ಜನಪರ ಯೋಜನೆಗಳಲ್ಲಿ ಎಸ್‌. ಬಂಗಾರಪ್ಪ ಜೀವಂತ: ಸಚಿವ ಮಧು ಬಂಗಾರಪ್ಪ

KannadaprabhaNewsNetwork |  
Published : Mar 15, 2026, 01:30 AM IST
ಪೊಟೊ: 14ಎಸ್‌ಎಂಜಿಕೆಪಿ05ಶಿವಮೊಗ್ಗದ ಗೋಪಾಲಗೌಡ ಬಡಾವಣೆಯಲ್ಲಿ ಶನಿವಾರ ಏರ್ಪಡಿಸಿದ್ದ ಮಹಾನಗರಪಾಲಿಕೆ ವ್ಯಾಪ್ತಿಯ ಆಲ್ಕೊಳ ವೃತ್ತದಿಂದ ಡಿ.ವಿ.ಜಿ. ವೃತ್ತದವರೆಗೆ 100 ಅಡಿ ದ್ವಿಪಥ ರಸ್ತೆಗೆ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ರಸ್ತೆ ಎಂದು ನಾಮ ಫಲಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು. | Kannada Prabha

ಸಾರಾಂಶ

ಬಡವರಿಗೆ ಸೂರು ಒದಗಿಸುವ ಆಶ್ರಯ, ಆರಾಧನಾ, ಅಕ್ಷಯ, ರೈತರ ಪಂಪ್‌ಸೆಟ್‌ಗೆ ಉಚಿತ ವಿದ್ಯುತ್ ಹೀಗೆ ಬಡವರ ಏಳಿಗೆಗಾಗಿ ಹಲವಾರು ಯೋಜನೆಗಳನ್ನು ನೀಡಿದ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಹೆಸರನ್ನು ಗೋಪಾಲಗೌಡ ಬಡಾವಣೆಯ ರಸ್ತೆಗೆ ನಾಮಕರಣ ಮಾಡುವ ಕಾರ್ಯಕ್ರಮ ಉದ್ಘಾಟನೆ ಮಾಡುತ್ತಿರುವುದು ಹೆಮ್ಮೆಯ ವಿಷಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಬಡವರಿಗೆ ಸೂರು ಒದಗಿಸುವ ಆಶ್ರಯ, ಆರಾಧನಾ, ಅಕ್ಷಯ, ರೈತರ ಪಂಪ್‌ಸೆಟ್‌ಗೆ ಉಚಿತ ವಿದ್ಯುತ್ ಹೀಗೆ ಬಡವರ ಏಳಿಗೆಗಾಗಿ ಹಲವಾರು ಯೋಜನೆಗಳನ್ನು ನೀಡಿದ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಹೆಸರನ್ನು ಗೋಪಾಲಗೌಡ ಬಡಾವಣೆಯ ರಸ್ತೆಗೆ ನಾಮಕರಣ ಮಾಡುವ ಕಾರ್ಯಕ್ರಮ ಉದ್ಘಾಟನೆ ಮಾಡುತ್ತಿರುವುದು ಹೆಮ್ಮೆಯ ವಿಷಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಇಲ್ಲಿನ ಗೋಪಾಲಗೌಡ ಬಡಾವಣೆಯಲ್ಲಿ ಶನಿವಾರ ಏರ್ಪಡಿಸಿದ್ದ ಮಹಾನಗರಪಾಲಿಕೆ ವ್ಯಾಪ್ತಿಯ ಆಲ್ಕೊಳ ವೃತ್ತದಿಂದ ಡಿ.ವಿ.ಜಿ. ವೃತ್ತದವರೆಗೆ 100 ಅಡಿ ದ್ವಿಪಥ ರಸ್ತೆಗೆ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ರಸ್ತೆ ಎಂದು ನಾಮ ಫಲಕ ಉದ್ಘಾಟನೆ ಮತ್ತು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ 290 ಮನೆಗಳಿಗೆ ಹಕ್ಕುಪತ್ರಗಳ ವಿತರಣೆ ಹಾಗೂ ಆಶ್ರಯ ಯೋಜನೆ ಅಡಿಯಲ್ಲಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಮನೆಗಳ ಕೀ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಾಜಿ ಮುಖ್ಯಮಂತ್ರಿಯಾದ ಬಂಗಾರಪ್ಪನವರ ಯೋಜನೆಗಳು, ಕಾರ್ಯಕ್ರಮಗಳು ಸದಾ ಹಸಿರಾಗಿವೆ. ಹಕ್ಕುಪತ್ರಗಳನ್ನು ವಿತರಣೆ ಮಾಡುವುದರಲ್ಲಿ ಕೂಡ ಅವರ ಚಿಂತನೆ ಇದೆ. ಗೋಪಾಲಗೌಡರ ಜಯಂತಿಯಂದು ಬಂಗಾರಪ್ಪ ರಸ್ತೆ ನಾಮಕರಣವಾಗುತ್ತಿರುವುದು ಹಿರಿಯ ಚೇತನಗಳ ಆಶೀರ್ವಾದವಾಗಿದೆ. ಉಸ್ತುವಾರಿ ಸಚಿವನಾಗಿ ಈ ಕಾರ್ಯಕ್ರಮ ಉದ್ಘಾಟಿಸುತ್ತಿರುವುದಕ್ಕೆ ನನಗೆ ಹೆಮ್ಮೆ ಮತ್ತು ನನ್ನ ಪುಣ್ಯ. ಬಂಗಾರಪ್ಪನವರ ತತ್ವ, ಸಿದ್ದಾಂತಗಳನ್ನು ಅನುಸರಿಸಿಕೊಂಡು ಹೋಗುತ್ತಿದ್ದೇನೆ ಎಂದರು.

ಆಶ್ರಯ, ಆರಾಧನಾ, ಗ್ರಾಮೀಣ ಕೃಪಾಂಕ ಯೋಜನೆಗಳು ರೈತರ 20 ಎಚ್‌ಪಿ ಪಂಪ್ ಸೆಟ್‌ಗೆ ಉಚಿತ ವಿದ್ಯುತ್ ನೀಡಿ ರೈತರ ನೆರವಿಗೆ ಬಂದಿರುವುದನ್ನು ನಾವು ಸದಾ ಸ್ಮರಿಸಬೇಕು ಎಂದರು.

ಮಾನವೀಯತೆ ಸೇರಿದಂತೆ ಜೀವನಕ್ಕೆ ಅಗತ್ಯವಾದ ಎಲ್ಲವನ್ನು ನೀಡುವ ಶಿಕ್ಷಣ ಬಹಳ ಮುಖ್ಯವೆಂದು ಹೇಳುತ್ತಿದ್ದ ಬಂಗಾರಪ್ಪನವರು ಅಂದು ಒಂದು ಅದ್ಭುತ ಕಾರ್ಯಕ್ರಮ ತಂದರು. 90ರ ದಶಕದಲ್ಲಿ ಬಡ ವರ್ಗಕ್ಕೆ ಶಿಕ್ಷಣ ಬಹಳ ಕಷ್ಟವಾಗಿತ್ತು. ಅಂತಹ ಸಂದರ್ಭದಲ್ಲಿ ಶಾಲೆಗೆ ಬರುವ ಮಕ್ಕಳಿಗೆ ಪ್ರತಿ ದಿನ 1 ರು. ಅನ್ನು ಅವರ ತಾಯಿಯ ಕೈಯಲ್ಲಿ ನೀಡುವ ಯೋಜನೆ ಜಾರಿಗೆ ತಂದು, ಬಡವರ ಮಕ್ಕಳು ಶಾಲೆಗೆ ಬರುವಂತೆ ಮಾಡಿದರು ಎಂದ ಅವರು, ಲೋಹಿಯಾ, ಗೋಪಾಲಗೌಡರು, ಕಾಗೋಡು ತಿಮ್ಮಪ್ಪ, ಬಂಗಾರಪ್ಪ ಇವರನ್ನೆಲ್ಲ ನಾವು ಸ್ಮರಿಸಲೇಬೇಕು. ಇವರ ಚಿಂತನೆಗಳು, ಅವರು ಮಾಡಿದ ಕೆಲಸಗಳು ಜೀವಂತವಾಗಿವೆ ಎಂದು ಸ್ಮರಿಸಿದರು.ಶಾಸಕ ಎಸ್.ಎನ್. ಚನ್ನಬಸಪ್ಪ ಮಾತನಾಡಿ, ಗೋಪಾಲಗೌಡ ಬಡಾವಣೆಯ ರಸ್ತೆಗೆ ಬಂಗಾರಪ್ಪನವರ ಹೆಸರನ್ನು ನಾಮಕರಣ ಮಾಡಿರುವುದು ಸಂತಸದ ವಿಷಯ. ಅಂದುಕೊಂಡಂತೆ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಧೀಮಂತ ವ್ಯಕ್ತಿ ಅವರು. ಎಂದಿಗೂ ಅವರು ಜಾತಿಗೆ ಅಂಟಿಕೊಂಡಿರಲಿಲ್ಲ. ರಾಜ್ಯದ ಕಟ್ಟಕಡೆಯ ವ್ಯಕ್ತಿಯ ಬಗ್ಗೆ ಸದಾ ಚಿಂತಿಸುತ್ತಿದ್ದ ಅವರು ಅಕ್ಷಯ, ಆರಾಧನಾ, ಆಶ್ರಯದಂತಹ ಉತ್ತಮ ಯೋಜನೆಗಳನ್ನು ನೀಡಿದ ಶ್ರೇಷ್ಟ ನಾಯಕ. ಬಂಗಾರಪ್ಪನವರು ಬಡವರಿಗೆ ಸೂರು ಒದಗಿಸಲು ತಂದ ಆಶ್ರಯ ಯೋಜನೆಯಡಿ ಬಡವರಿಗೆ ಹಕ್ಕುಪತ್ರಗಳನ್ನು ನೀಡಲಾಗುತ್ತಿದೆ. ಇನ್ನೂ ಹಲವರಿಗೆ ನೀಡಬೇಕಿದೆ ಎಂದರು.

ಕರ್ನಾಟಕ ರಾಜ್ಯ ಎಸಿ/ಎಸ್‌ಟಿ ಅಲೆಮಾರಿಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ, ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ(ವಿದ್ಯುತ್ ಮಗ್ಗಗಳ) ನಿಗಮದ ಅಧ್ಯಕ್ಷ ಕೆ.ಚೇತನ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ, ಡಾ.ಜಿ.ಡಿ.ನಾರಾಯಣಪ್ಪ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ೨೯೦ ಮನೆಗಳಿಗೆ ಹಕ್ಕುಪತ್ರಗಳ ವಿತರಣೆ ಹಾಗೂ ಆಶ್ರಯ ಯೋಜನೆ ಅಡಿಯಲ್ಲಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಮನೆಗಳ ಕೀ ಹಸ್ತಾಂತರ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್, ಪಾಲಿಕೆ ಆಯುಕ್ತ ಮಾಯಣ್ಣಗೌಡ, ಇತರೆ ಮುಖಂಡರು ಪಾಲ್ಗೊಂಡಿದ್ದರು.

1000 ಕೆಪಿಎಸ್ ಶಾಲೆಗೆ ಸಿಎಂರಿಂದ ಶೀಘ್ರ ಗುದ್ದಲಿಪೂಜೆ:ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಉಚಿತವಾಗಿ ಒಂದೇ ಸೂರಿನಡಿ ಶಿಕ್ಷಣ ಮತ್ತು ಉಚಿತ ಸಾರಿಗೆ ವ್ಯವಸ್ಥೆ, ಕಂಪ್ಯೂಟರ್, ಕೌಶಲ್ಯಾಭಿವೃದ್ದಿ, ಕಲೆ ಇತರೆ ಪೂರಕ ಶಿಕ್ಷಣವನ್ನು ನೀಡುವ ೧೦೦೦ ಕೆಪಿಎಸ್ ಶಾಲೆಗಳಿಗೆ ಗುದ್ದಲಿಪೂಜೆಯನ್ನು ಏಪ್ರಿಲ್ ಅಂತ್ಯದಲ್ಲಿ ಮಾನ್ಯ ಮುಖ್ಯಮಂತ್ರಿಯವರು ಶಿವಮೊಗ್ಗದಲ್ಲಿಯೇ ನೆರವೇರಿಸುವರು ಎಂದ ಅವರು ಜಿಲ್ಲಾ ಆಸ್ಪತ್ರೆ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗಳನ್ನು ತರುವ ಹಾಗೂ ಉಳಿದವರಿಗೆ ಹಕ್ಕುಪತ್ರಗಳನ್ನು ನೀಡಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

---

ಹಕ್ಕುಪತ್ರ ಇಲ್ಲದೆ ಭಯದಲ್ಲಿ ಜೀವನ ನಡೆಸುತ್ತಿದ್ದ ಜನರಿಗೆ ಹಕ್ಕುಪತ್ರ ನೀಡುವ ಮೂಲಕ ಧೈರ್ಯ ತುಂಬಲಾಗುತ್ತಿದೆ. ಜಿಲ್ಲೆಯ ಅಭಿವೃದ್ಧಿಗೆ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಶ್ರಮಿಸುತ್ತಿದ್ದಾರೆ.

ಬಲ್ಕೀಶ್ ಬಾನು ,ವಿಧಾನ ಪರಿಷತ್ ಸದಸ್ಯೆ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಹುಲ್‌ ಗಾಂಧಿ ನಡೆ ಖಂಡಿಸಿ ಬಿಜೆಪಿ ಪ್ರತಿಭಟನೆ
ರಸ್ತೆಯಲ್ಲಿ ಒಲೆಯಿಂದ ಅಡುಗೆ ಮಾಡಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರ ಪ್ರತಿಭಟನೆ