ಪರಿಶಿಷ್ಟ ಜಾತಿಯವರು ಕಾಂಗ್ರೆಸ್ ಬೆನ್ನೆಲುಬು: ಆರ್. ಧರ್ಮಸೇನ

KannadaprabhaNewsNetwork |  
Published : Oct 30, 2024, 12:34 AM IST
೨೯ಎಸ್.ಎನ್.ಡಿ.೦೨ಸಂಡೂರು ತಾಲೂಕಿನ ಕೃಷ್ಣಾನಗರದಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮಂಗಳವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಕೆಪಿಸಿಸಿ ಎಸ್.ಸಿ. ಘಟಕದ ರಾಜ್ಯಾಧ್ಯಕ್ಷ ಆರ್. ಧರ್ಮಸೇನ ಮಾತನಾಡಿದರು. | Kannada Prabha

ಸಾರಾಂಶ

ಒಳ ಮೀಸಲಾತಿ ಹಸಿದವರ ಕೂಗಾಗಿದೆ. ಇದರಿಂದ ಪರಿಶಿಷ್ಟ ಜಾತಿ ಗುಂಪಿನಲ್ಲಿರುವ ಎಲ್ಲರಿಗೂ ಅನುಕೂಲವಾಗಲಿದೆ ಎಂದು ಎಂದು ಕೆಪಿಸಿಸಿ ಎಸ್ಸಿ ಘಟಕದ ರಾಜ್ಯಾಧ್ಯಕ್ಷ ಆರ್. ಧರ್ಮಸೇನ ಹೇಳಿದರು.

ಸಂಡೂರು: ಪರಿಶಿಷ್ಟ ಜಾತಿಯವರು ಕಾಂಗ್ರೆಸ್ ಬೆನ್ನೆಲುಬಾಗಿದ್ದಾರೆ. ಪಕ್ಷ ದಲಿತರ ಏಳ್ಗೆಗಾಗಿ ಮಹತ್ವದ ಕೊಡುಗೆ ನೀಡಿದೆ. ದಲಿತರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಈ. ಅನ್ನಪೂರ್ಣಾ ತುಕಾರಾಂ ಅವರ ಗೆಲುವಿಗೆ ಶ್ರಮಿಸಬೇಕು ಎಂದು ಕೆಪಿಸಿಸಿ ಎಸ್ಸಿ ಘಟಕದ ರಾಜ್ಯಾಧ್ಯಕ್ಷ ಆರ್. ಧರ್ಮಸೇನ ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದ ಈ. ತುಕಾರಾಂ ಮಂತ್ರಿಯಾಗಿ, ನಾಲ್ಕು ಬಾರಿ ಶಾಸಕರಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರ ಅಭಿವೃದ್ಧಿ ಕಾರ್ಯಗಳು ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಸಹಕಾರಿಯಾಗಲಿದೆ ಎಂದರು.

ಅಂಬೇಡ್ಕರ್ ಶ್ರೇಷ್ಠ ಸಂವಿಧಾನ ರಚಿಸಿಕೊಟ್ಟರು. ಇದು ಪರಿಶಿಷ್ಟ ಜಾತಿಯವರ ಹೆಗ್ಗಳಿಕೆಯಾಗಿದೆ. ರಾಜ್ಯ ಸರ್ಕಾರದಲ್ಲಿ ಪ್ರಮುಖ ೬ ಖಾತೆಗಳನ್ನು ಪರಿಶಿಷ್ಟ ಜಾತಿಯವರಿಗೆ ನೀಡಲಾಗಿದೆ. ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿಯ ೪೧,೮೮೭ ಮತಗಳಿವೆ. ಇವುಗಳಲ್ಲಿ ಮಾದಿಗ ಸಮಾಜದ ೩೦ ಸಾವಿರ ಮತಗಳಿವೆ. ದಲಿತರು ಯಾರನ್ನು ಬೆಂಬಲಿಸುವರೋ, ಅವರೇ ಗೆಲ್ಲುತ್ತಾರೆ ಎಂದರು.

