ವಸ್ತುನಿಷ್ಠ ವರದಿ ಮೂಲಕ ಸಮಾಜದ ಹಿತ ಕಾಪಾಡಿ: ಶಾಸಕ ಪ್ರಭು ಚವ್ಹಾಣ್‌

KannadaprabhaNewsNetwork |  
Published : Jul 30, 2026, 01:45 AM IST
ಚಿತ್ರ 29ಬಿಡಿಆರ್2ಔರಾದ್‌ ಪಟ್ಟಣದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಬುಧವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಔರಾದ್‌ ತಾಲೂಕು ಘಟಕದಿಂದ ಪತ್ರಿಕಾ ದಿನಾಚರಣೆ ಆಯೋಜಿಸಲಾಗಿತ.್ತು | Kannada Prabha

ಸಾರಾಂಶ

ಔರಾದ್‌ ಪಟ್ಟಣದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಔರಾದ್‌ ತಾಲೂಕು ಘಟಕದಿಂದ ಪತ್ರಿಕಾ ದಿನಾಚರಣೆ ಆಯೋಜಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ಔರಾದ್‌

ಪತ್ರಕರ್ತರು ಆಸೆ, ಆಮೀಷಗಳಿಗೆ ಒಳಗಾಗದೆ ವಸ್ತುನಿಷ್ಠ ವರದಿಗಳ ಮೂಲಕ ಸಮಾಜದ ಹಿತ ಕಾಪಾಡುತ್ತಿದ್ದು ಅದನ್ನು ಮುಂದುವರೆಸಲಿ ಎಂದು ಶಾಸಕ ಪ್ರಭು ಚವ್ಹಾಣ್‌ ಕರೆ ನೀಡಿದರು.

ಅವರು ಪಟ್ಟಣದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಬುಧವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಔರಾದ್‌ ತಾಲೂಕು ಘಟಕದಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗದ ಸಮಸ್ಯೆಗಳು, ಜನರ ಸಂಕಷ್ಟಗಳು ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಬೆಳಕಿಗೆ ತರುವಲ್ಲಿ ಪತ್ರಿಕೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದರು.

ಸಮಾಜದ ಆಗುಹೋಗುಗಳನ್ನು ಜನರ ಮುಂದಿಡುವ ಜವಾಬ್ದಾರಿಯುತ ಕೆಲಸವನ್ನು ಪತ್ರಕರ್ತರು ಮಾಡುತ್ತಿರುವ ತಾಲೂಕಿನ ಪತ್ರಕರ್ತರ ಬಹುದಿನಗಳ ಬೇಡಿಕೆಯಾದ ಪತ್ರಿಕಾ ಭವನ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡುವದಲ್ಲದೆ ಸರ್ಕಾರದ ಮಟ್ಟದಲ್ಲಿಯೂ ಸಹಕಾರ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಭಾಲ್ಕಿ ಹಿರೇಮಠ ಸಂಸ್ಥಾನದ ಮಹಾಲಿಂಗದೇವರು ಸಾನಿಧ್ಯ ವಹಿಸಿ ಮಾತನಾಡಿ, ಪತ್ರಿಕೋದ್ಯಮವು ಸಮಾಜದ ಕನ್ನಡಿ ಇದ್ದಂತೆ. ಸತ್ಯ, ನ್ಯಾಯ ಮತ್ತು ಜನಪರ ವಿಚಾರಗಳನ್ನು ಎತ್ತಿ ಹಿಡಿಯುವ ಮೂಲಕ ಪತ್ರಕರ್ತರು ಸಮಾಜದಲ್ಲಿ ಜಾಗೃತಿ ಮೂಡಿಸುವ ಮಹತ್ವದ ಕಾರ್ಯ ಮಾಡುತ್ತಿದ್ದಾರೆ. ಉತ್ತಮ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಸೇವೆ ಅನನ್ಯವಾಗಿದೆ ಎಂದು ಹೇಳಿದರು.

ಕಲಬುರಗಿಯ ಹಿರಿಯ ಪತ್ರಕರ್ತರಾದ ಬಾಬುರಾವ್‌ ಯಡ್ರಾಮಿ ಅವರು ವಿಶೇಷ ಉಪನ್ಯಾಸ ನೀಡಿ, ಪತ್ರಿಕೋದ್ಯಮದ ಇತಿಹಾಸ, ಇಂದಿನ ಸವಾಲುಗಳು ಹಾಗೂ ಗ್ರಾಮೀಣ ಪತ್ರಕರ್ತರ ಜವಾಬ್ದಾರಿಗಳ ಕುರಿತು ವಿವರಿಸಿ ಪತ್ರಕರ್ತರು ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವುದರ ಜೊತೆಗೆ ಜನರ ಧ್ವನಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಡಿವೈಎಸ್ಪಿ ಬಲ್ಲಪ್ಪ ನಂದಗಾಂವೆ ಮಾತನಾಡಿ, ಪೊಲೀಸ್‌ ಇಲಾಖೆ ಮತ್ತು ಮಾಧ್ಯಮಗಳ ನಡುವೆ ಉತ್ತಮ ಬಾಂಧವ್ಯ ಅಗತ್ಯವಾಗಿದೆ. ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪತ್ರಕರ್ತರ ಸಹಕಾರವೂ ಮಹತ್ವದ್ದಾಗಿದೆ. ವಸ್ತುನಿಷ್ಠ ವರದಿಗಳು ಆಡಳಿತ ವ್ಯವಸ್ಥೆಗೆ ಮಾರ್ಗದರ್ಶನ ನೀಡುತ್ತವೆ ಎಂದರು.

