ಮೋದಿ ಸರ್ಕಾರದ 11 ವರ್ಷಗಳ ಸಾಧನೆಯ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಛಲವಾದಿ ನಾರಾಯಣಸ್ವಾಮಿ ಅಭಿಮತಕನ್ನಡಪ್ರಭ ವಾರ್ತೆ ಚಿತ್ರದುರ್ಗ
2014 ರಿಂದ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಮೂಲಮಂತ್ರದಡಿ, ಸವಲತ್ತು ಪಡೆದ ಕೆಲವರಿಗೆ ಮಾತ್ರವಲ್ಲದೆ ಎಲ್ಲರನ್ನೂ ಒಳಗೊಳ್ಳುವ ವಿಶಿಷ್ಟ ಅಭಿವೃದ್ಧಿ ಮಾದರಿಯನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪರಿಚಯಿಸಿ, ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಕ್ರಿಯೆ ಆರಂಭಿಸಿತು. ಅಲ್ಲದೆ ಪ್ರತಿಯೊಂದು ಹೆಜ್ಜೆಯೂ‘ಭಾರತ ಮೊದಲು’ ಎಂಬ ಬದ್ಧತೆಯೊಂದಿಗೆ ಮುನ್ನಡೆಯುತ್ತಿರುವ ನಿರ್ಣಾಯಕ ನಾಯಕತ್ವವನ್ನು ಜಗತ್ತಿಗೆ ಸಾರಿ ಹೇಳಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.ನಗರದ ಖಾಸಗಿ ಹೋಟೆಲ್ನಲ್ಲಿ ಮೋದಿ ಸರ್ಕಾರದ 11 ವರ್ಷಗಳ ಸಾಧನೆಯ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಳೆದ 11 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರವು ದಶಕಗಳ ಜಡತ್ವ ಮುರಿದು, ದಿಟ್ಟ ನಿರ್ಧಾರಗಳ ಮೂಲಕ ವಿಕಸಿತ ಭಾರತಕ್ಕೆ ಭದ್ರ ಬುನಾದಿ ಹಾಕಿದೆ ಎಂದು ಹೇಳಿದರು.
ಕರ್ನಾಟಕಕ್ಕೆ ನರೇಂದ್ರ ಮೋದಿ ಸರ್ಕಾರ ಹಲವಾರು ಕೊಡುಗೆಗಳನ್ನು ನೀಡಿದೆ. ಇದರಲ್ಲಿ 2014-2024ರ ಅವಧಿಯಲ್ಲಿ, ಕರ್ನಾಟಕದ ರಸ್ತೆ, ರೈಲ್ವೆ, ನಗರಾಭಿವೃದ್ಧಿ ಮತ್ತು ಇಂಧನ ಕ್ಷೇತ್ರಗಳಲ್ಲಿ 5 ಲಕ್ಷ ಕೋಟಿ ರು.ಗಳಿಗೂ ಹೆಚ್ಚು ಹೂಡಿಕೆ ಮಾಡಿದೆ. ಕರ್ನಾಟಕದಲ್ಲಿ 1,860 ಕಿ.ಮೀ. ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸಲಾಗಿದ್ದು, ಇದು ರಾಜ್ಯದ ಒಟ್ಟು ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಗುಣಗೊಳಿಸಿದೆ. ಬೆಂಗಳೂರು-ಮೈಸೂರು ಎಕ್ಸಪ್ರೆಸ್ ವೇಗೆ 8,408 ಕೋಟಿ ರು. ಮತ್ತು ಬೆಂಗಳೂರಿನ ಸ್ಯಾಟಲೈಟ್ ಟೌನ್ ರಿಂಗ್ ರೋಡ್ಗೆ 27 ಸಾವಿರ ಕೋಟಿ ರು. ಬಿಡುಗಡೆ ಮಾಡಲಾಗಿದೆ. ನೈಋತ್ಯ ರೈಲ್ವೆಗೆ ವಾರ್ಷಿಕ ಸರಾಸರಿ ಅನುದಾನವು ಯುಪಿಎ ಸರ್ಕಾರದ 835 ಕೋಟಿಯಿಂದ, ಮೋದಿ ಸರ್ಕಾರದ ಅವಧಿಯಲ್ಲಿ 3,424 ಕೋಟಿಗೆ ಏರಿಕೆಯಾಗಿದೆ. ರೈಲ್ವೆ ಮಾರ್ಗಗಳ ವಿದ್ಯುದ್ದೀಕರಣದಲ್ಲಿ ಐತಿಹಾಸಿಕ ಪ್ರಗತಿ ಸಾಧಿಸಲಾಗಿದೆ. 