ಶಿಗ್ಗಾಂವಿ ಉಪಚುನಾವಣೆ : ನನ್ನ ಗೆಲುವಿಗೆ ಸತೀಶ ಜಾರಕಿಹೊಳಿ ಕಾರಣ : ಯಾಸೀರ್ ಅಹ್ಮದ್ ಖಾನ್ ಪಠಾಣ್

KannadaprabhaNewsNetwork |  
Published : Nov 25, 2024, 01:03 AM ISTUpdated : Nov 25, 2024, 11:49 AM IST
ಶಿಗ್ಗಾವಿ ಕ್ಷೇತ್ರದಿಂದ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಶಾಸಕ ಯಾಸೀರ್‌ ಅಹ್ಮದ ಖಾನ್‌ ಪಠಾಣ ಅವರು ಬೆಳಗಾವಿಗೆ ಆಗಮಿಸಿ, ಸಚಿವ ಸತೀಶ ಜಾರಕಿಹೊಳಿ ಅವರಿಗೆ ಕೃತಜ್ಞತೆ ಸಲ್ಲಿಸಿದರು | Kannada Prabha

ಸಾರಾಂಶ

ಶಿಗ್ಗಾಂವಿ ಕ್ಷೇತ್ರದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ ಬೆಳಗಾವಿಗೆ ಆಗಮಿಸಿದ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಪಠಾಣ್ ಸಚಿವ ಸತೀಶ ಜಾರಕಿಹೊಳಿ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದರು.

 ಬೆಳಗಾವಿ : ಶಿಗ್ಗಾಂವಿ ಕ್ಷೇತ್ರದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ ಬೆಳಗಾವಿಗೆ ಆಗಮಿಸಿದ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಪಠಾಣ್ ಸಚಿವ ಸತೀಶ ಜಾರಕಿಹೊಳಿ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದರು.

ಶನಿವಾರ ರಾತ್ರಿ ನಗರದ ಕಾಂಗ್ರೆಸ್ ಭವನಕ್ಕೆ ಆಗಮಿಸಿದ ಪಠಾಣ್ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿಯಾಗಿ ಬರಮಾಡಿಕೊಂಡರು. ಇದೇ ವೇಳೆ ಪಠಾಣ್, ಸತೀಶ ಜಾರಕಿಹೊಳಿ ಅವರ ಕಾಲಿಗೆ ನಮಸ್ಕರಿಸಿದರು. ನಂತರ ಪಕ್ಷದ ಜಿಲ್ಲಾ ಘಟಕದಿಂದ ಸತ್ಕರಿಸಲಾಯಿತು.

ಸನ್ಮಾನ‌ ಸ್ವೀಕರಿಸಿ ಮಾತನಾಡಿದ ಯಾಸೀರ್ ಅಹ್ಮದ್ ಖಾನ್ ಪಠಾಣ್, ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಓರ್ವ ಸಾಮಾನ್ಯ ಕಾರ್ಯಕರ್ತನನ್ನು ಗೆಲ್ಲಿಸುವ ಮೂಲಕ 30 ವರ್ಷಗಳ ವನವಾಸದಿಂದ ಶಿಗ್ಗಾಂವಿ ಕ್ಷೇತ್ರವನ್ನು ಸತೀಶ ಜಾರಕಿಹೊಳಿ ಮುಕ್ತಗೊಳಿಸಿದ್ದಾರೆ. ಅವರಿಗೆ ನಾನು ಸದಾ ಋಣಿ ಆಗಿರುತ್ತೇನೆ. ನನ್ನ ಪರವಾಗಿ ಶಿಗ್ಗಾಂವಿಗೆ ಬಂದು ಇಲ್ಲಿನ ಸಾವಿರಾರ ಜನರ ಜೊತೆ ಕೆಲಸ ಮಾಡಿ, ಗೆಲ್ಲಿಸಿದ್ದೀರಿ. ನನ್ನ ಗೆಲುವಿಗೆ ಸತೀಶ ಜಾರಕಿಹೊಳಿ ಕಾರಣ ಎಂದು ಸ್ಮರಿಸಿದರು.

ಬಿಜೆಪಿ ದೊಡ್ಡ ನಾಯಕರು ಇರುವ ಶಿಗ್ಗಾವಿ ಕ್ಷೇತ್ರವನ್ನು ಸತೀಶ ಜಾರಕಿಹೊಳಿ ಅವರು ದತ್ತು ತೆಗೆದುಕೊಂಡು ಗೆಲ್ಲಿಸಿದ್ದಾರೆ. ದೀಪಾವಳಿ ಹಬ್ಬ ಆಚರಿಸಲಿಲ್ಲ. ವಿದೇಶ ಪ್ರವಾಸ ರದ್ದು ಮಾಡಿದರು. ಅವರ ನಾಯಕತ್ವ ಮತ್ತು ಮಾರ್ಗದರ್ಶನದಲ್ಲಿ ಮುಂದುವರಿಯುತ್ತೇನೆ ಎಂದು ಯಾಸೀರ್ ಅಹ್ಮದ್ ಖಾನ್ ಪಠಾಣ್ ಹೇಳಿದರು.

ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ಸಾಮಾನ್ಯ ಕಾರ್ಯಕರ್ತರ ಸಲಹೆ ಮೇರೆಗೆ ಚುನಾವಣೆ ಎದುರಿಸಿ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಗೆದ್ದಿದೆ. ಇದು ಮೊದಲ ಪ್ರಯೋಗ. ಯಾಸೀನ್ ಅವರಿಗೆ ದೊಡ್ಡ ರಾಜಕೀಯ ಹಿನ್ನೆಲೆ ಏನೂ ಇಲ್ಲ. ಮುಖ್ಯಮಂತ್ರಿ ಮಗನನ್ನು ಓರ್ವ ಸಾಮಾನ್ಯ ಕಾರ್ಯಕರ್ತ ಸೋಲಿಸಿದ್ದಾರೆ. 50 ವರ್ಷಗಳ ಹಿಂದೆ ಬೆಳಗಾವಿಯಲ್ಲಿ ಕುಸ್ತಿ ಪಂದ್ಯಾವಳಿಯಲ್ಲಿ ಸತ್ಪಾಲ್ ಮಲಿಕ್‌ನನ್ನು ಚಂಬಾ ಮುತ್ನಾಳ ಸೋಲಿಸಿದ್ದರು. ಯಾಸೀರ್ ಪಠಾಣ್ ಗೆದ್ದು ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಗೆಲುವು ಪಕ್ಷಕ್ಕೆ ಹೊಸ ಹುಮ್ಮಸ್ಸು ತಂದಿದೆ ಎಂದು ಹೇಳಿದರು.

ಕೊನೆಯ ಘಳಿಗೆವರೆಗೂ ಶಿಗ್ಗಾಂವಿ ಗೆಲ್ಲುವ ನಿರೀಕ್ಷೆ ಯಾರಿಗೂ ಇರಲಿಲ್ಲ. ಆದರೆ, ನಮಗೆ ಗೆಲ್ಲುವ ವಿಶ್ವಾಸವಿತ್ತು. ನೇರವಾಗಿ ಮತದಾರರನ್ನು ಭೇಟಿಯಾಗಿ ಸಂಘಟಿಸಿದ್ದೆವು. ವರಿಷ್ಠರು ಚುನಾವಣೆಯನ್ನು ಮಾದರಿಯಾಗಿ ತೆಗೆದುಕೊಳ್ಳುವಂತೆ ಹೇಳಿದ್ದರು. ಇದೇ ರೀತಿ ಚುನಾವಣೆ ಎದುರಿಸಿದರೆ ಮುಂದೆ ಕಾಂಗ್ರೆಸ್ ಎಲ್ಲಾ ಚುನಾವಣೆಗಳಲ್ಲೂ ಗೆಲ್ಲಲಿದೆ. ಹಾಗಾಗಿ, ಯಾಸೀರ್ ಅವರು 2028ರ ಗೆಲುವು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕಾಗುತ್ತದೆ. ನಿಮ್ಮ ನೇತೃತ್ವದಲ್ಲಿ ಒಳ್ಳೆಯ ಕೆಲಸ ಮಾಡಿ. ಪಕ್ಷ ಸದೃಢಗೊಳಿಸಿ. ಎಲ್ಲ ಸಮಾಜಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿ ಎಂದು ಜಾರಕಿಹೊಳಿ ಕಿವಿಮಾತು ಹೇಳಿದರು. ಶಾಸಕ ಆಸೀಫ್ ಸೇಠ್, ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಧಾರವಾಡ ಅಂಜುಮನ್ ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ, ರಾಹುಲ್‌ ಜಾರಕಿಹೊಳಿ ಸೇರಿದಂತೆ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

15 ದಿನದ ಹಿಂದೆ ಮದುವೆ ಆಗಿದ್ದ ಜೋಡಿ ಭೀಕರ ಅಪಘಾತಕ್ಕೆ ಬಲಿ
ಶ್ರೀಮಂತರು ಗ್ಯಾರಂಟಿಯಿಂದ ದೂರ ಇರಲಿ: ಎಂ.ಬಿ.ಪಾಟೀಲ್‌