ಸಂಘದ ಜಿಲ್ಲಾಧ್ಯಕ್ಷ ಆನಂದ ದೇವಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮೀಣ ಭಾಗದ ಪತ್ರಕರ್ತರು ಹಲವು ಸವಾಲುಗಳ ನಡುವೆಯೂ ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದಾರೆ. ಪತ್ರಕರ್ತರ ಹಿತಾಸಕ್ತಿ ರಕ್ಷಣೆಗಾಗಿ ಸಂಘವು ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು. ಸಂಘದ ತಾಲೂಕು ಅಧ್ಯಕ್ಷ ಶಿವಾನಂದ ಮೊಕ್ತೆದಾರ್‌ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್‌ ಮಹೇಶ ಪಾಟೀಲ್‌, ತಾಪಂ ಇಒ ಕಿರಣ ಪಾಟೀಲ್‌, ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ, ಸಂಘದ ಕಾರ್ಯದರ್ಶಿ ಅನಿಲಕುಮಾರ ದೇಶಮುಖ, ಹಿರಿಯ ಪತ್ರಕರ್ತರಾದ ಶರಣಪ್ಪ ಚಿಟ್ಮೆ, ಚನ್ನಬಸವ ಮೊಕ್ತೆದಾರ್‌, ರತಿಕಾಂತ, ರವೀಂದ್ರ ಮೊಕ್ತೆದಾರ್, ಅಂಬ್ರೇಶ ಚಿದ್ರೆ, ಬಾಲಾಜಿ ಕುಂಬಾರ, ಅಹ್ಮದ ಜಂಬಗಿ, ಅಮರ ಸ್ವಾಮಿ, ಶಿವಕುಮಾರ ಸಾದುರೆ, ರಾಚಯ್ಯ ಸ್ವಾಮಿ, ರವಿಕುಮಾರ ಶಿಂಧೆ, ಲಕ್ಷ್ಮಣ ರಾಠೋಡ, ರಾಜಕುಮಾರ ಚಾಂಬೋಳೆ, ಪ್ರಭು ಸ್ವಾಮಿ, ಅಂಬಾದಾಸ ನೇಳಗೆ, ಶಿವಾನಂದ ಬೇಂದ್ರೆ, ವಿನೋದ ಚಿದ್ರೆ, ಅರವಿಂದ ಮಲ್ಲಿಗೆ ಸೇರಿದಂತೆ ಅನೇಕರು ಭಾಗವಹಿಸಿದ್ದರು. ಮಲ್ಲಪ್ಪ ಗೌಡಾ ಸ್ವಾಗತಿಸಿ ರಿಯಾಜಪಾಶಾ ಕೊಳ್ಳುರ್‌ ನಿರೂಪಿಸಿದರೆ ಮನ್ಮಥ ಸ್ವಾಮಿ ವಂದಿಸಿದರು.

ಕನ್ನಡ ಜಂಗಮ ಪ್ರಶಸ್ತಿ ಪ್ರದಾನ:

ಹಿರಿಯ ಪತ್ರಕರ್ತ, ಕಲಬುರಗಿ ಕೆಯುಡಬ್ಲುಜೆ ಜಿಲ್ಲಾಧ್ಯಕ್ಷ ಬಾಬುರಾವ್‌ ಯಡ್ರಾಮಿ ಅವರು ಮೂರು ದಶಕಗಳಿಗೂ ಅಧಿಕ ಕಾಲ ಪತ್ರಿಕಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸತ್ಯ, ನ್ಯಾಯ ಮತ್ತು ಸಾರ್ವಜನಿಕ ಹಿತಾಸಕ್ತಿಯನ್ನು ಕೇಂದ್ರವಾಗಿಟ್ಟುಕೊಂಡು ವರದಿಗಳನ್ನು ನೀಡುತ್ತಾ ಬಂದಿರುವ ಅವರು ಗ್ರಾಮೀಣ ಭಾಗದ ಜನರ ಧ್ವನಿಯಾಗಿ ಗುರುತಿಸಿಕೊಂಡಿದ್ದಾರೆ. ಅದಕ್ಕಾಗಿ ಸಂಘವು ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ಅವರ ಅಮೃತ ಮಹೋತ್ಸವದ ಸ್ಮರಣಾರ್ಥವಾಗಿ ರಾಜ್ಯ ಮಟ್ಟದ ‘ಕನ್ನಡ ಜಂಗಮ ಪ್ರಶಸ್ತಿ’ ನೀಡಿ ಗೌರವಿಸಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಡತನ ಮೀರಿ ನೀಟ್‌ ಪರೀಕ್ಷೆಯಲ್ಲಿ ಸಾಧನೆಗೈದ ಕುಮಾರಸ್ವಾಮಿ
ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಚನ್ನಪಟ್ಟಣದಲ್ಲಿ ಪ್ರತಿಭಟನೆ