ಗದಗ: ಸಮಾಜದ ನೈರ್ಮಲ್ಯ ಕಾಪಾಡುವಲ್ಲಿ ಸಫಾಯಿ ಕರ್ಮಚಾರಿಗಳ ಸೇವೆ ಅತ್ಯಮೂಲ್ಯವಾದುದು. ಅವರ ಶ್ರಮಕ್ಕೆ ಗೌರವ ನೀಡುವುದು ಮತ್ತು ಅವರ ಸಾಮಾಜಿಕ ಭದ್ರತೆಯನ್ನು ಖಚಿತಪಡಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಜಿಲ್ಲಾಧಿಕಾರಿ ಸಿ ಎನ್. ಶ್ರೀಧರ್ ತಿಳಿಸಿದರು.
ಸಫಾಯಿ ಕರ್ಮಚಾರಿಗಳಿಗೆ ನಿಯಮಿತವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲು ಮತ್ತು ಅಗತ್ಯ ವೈದ್ಯಕೀಯ ಕಿಟ್ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುವುದು. ಪ್ರತಿಯೊಬ್ಬ ಕರ್ಮಚಾರಿಗೂ ಆಧುನಿಕ ಸುರಕ್ಷತಾ ಪರಿಕರಗಳಾದ ಗ್ಲೌಸ್, ಮಾಸ್ಕ್, ಬೂಟು ಮತ್ತು ಸಮವಸ್ತ್ರಗಳನ್ನು ವಿಳಂಬವಿಲ್ಲದೆ ಒದಗಿಸಲಾಗುವುದು ಎಂದರು.
ಯಾವುದೇ ಸಮಸ್ಯೆಗಳಿದ್ದಲ್ಲಿ ತಕ್ಷಣವೇ ಕರ್ಮಚಾರಿಗಳು ನೇರವಾಗಿ ನಮ್ಮ ಗಮನಕ್ಕೆ ತರಬಹುದು. ಸಫಾಯಿ ಕರ್ಮಚಾರಿಗಳಿಗೆ ಮೀಸಲಿರುವ ವಸತಿ ಯೋಜನೆಗಳ ಅಡಿಯಲ್ಲಿ ಬಾಕಿ ಇರುವ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಿ, ಅರ್ಹರಿಗೆ ಮನೆಗಳನ್ನು ಒದಗಿಸಲು ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.ಸಭೆಯಲ್ಲಿ ಸಫಾಯಿ ಕರ್ಮಚಾರಿಗಳ ಕ್ಷೇಮಾಭಿವೃದ್ಧಿ, ಆರೋಗ್ಯ ತಪಾಸಣೆ, ವೇತನ ಪಾವತಿ ಮತ್ತು ಸರ್ಕಾರದ ಸೌಲಭ್ಯಗಳು ತಲುಪುತ್ತಿರುವ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು. ಸಫಾಯಿ ಕರ್ಮಚಾರಿಗಳು ಎದುರಿಸುತ್ತಿರುವ ಸವಾಲುಗಳು, ವೇತನ ವಿಳಂಬ, ಆರೋಗ್ಯ ಸುರಕ್ಷತೆ ಮತ್ತು ಸರ್ಕಾರದ ವಿವಿಧ ಸೌಲಭ್ಯಗಳ ಅನುಷ್ಠಾನದ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು.