ಸಿದ್ದು ತವರಿನಲ್ಲಿ ಇಂದು ಸಾಧನಾ ಸಮಾವೇಶ

KannadaprabhaNewsNetwork |  
Published : Jul 19, 2025, 02:00 AM ISTUpdated : Jul 19, 2025, 11:40 AM IST
Karnataka Chief Minister Siddaramaiah (File Photo/ANI)

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸಿದ್ದು ತವರು, ಮೈಸೂರಲ್ಲಿ ಶನಿವಾರ ಸರ್ಕಾರದ ಸಾಧನೆಗಳ ಸಮಾವೇಶ ನಡೆಸಲಾಗುತ್ತಿದೆ.

 ಮೈಸೂರು :  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸಿದ್ದು ತವರು, ಮೈಸೂರಲ್ಲಿ ಶನಿವಾರ ಸರ್ಕಾರದ ಸಾಧನೆಗಳ ಸಮಾವೇಶ ನಡೆಸಲಾಗುತ್ತಿದೆ. ಸಾಧನಾ ಸಮಾವೇಶದ ಹೆಸರಲ್ಲಿ ಸಿದ್ದರಾಮಯ್ಯನವರ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜುಗೊಂಡಿದೆ. ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುವ ಸರ್ಕಾರದ ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿಯವರು ಸುಮಾರು ₹2,600 ಕೋಟಿಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

ಶನಿವಾರ ಬೆಳಗ್ಗೆ 11ಕ್ಕೆ ಮಹಾರಾಜ ಕಾಲೇಜು ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್‌, ಉಸ್ತುವಾರಿ ಸಚಿವ ಎಚ್‌.ಸಿ.ಮಹದೇವಪ್ಪ, ಕೆ.ವೆಂಕಟೇಶ್‌, ಸಂಪುಟದ ಸಚಿವರು, ಮೈಸೂರು ಹಾಗೂ ಚಾಮರಾಜನಗರ ಭಾಗದ ಶಾಸಕರು, ಮಾಜಿ ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು, ಜನಪ್ರತಿನಿಧಿಗಳು, ಅಧಿಕಾರಿ ವರ್ಗದವರು ಹಾಗೂ ಮುಖಂಡರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದಕ್ಕಾಗಿ ಬೃಹತ್‌ ವೇದಿಕೆ ನಿರ್ಮಿಸಲಾಗಿದೆ. ಕಾರ್ಯಕ್ರಮದ ವೇದಿಕೆಯ ಮುಂಭಾಗ ರ್‍ಯಾಂಪ್‌ ನಿರ್ಮಿಸಲಾಗಿದ್ದು, ಈ ರ್‍ಯಾಂಪ್‌ ಮೂಲಕ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರನ್ನು ಹೊತ್ತು ಮೆರೆಸಲು ಸಿದ್ಧತೆ ನಡೆಸಲಾಗಿದೆ. ಈ ರ್‍ಯಾಂಪ್‌ ಮೂಲಕ ನೆರೆದಿರುವ ಕಾರ್ಯಕರ್ತರ ಬಳಿ ಸಿದ್ದರಾಮಯ್ಯ ತೆರಳಲು ವ್ಯವಸ್ಥೆ ಮಾಡಲಾಗಿದೆ. ವೇದಿಕೆಯಿಂದ ಕಾರ್ಯಕರ್ತರ ಕಡೆಗೆ ಸುಮಾರು 200 ಮೀಟರ್ ಉದ್ದದ ರ್‍ಯಾಂಪ್‌ ನಿರ್ಮಿಸಲಾಗಿದೆ. ಈ ಅದ್ದೂರಿ ಸಮಾವೇಶದಲ್ಲಿ ಸುಮಾರು 1 ಲಕ್ಷ ಜನ ಭಾಗವಹಿಸುವ ನಿರೀಕ್ಷೆಯಿದೆ.

ಸಮಾವೇಶದ ಹಿನ್ನೆಲೆಯಲ್ಲಿ ಇಡೀ ನಗರ ಕಾಂಗ್ರೆಸ್‌ಮಯವಾಗಿದೆ. ನಗರದ ಪ್ರಮುಖ ವೃತ್ತಗಳು, ರಸ್ತೆಗಳ ಎಲ್ಲಡೆ ಕಾಂಗ್ರೆಸ್ ಬಾವುಟಗಳು, ಕಾಂಗ್ರೆಸ್‌ನ ನಾಯಕರಿಗೆ ಶುಭ ಕೋರುವ ಬಂಟಿಂಗ್ಸ್‌ಗಳು ರಾರಾಜಿಸುತ್ತಿವೆ. ಸರ್ಕಾರದ ಸಾಧನೆಗಳನ್ನು ಪ್ರತಿಬಿಂಬಿಸುವ ಭಿತ್ತಿಪತ್ರಗಳು ಎಲ್ಲೆಡೆ ರಾರಾಜಿಸುತ್ತಿವೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಎಲ್ಲೆಡೆ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ.

ಸಮಾವೇಶಕ್ಕೆ ಆಗಮಿಸುವ ಸಾರ್ವಜನಿಕರಿಗೆ ಅಗತ್ಯ ಆಸನದ ವ್ಯವಸ್ಥೆ, ಆಗಮನ ಹಾಗೂ ನಿರ್ಗಮನಕ್ಕೆ ಪ್ರತ್ಯೇಕ ಗೇಟ್‌ ಗಳ ನಿರ್ಮಾಣ ಮಾಡಲಾಗಿದೆ. ಎಲ್ಲರಿಗೂ ಕುಡಿಯುವ ನೀರು, ಶೌಚಾಲಯ, ಊಟ, ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಸಮಾವೇಶಕ್ಕೆ ಆಗಮಿಸುವ ಕಾರ್ಯಕರ್ತರಿಗೆ ಸಾರಿಗೆ ವ್ಯವಸ್ಥೆ ಕೂಡ ಕಲ್ಪಿಸಲಾಗಿದೆ.

PREV
Read more Articles on

Latest Stories

ಧರ್ಮಸ್ಥಳ ಕೇಸ್‌ ಎನ್‌ಐಎಗೆ ವಹಿಸಿ : ಶಾಗೆ ಕೇರಳ ಸಂಸದ
ಲಾಸ್ಟ್‌ ಬೆಂಚ್‌ ಇಲ್ಲದ ರಾಜ್ಯದ ಮೊದಲ ಶಾಲೆ ಯಲ್ಬುರ್ಗಾದಲ್ಲಿ
ರೈತರು ಜನಸಾಮಾನ್ಯರೊಂದಿಗೆ ಸ್ಪಂದಿಸಿ ಸರ್ವೇ ಕಾರ್ಯ ನಡೆಸಲು ಮನವಿ