2009-14ರ ಅವಧಿಯಲ್ಲಿ ವಾರ್ಷಿಕ ಸರಾಸರಿ ಕೇವಲ 18 ಕಿಮೀ ವಿದ್ಯುದ್ದೀಕರಣವಾಗುತ್ತಿದ್ದರೆ,2014-25ರ ಅವಧಿಯಲ್ಲಿ ಇದು 16 ಪಟ್ಟು ಹೆಚ್ಚಾಗಿದೆ. ವಾರ್ಷಿಕ ಸರಾಸರಿ 294 ಕಿಮೀಗೆ ಏರಿಕೆಯಾಗಿದೆ. ಇಂದು ಕರ್ನಾಟಕದ 96.5% ರೈಲ್ವೆ ಮಾರ್ಗ ವಿದ್ಯುದ್ದೀಕರಣಗೊಂಡಿದೆ. ಕರ್ನಾಟಕದಲ್ಲಿ 10 ವಂದೇ ಭಾರತ್ ರೈಲುಗಳು ಸಂಚರಿಸುತ್ತಿವೆ ಮತ್ತು 56 ರೈಲು ನಿಲ್ದಾಣಗಳನ್ನು ಅಮೃತ ಭಾರತ ಯೋಜನೆಯಡಿ ಆಧುನೀಕರಣಗೊಳಿಸಲಾಗುತ್ತಿದೆ. ಕರ್ನಾಟಕದ ರೈಲ್ವೆ ಅಭಿವೃದ್ಧಿಗೆ ಕೇಂದ್ರ ಸರ್ಕಾರವು ನಿರಂತರವಾಗಿ ಆದ್ಯತೆ ನೀಡುತ್ತಿದ್ದು, ಇದು ರಾಜ್ಯಕ್ಕೆ ನೀಡುವ ವಾರ್ಷಿಕ ಅನುದಾನದ ಹೆಚ್ಚಳದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ.2024-25ರ ಆರ್ಥಿಕ ವರ್ಷದಲ್ಲಿ ರಾಜ್ಯಕ್ಕೆ 7,559 ಕೋಟಿ ರು. ಅನುದಾನ ನೀಡಲಾಗಿದ್ದರೆ, 2025-26ರ ಸಾಲಿಗೆ ಈ ಮೊತ್ತವನ್ನು 7,564 ಕೋಟಿಗಳಿಗೆ ಹೆಚ್ಚಿಸಲಾಗಿದೆ. ಬೆಂಗಳೂರಿನ ಸುತ್ತ 271 ಕಿಮೀ ಉದ್ದದ ವೃತ್ತಾಕಾರದ ರೈಲು ಸಂಪರ್ಕ ಯೋಜನೆಯ ಸಂಪೂರ್ಣ ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸಲಿದೆ.
ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಳೆದ 11 ವರ್ಷಗಳಿಂದ ದೇಶವನ್ನು ಆಳುವುದರ ಮೂಲಕ ಉತ್ತಮವಾದ ಸರ್ಕಾರವನ್ನು ನೀಡಿದ್ದಾರೆ. ಯಾವುದೇ ರೀತಿಯ ಕಳಂಕ ಇಲ್ಲದೆ ಭ್ರಷ್ಠಾಚಾರ ರಹಿತವಾದ ಆಡಳಿತವನ್ನು ನೀಡಿದ್ದಾರೆ. ಇದರ ಬಗ್ಗೆ ತಿಳಿದುಕೊಂಡು ಬೇರೆ ಪಕ್ಷದವರು ಹೇಳುವ ಸುಳ್ಳು ಮಾತಿಗಳಿಗೆ ಸರಿಯಾದ ಉತ್ತರವನ್ನು ನಮ್ಮ ಪಕ್ಷದ ಮುಖಂಡರು ಕಾರ್ಯಕರ್ತರು ನೀಡಬೇಕಿದೆ ಎಂದರು.ಜಿಲ್ಲಾಧ್ಯಕ್ಷರಾದ ಎ ಮುರುಳಿ, ನಿಯೋಜಿತ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಬಾಳೆಕಾಯಿ ರಾಮದಾಸ್, ಜಿ.ಟಿ.ಸುರೇಶ್, ಅಭಿಯಾನದ ಪ್ರಮುಖರಾದ ಡಾ.ಮಂಜುನಾಥ್, ಜಿ.ಎಚ್.ಮೋಹನ್ ಕುಮಾರ್, ಸಿಂಧು ಅಶೋಕ್, ಕಾರ್ಯಕರ್ತರು, ಪದಾಧಿಕಾರಿಗಳು ಉಪಸ್ಥಿತರಿದ್ದರು.