ಕನ್ನಡಪ್ರಭ ವಾರ್ತೆ ಬೇಲೂರು
ಗ್ರಾಮಸ್ಥರು ಮಾತನಾಡಿ ಬಂಟೇನಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕರ್ತವ್ಯ ಲೋಪ ಎಸಗಿ ಹಣದಾಸೆಗೆ ಒಳಗಾಗಿ ಮೀಸಲು ನಿವೇಶನಗಳನ್ನು ಖಾಸಗಿ ವ್ಯಕ್ತಿಗಳಿಗೆ ಖಾತೆ ಮಾಡಿಕೊಟ್ಟಿದ್ದಾರೆ. ಕೂಡಲೇ ಅಕ್ರಮ ಖಾತೆಗಳನ್ನು ರದ್ದುಪಡಿಸಿ, ನಿವೇಶನ ರಹಿತ ಎಸ್ಸಿ ಸಮುದಾಯದ ಜನರಿಗೆ ಹಾಗೂ ಸಾರ್ವಜನಿಕ ಉಪಯೋಗಕ್ಕಾಗಿ ಭೂಮಿಯನ್ನು ಉಳಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ತಾಲೂಕು ಛಲವಾದಿ ಮಹಾಸಭಾ ಉಪಾಧ್ಯಕ್ಷ ದೇವಿಹಳ್ಳಿ ಮಲ್ಲಿಕಾರ್ಜುನ, ಚಿಕ್ಕಬ್ಯಾಡಿಗೆರೆ ಗ್ರಾಮದ ಸರ್ವೆ ನಂ.123/6 ಮತ್ತು 122/1 ಭೂಮಿ ಗ್ರಾಮಠಾಣವಾಗಿ ಪರಿವರ್ತನೆಯಾದ ಸಂದರ್ಭದಲ್ಲಿ ಪರಿಶಿಷ್ಟ ಜಾತಿಯ ಜನರಿಗೆ ಮೀಸಲಾಗಿ ಹಲವು ನಿವೇಶನಗಳನ್ನು ಗುರುತಿಸಲಾಗಿತ್ತು. ಆದರೆ ಇದೀಗ ಕೆಲ ಭೂಗಳ್ಳರು ಪಂಚಾಯಿತಿ ಸಿಬ್ಬಂದಿಯೊಂದಿಗೆ ಸೇರಿ ನಕಲಿ ದಾಖಲೆ ಸೃಷ್ಟಿಸಿ ಸುಮಾರು ಏಳು ನಿವೇಶನಗಳನ್ನು ಪ್ರಭಾವಿ ವ್ಯಕ್ತಿಗೆ ಅಕ್ರಮವಾಗಿ ಖಾತೆ ಹಾಗೂ ಇ- ಸೊತ್ತು ಮಾಡಿದ್ದಾರೆ ಎಂದು ಆರೋಪಿಸಿದರು. ಈ ಬಗ್ಗೆ ಗ್ರಾಮಸ್ಥರು ತಕರಾರು ನೀಡಿದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ತಾಲೂಕು ಪಂಚಾಯಿತಿ ಇಒ ತಕ್ಷಣ ಮಧ್ಯಪ್ರವೇಶಿಸಿ ಖಾತೆಗಳನ್ನು ರದ್ದುಪಡಿಸಬೇಕು. ಇಲ್ಲವಾದರೆ ನ್ಯಾಯಾಲಯದ ಮೆಟ್ಟಿಲೇರಲಾಗುವುದು ಹಾಗೂ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಗ್ರಾಮಸ್ಥ ಚಂದ್ರು ಮಾತನಾಡಿದರು.ಈ ಕುರಿತು ಪ್ರತಿಕ್ರಿಯಿಸಿದ ಬಂಟೇನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ವಿಶ್ವ, ಚಿಕ್ಕಬ್ಯಾಡಿಗೆರೆ ನಿವೇಶನಗಳು ಗ್ರಾಮಠಾಣಾ ವ್ಯಾಪ್ತಿಯಲ್ಲಿದ್ದು, ಸೋಮಶೇಖರ್ ಎಂಬ ವ್ಯಕ್ತಿಯಿಂದ ಸೂಕ್ತ ದಾಖಲೆಗಳನ್ನು ಪಡೆದುಕೊಂಡ ನಂತರವೇ ಖಾತೆ ಹಾಗೂ ಇ-ಸೊತ್ತು ಮಾಡಲಾಗಿದೆ. ಯಾವುದೇ ನಕಲಿ ದಾಖಲೆ ಸೃಷ್ಟಿಯಾಗಿಲ್ಲ. ನ್ಯಾಯಾಲಯಕ್ಕೆ ಹೋಗುವುದು ಪ್ರತಿಯೊಬ್ಬರಿಗೂ ಇರುವ ಪ್ರಜಾಪ್ರಭುತ್ವ ಹಕ್ಕು ಎಂದು ಹೇಳಿದರು.