ಕನ್ನಡಪ್ರಭ ವಾರ್ತೆ ಮಂಡ್ಯ
ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಚಿನ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಟಿ.ಚಲುವರಾಜು ಅವರನ್ನು ನೇಮಕ ಮಾಡುವುದಕ್ಕೆ ಶಾಸಕರು ಹಾಗೂ ಬ್ಯಾಂಕ್ ನಿರ್ದೇಶಕರು ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿದ್ದರು.
ಶುಕ್ರವಾರ ನಿಗದಿಯಾಗಿದ್ದ ಚುನಾವಣೆ ವೇಳೆ ಕಾಂಗ್ರೆಸ್ ಗೆ ಪೂರ್ಣ ಬಹುಮತವಿದ್ದ ಕಾರಣ ಹಾಗೂ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಚುನಾವಣೆ ನಡೆಯದೆ ಎರಡೂ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅವಿರೋಧವಾಗಿ ಘೋಷಿಸಲಾಯಿತು. ಚುನಾವಣಾಧಿಕಾರಿ ಎಂ.ಶಿವಸ್ವಾಮಿ ಅವರು ನೂತನ ಅಧ್ಯಕ್ಷ- ಉಪಾಧ್ಯಕ್ಷರಿಗೆ ಪ್ರಮಾಣಪತ್ರ ವಿತರಿಸಿದರು.ಬ್ಯಾಂಕ್ ಎದುರು ಸಂಭ್ರಮಾಚರಣೆ:
ಮಾಜಿ ಶಾಸಕ ಎಚ್.ಬಿ.ರಾಮು, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್, ತಾಪಂ ಮಾಜಿ ಅಧ್ಯಕ್ಷ ಸಿ.ತ್ಯಾಗರಾಜು, ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಕಂಬದಹಳ್ಳಿ ಪುಟ್ಟಸ್ವಾಮಿ, ಸಿ.ಎಂ.ದ್ಯಾವಪ್ಪ, ಚಂದಗಾಲು ವಿಜಯಕುಮಾರ್ ಇತರರು ಇದ್ದರು.
ರೈತರಿಗೆ ಬೆನ್ನೆಲುಬಾಗಿ ನಿಲ್ಲುವೆ: ಸಚಿನ್ ಚಲುವರಾಯಸ್ವಾಮಿ
ಡಿಸಿಸಿ ಬ್ಯಾಂಕಿನ ಶ್ರೇಯೋಭಿವೃದ್ಧಿ ಹಾಗೂ ರೈತರಿಗೆ ಬೆನ್ನೆಲುಬಾಗಿ ನಿಲ್ಲುವುದು ನನ್ನ ಪರಮೋಚ್ಛ ಗುರಿಯಾಗಿದೆ. ಈ ಗುರಿ ಸಾಧನೆಗೆ ಬ್ಯಾಂಕಿನ ಹಿರಿಯರ ಅಧ್ಯಕ್ಷರು- ನಿರ್ದೇಶಕರೆಲ್ಲರ ಮಾರ್ಗದರ್ಶನ ಪಡೆದು ಅವರೆಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುವುದಾಗಿ ನೂತನ ಅಧ್ಯಕ್ಷ ಸಚಿನ್ ಚಲುವರಾಯಸ್ವಾಮಿ ವಿಶ್ವಾಸದಿಂದ ನುಡಿದರು.
ಡಿಜಿಟಲ್ ಯುಗದಲ್ಲಿ ಬ್ಯಾಂಕಿನ ಆಡಳಿತ ವ್ಯವಸ್ಥೆಯನ್ನು ತಾಂತ್ರಿಕವಾಗಿ ಅಭಿವೃದ್ಧಿಪಡಿಸುವುದು, ಎಟಿಎಂ, ನೆಟ್ಬ್ಯಾಂಕಿಂಗ್ ಅಳವಡಿಸುವುದು, ರೈತರಿಗೆ ಹೆಚ್ಚು ಬೆಂಬಲವಾಗಿ ನಿಂತು ಕೆಲಸ ಮಾಡುವುದಕ್ಕೆ ಮೊದಲ ಆದ್ಯತೆ ನೀಡಲಾಗುವುದು. ರೈತರಿಗೆ ಹೆಚ್ಚು ಸಾಲ ನೀಡುವ ಮೂಲಕ ಆರ್ಥಿಕವಾಗಿ ಸದೃಢಗೊಳ್ಳುವಂತೆ ಮಾಡುವ ಕಾರ್ಯಯೋಜನೆ ರೂಪಿಸಿಕೊಂಡಿರುವುದಾಗಿ ಹೇಳಿದರು.