ಒಳ ಮೀಸಲಾತಿ ಹಸಿದವರ ಕೂಗು:

ಒಳ ಮೀಸಲಾತಿ ಹಸಿದವರ ಕೂಗಾಗಿದೆ. ಇದರಿಂದ ಪರಿಶಿಷ್ಟ ಜಾತಿ ಗುಂಪಿನಲ್ಲಿರುವ ಎಲ್ಲರಿಗೂ ಅನುಕೂಲವಾಗಲಿದೆ. ಕಾಂಗ್ರೆಸ್ ೨೦೨೩ರ ಚುನಾವಣೆಯ ತನ್ನ ಪ್ರಣಾಳಿಕೆಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಕುರಿತು ಭರವಸೆ ನೀಡಿತ್ತು. ಇದೀಗ ದತ್ತಾಂಶ ಸಂಗ್ರಹಕ್ಕೆ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಲು ಸಂಪುಟ ಸಮಿತಿ ತೀರ್ಮಾನ ತೆಗೆದುಕೊಂಡಿದೆ. ಪಕ್ಷ ಪರಿಶಿಷ್ಟ ಜಾತಿ ಗುಂಪಿನ ಎಲ್ಲ ಜಾತಿಗಳನ್ನು ಸಮಾನವಾಗಿ ಕಾಣುತ್ತಿದೆ. ಪರಿಶಿಷ್ಟ ಜಾತಿಯವರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಗಿಫ್ಟ್ ನೀಡಬೇಕು ಎಂದರು.

ಕಾಂಗ್ರೆಸ್ ಪರಿಶಿಷ್ಟ ಜಾತಿ, ಪಂಗಡ ಹಾಗೂ ಒಬಿಸಿ ಸೆಲ್ ರಾಜ್ಯ ಸಮಿತಿ ಸಂಯೋಜಕ ಜಕ್ಕಪ್ಪನವರ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ, ಪಂಗಡದವರಿಗಾಗಿ ಹೋಬಳಿಗೊಂದು ವಸತಿ ಶಾಲೆ, ಹಾಸ್ಟೆಲ್‌ಗಳನ್ನು ಆರಂಭಿಸಿದೆ. ವಿದೇಶದಲ್ಲಿ ಅಧ್ಯಯನಕ್ಕಾಗಿ ಸಹಾಯ ಧನವನ್ನು ನೀಡುತ್ತಿದೆ. ಉದ್ದಿಮೆದಾರರಾಗಲು ಆರ್ಥಿಕ ಸಹಾಯ ನೀಡುತ್ತಿದೆ. ಬ್ಯಾಕ್‌ಲಾಗ್ ಹುದ್ದೆಗಳನ್ನು ತುಂಬಲು ಕ್ರಮಕೈಗೊಂಡಿದೆ. ಮತದಾನದ ಹಕ್ಕನ್ನು ನಿಮ್ಮ ಬದುಕಿನ ರಕ್ಷಣೆಗಾಗಿ ಉಪಯೋಗಿಸಿಕೊಳ್ಳಬೇಕು. ಕಾಂಗ್ರೆಸ್ ಅಭ್ಯರ್ಥಿಗೆ ಮತನೀಡಿ, ನಿಮ್ಮ ಬದುಕನ್ನು ಕಟ್ಟಿಕೊಳ್ಳಿ ಎಂದು ಪರಿಶಿಷ್ಟ ಜನಾಂಗದವರಿಗೆ ಕರೆ ನೀಡಿದರು.

ಟಿ. ಲೋಕೇಶ್‌ ನಾಯ್ಕ್, ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಎರಕಲು ಸ್ವಾಮಿ, ಗ್ರಾಮೀಣ ಜಿಲ್ಲಾಧ್ಯಕ್ಷ ವೀರಾಂಜನೇಯಲು, ಮಾಧ್ಯಮ ವಕ್ತಾರ ಎಸ್. ಮಲಿಯಪ್ಪ, ಕೆಪಿಸಿಸಿ ಮಾಜಿ ಸದಸ್ಯ ಎಲ್. ಮಾರೆಣ್ಣ, ಮುಖಂಡರಾದ ಸೋಮಶೇಖರ್, ಸಿ. ಬಸವರಾಜ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಿ. ಏಕಾಂಬ್ರಪ್ಪ, ಸತೀಶ್ ಚಿತ್ರಿಕಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