಪಿ ಹರಿರಾಮ್ ಶಂಕರ್, ಜಿಪಂ ಸಿಇಒ ಪ್ರತೀಕ್ ಬಾಯಕ್, ಎಡಿಸಿ ಅಬಿದ್ ಗದ್ಯಾಲ್ ಮುಂತಾದರಿದ್ದರು.ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ ಸ್ವಾಗತಿಸಿದರು. ಸಂಘಟನಾ ಸಮಿತಿ ಅಧ್ಯಕ್ಷ ಕೆ.ರಘುಪತಿ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜಿಲ್ಲಾ ಯುವಜನ ಸೇವಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಷನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.