ಪಕ್ಷದಲ್ಲಿ ಕಳೆದೊಂದು ವರ್ಷದಿಂದಲೂ ಸಕ್ರಿಯನಾಗಿ ತೊಡಗಿಸಿಕೊಂಡು ಕೆಲಸ ಮಾಡುತ್ತಿದ್ದೇನೆ. ನನ್ನ ಕಾರ್ಯವೈಖರಿಯನ್ನು ನೋಡಿ ಎಲ್ಲರೂ ನನಗೆ ಬೆಂಬಲವಾಗಿ ನಿಂತಿದ್ದಾರೆ. ಬ್ಯಾಂಕಿನಲ್ಲಿ ಎರಡೆರಡು ಬಾರಿ ಅಧ್ಯಕ್ಷರಾಗಿರುವ ಹಿರಿಯರಿದ್ದರೂ ನನಗೆ ಅವಕಾಶವನ್ನು ನೀಡಿದ್ದಾರೆ. ಅವರೆಲ್ಲರ ಸಹಕಾರದೊಂದಿಗೆ ಬ್ಯಾಂಕ್ ಅಭಿವೃದ್ಧಿಗೆ ದುಡಿಯುವುದಾಗಿ ಹೇಳಿದರು.
--
ಅತಿ ಕಿರಿಯ ವಯಸ್ಸಿನ ಅಧ್ಯಕ್ಷನೆಂಬ ದಾಖಲೆಕನ್ನಡಪ್ರಭ ವಾರ್ತೆ ಮಂಡ್ಯ
ಡಿಸಿಸಿ ಬ್ಯಾಂಕಿನ ಇತಿಹಾಸದಲ್ಲೇ ಇದೇ ಪ್ರಥಮ ಬಾರಿಗೆ ಅತಿ ಕಿರಿಯ (33) ವಯಸ್ಸಿನ ಯುವಕರೊಬ್ಬರಿಗೆ ಅಧ್ಯಕ್ಷ ಸ್ಥಾನ ದೊರಕಿದೆ. ಆ ದಾಖಲೆಯನ್ನು ಸಚಿನ್ ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಇಷ್ಟೊಂದು ಕಿರಿಯ ವಯಸ್ಸಿಗೆ ಇದುವರೆಗೆ ಯಾರೊಬ್ಬರಿಗೂ ಅಧ್ಯಕ್ಷ ಸ್ಥಾನ ದೊರಕಿರಲಿಲ್ಲ. ವಯಸ್ಸು, ಅನುಭವ, ಕಾರ್ಯಕ್ಷಮತೆಯನ್ನು ಆಧರಿಸಿ ಅಧಿಕಾರವನ್ನು ನೀಡಲಾಗುತ್ತಿತ್ತು. ಬ್ಯಾಂಕಿಗೆ ಮೊದಲು ಒಂದು ಅಥವಾ ಎರಡು ಬಾರಿ ನಿರ್ದೇಶಕರಾಗಿ ಗೆದ್ದು ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದರು. ಆದರೆ, ಸಚಿನ್ ಚಲುವರಾಯಸ್ವಾಮಿ ಕೇವಲ ಎಂಟು ತಿಂಗಳ ಅವಧಿಯಲ್ಲಿ ಬ್ರಹ್ಮದೇವರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರು, ಅಧ್ಯಕ್ಷರಾಗಿ ಅಧಿಕಾರ ನಡೆಸಿದ ಬಳಿಕ ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಅಧ್ಯಕ್ಷ ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿಯೂ ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ.