ಶಾಲೆ, ಆಸ್ಪತ್ರೆ ಸುಧಾರಣಾ ಕ್ರಮಗಳಾಗಲಿ

KannadaprabhaNewsNetwork |  
Published : Aug 08, 2026, 02:15 AM IST
7ಕೆಕೆಆರ್2:ಕೊಪ್ಪಳದ ಶ್ರೀಶೈಲನಗರ ಪ್ರಾಥಮಿಕ ಶಾಲೆಗಳಿಗೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳು, ಸ್ವಚ್ಛತೆ ಹಾಗೂ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ವಿತರಣೆಯ ಕುರಿತು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ ಕುಮಾರ ಹಾಗೂ ಸದಸ್ಯರು ಪರಿಶೀಲಿಸಿದರು. | Kannada Prabha

ಸಾರಾಂಶ

ಶಾಲೆ ಹಾಗೂ ಆಸ್ಪತ್ರೆಗಳಿಗೆ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕ ಅಗತ್ಯ ಸುಧಾರಣಾ ಕ್ರಮ ಕೈಗೊಳ್ಳಬೇಕು

ಕೊಪ್ಪಳ: ಶಾಲೆ ಮತ್ತು ಆಸ್ಪತ್ರೆಗಳಲ್ಲಿ ಅಗತ್ಯ ಸುಧಾರಣಾ ಕ್ರಮಗಳಾಗಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ ಕುಮಾರ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅಧ್ಯಕ್ಷತೆಯಲ್ಲಿ ಜರುಗಿದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ಇಲಾಖೆ ಮಕ್ಕಳ ಸುರಕ್ಷತೆ, ಮಕ್ಕಳ ಹಕ್ಕುಗಳ ಸಂರಕ್ಷಣೆ ಹಾಗೂ ಸಂಬಂಧಿತ ಕಾನೂನು ಮತ್ತು ನೀತಿಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು. ಜಿಲ್ಲೆಯ ವಸತಿ ನಿಲಯ, ಶಾಲೆ ಹಾಗೂ ಆಸ್ಪತ್ರೆಗಳಿಗೆ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕ ಅಗತ್ಯ ಸುಧಾರಣಾ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಅಲ್ಲದೆ ಈ ವೇಳೆ ಆಯೋಗದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ ಕುಮಾರ ಹಾಗೂ ಸದಸ್ಯ ಸತ್ಯನಾರಾಯಣ ಶೆಟ್ಟಿ, ಪರಿಶೀಲನೆ ವೇಳೆ ಕಂಡುಬಂದ ನ್ಯೂನತೆ ನಿರ್ಲಕ್ಷಿಸದೆ ಶೀಘ್ರದಲ್ಲಿ ಸರಿಪಡಿಸಿ ಕೈಗೊಂಡ ಕ್ರಮಗಳ ವರದಿ ಆಯೋಗಕ್ಕೆ ಸಲ್ಲಿಸುವಂತೆ ನಿರ್ದೇಶನ ನೀಡಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ, ಸಮಾಜ ಕಲ್ಯಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಅಮರೇಶ ಹಾವಿನ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಸೋಮಶೇಖರಗೌಡ ಪಾಟೀಲ್, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಜ್ಮೀರ ಅಲಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿಂಧು ಅಂಗಡಿ, ಕೊಪ್ಪಳ ಡಿವೈಎಸ್ಪಿ ಮುತ್ತಣ್ಣ ಸವರಗೋಳ, ಹಿಂದುಳಿ ವರ್ಗಗಳ ಕಲ್ಯಾಣ ಇಲಾಖೆ ವ್ಯವಸ್ಥಾಪಕಿ ಮಂಜುಳಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿದ್ದರು.

ವಸತಿ ನಿಲಯ,ಶಾಲೆ, ಠಾಣೆ, ಆಸ್ಪತ್ರೆ ಪರಿಶೀಲನೆ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ ಕುಮಾರ ಹಾಗೂ ಸದಸ್ಯ ಸತ್ಯನಾರಾಯಣ ಶೆಟ್ಟಿ ಜಿಲ್ಲೆಯಲ್ಲಿ ಮಕ್ಕಳ ವಸತಿ ನಿಲಯ, ಶಾಲೆ, ಪೊಲೀಸ್ ಠಾಣೆ ಹಾಗೂ ಆಸ್ಪತ್ರೆಗಳಲ್ಲಿ ಮಕ್ಕಳಿಗೆ ಕಲ್ಪಿಸಲಾಗಿರುವ ಸೌಲಭ್ಯಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ, ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಗಣೇಶನಗರ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ, ಹಿರೇಸಿಂದೋಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಗುನ್ನಾಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ, ಪಿಎಂ-ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ಗಣೇಶನಗರ) ಹಾಗೂ ಶ್ರೀಶೈಲನಗರ ಪ್ರಾಥಮಿಕ ಶಾಲೆಗಳಿಗೆ ಭೇಟಿ ನೀಡಿ ಮೂಲಭೂತ ಸೌಕರ್ಯ, ಸ್ವಚ್ಛತೆ ಹಾಗೂ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ವಿತರಣೆಯ ಕುರಿತು ಪರಿಶೀಲಿಸಿದರು.

ಬಳಿಕ ಕೊಪ್ಪಳ ನಗರ ಪೊಲೀಸ್ ಠಾಣೆ, ಮಹಿಳಾ ಪೊಲೀಸ್ ಠಾಣೆ, ಮಕ್ಕಳ ವಿಶೇಷ ಪೊಲೀಸ್ ಘಟಕ ಹಾಗೂ ಬೇವೂರು ಪೊಲೀಸ್ ಠಾಣೆಗಳ ಕಾರ್ಯವೈಖರಿ ಪರಿಶೀಲಿಸಿದ ಅವರು, ಮಕ್ಕಳ ಸುರಕ್ಷತೆ ಕುರಿತು ನಿರಂತರ ಜಾಗೃತಿ ಕಾರ್ಯಕ್ರಮ ಹಾಗೂ ತೆರೆದ ಮನೆ ಕಾರ್ಯಕ್ರಮ ಆಯೋಜಿಸುವಂತೆ ಸೂಚಿಸಿದರು. ಶಾಲೆ ಹಾಗೂ ಕಾಲೇಜುಗಳ ಆರಂಭ ಮತ್ತು ಮುಕ್ತಾಯದ ವೇಳೆಯಲ್ಲಿ ಬೀಟ್ ಸಿಬ್ಬಂದಿ ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಜಿಲ್ಲಾಸ್ಪತ್ರೆ ಹಾಗೂ ತಾಯಿ-ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ಸೇವೆ, ಚಿಕಿತ್ಸೆ ಮತ್ತು ಲಭ್ಯವಿರುವ ಸೌಲಭ್ಯ ಕುರಿತು ಪರಿಶೀಲನೆ ನಡೆಸಿದರು. ಬಳಿಕ ಪೌಷ್ಟಿಕ ಪುನರ್ವಸತಿ ಕೇಂದ್ರಕ್ಕೆ (ಎನ್‌ಆರ್‌ಸಿ) ಭೇಟಿ ನೀಡಿ ದಾಖಲಾದ ಮಕ್ಕಳ ಆರೋಗ್ಯದ ಕುರಿತು ವೈದ್ಯರಿಂದ ಮಾಹಿತಿ ಪಡೆದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗುತ್ತಿಗೆ ಉದ್ಯೋಗಕ್ಕಾಗಿ ