ಕನ್ನಡಪ್ರಭ ವಾರ್ತೆ ಮಹಾಲಿಂಗಪುರ
ಪಟ್ಟಣದ ಶರಣ ಆಸ್ಪತ್ರೆಯಲ್ಲಿ ಶನಿವಾರ ಸಂಜೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ರಾಜಕೀಯದಲ್ಲಿ ವಿನಯ್ ಕುಲಕರ್ಣಿ ಅವರು ತಮ್ಮದೇ ಆದ ಪ್ರಭಾವ ಹೊಂದಿರುವ ನಾಯಕರಾಗಿದ್ದು, ಕಾಂಗ್ರೆಸ್ ಪಕ್ಷವನ್ನು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಪಕ್ಷದ ಕಷ್ಟದ ದಿನಗಳಲ್ಲಿಯೂ ನಿಷ್ಠೆಯಿಂದ ದುಡಿದು ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಿದ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಸಲ್ಲುತ್ತದೆ ಎಂದರು.
ಪಂಚಮಸಾಲಿ ಸಮಾಜವು ರಾಜ್ಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡುತ್ತಿದ್ದು, ಸಮಾಜದ ಭಾವನೆಗಳಿಗೆ ಸರ್ಕಾರ ಸ್ಪಂದಿಸಬೇಕಾಗಿದೆ. ವಿನಯ್ ಕುಲಕರ್ಣಿ ಅವರಿಗೆ ಸಚಿವ ಸ್ಥಾನ ನೀಡುವುದು ಕೇವಲ ಒಬ್ಬ ವ್ಯಕ್ತಿಗೆ ಗೌರವ ನೀಡುವುದಲ್ಲ, ಉತ್ತರ ಕರ್ನಾಟಕದ ಜನರ ಆಶಯಕ್ಕೆ ಹಾಗೂ ಪಂಚಮಸಾಲಿ ಸಮಾಜದ ನಿರೀಕ್ಷೆಗೆ ಗೌರವ ನೀಡಿದಂತಾಗುತ್ತದೆ. ರಾಜ್ಯದ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ಉತ್ತರ ಕರ್ನಾಟಕದ ಜನರ ಭಾವನೆಗಳನ್ನು ಅರ್ಥಮಾಡಿಕೊಂಡು, ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ವಿನಯ್ ಕುಲಕರ್ಣಿ ಅವರಿಗೆ ಆದ್ಯತೆ ನೀಡಿ ಮಹತ್ವದ ಖಾತೆಯೊಂದಿಗೆ ಸಚಿವರನ್ನಾಗಿ ನೇಮಕ ಮಾಡಬೇಕು. ಇದರಿಂದ ಪಕ್ಷದ ಸಂಘಟನೆ ಇನ್ನಷ್ಟು ಬಲಿಷ್ಠವಾಗುವುದರ ಜೊತೆಗೆ ಅಭಿವೃದ್ಧಿ ಕಾರ್ಯಗಳಿಗೆ ಹೊಸ ಚೈತನ್ಯ ಸಿಗಲಿದೆ ಎಂದು ಅವರು ಒತ್ತಾಯಿಸಿದರು. ಈ ವೇಳೆ ಮಹಾದೇವ ಮಾರಾಪುರ, ಹಣಮಂತ ಶಿರೋಳ, ವಿನೋದ ಉಳ್ಳಾಗಡಿ, ವೀರೇಶ ಆಸಂಗಿ, ಮುತ್ತಪ್ಪ ಹೊಸಪೇಟೆ, ವಿರೂಪಾಕ್ಷ ಉಳ್ಳಾಗಡಿ, ಮಹಾಲಿಂಗಪ್ಪ ಅವರಾದಿ, ದುಂಡಪ್ಪ ಇಟ್ನಾಳ, ಬಸವರಾಜ ದಲಾಲ, ಶ್ರೀಶೈಲಪ್ಪ ಉಳ್ಳಾಗಡಿ, ಚನ್ನಬಸು ಯರಗಟ್ಟಿ, ಚನ್ನಪ್ಪ ಪಟ್ಟಣಶೆಟ್ಟಿ ಸೇರಿದಂತೆ ಸಮಾಜದ ಮುಖಂಡರು, ಕಾರ್ಯಕರ್ತರು ಹಾಗೂ ಪಂಚಮಸಾಲಿ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.