ಕನ್ನಡಪ್ರಭ ವಾರ್ತೆ ಮಣಿಪಾಲಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಹೊರಗುತ್ತಿಗೆ ನೌಕರರ ಸಂಘದ ಸೂಚನೆಯಂತೆ, ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರ ನೇರಪಾವತಿಗೆ ಆಗ್ರಹಿಸಿ, ಉಡುಪಿ ಜಿಲ್ಲಾ ಸಂಘದ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಸತ್ಯಾಗ್ರಹ ನಡೆಸಲಾಯಿತು. ಪೌರಕಾರ್ಮಿಕರು ರಾಜ್ಯಾದ್ಯಂತ ಸ್ವಚ್ಛತೆ, ಕುಡಿಯುವ ನೀರು ಪೂರೈಕೆ ಸ್ಥಗಿತಗೊಳಿಸಿ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು.ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫೆ.15ರಂದು ನಮ್ಮ ನಡೆ ಮುಖ್ಯಮಂತ್ರಿ ಮನೆ ಕಡೆ ಎಂಬ ಘೋಷಣೆಯೊಂದಿಗೆ ಸಾವಿರಾರು ಕಾರ್ಮಿಕರು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಸತ್ಯಾಗ್ರಹ ನಿರತ ಕಾರ್ಮಿಕರು ತಿಳಿಸಿದರು.ಎಲ್ಲ ಹೊರಗುತ್ತಿಗೆ ನೌಕಕರನ್ನು ನೇರಪಾವತಿಯಡಿ ತರಬೇಕು, ಪೌರಾಡಳಿತ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಕ್ಕೆ ತಿದ್ದುಪಡಿ ತಂದು ಅಗತ್ಯಕ್ಕನುಗುಣವಾಗಿ ಪೌರ ಚಾಲಕ ಹುದ್ದೆಗಳನ್ನು ಸೃಷ್ಟಿಸಬೇಕು. ಬಾಕಿ ಇರುವ ಪೌರಕಾರ್ಮಿಕರ ಹುದ್ದೆಗಳನ್ನು ಭರ್ತಿಗೊಳಿಸಬೇಕು. ಸಂಕಷ್ಟ ಭತ್ಯೆಯನ್ನು ಪೌರಕಾರ್ಮಿಕರಿಗೂ ವಿಸ್ತರಿಸಬೇಕು, ಈ ನಾಲ್ಕೂ ಬೇಡಿಕೆಗಳನ್ನು ಬಜೆಟ್ನಲ್ಲಿ ಘೋಷಣೆ ಮಾಡಬೇಕು ಎಂದು ಸತ್ಯಾಗ್ರಹಿಗಳು ಆಗ್ರಹಿಸಿದರು.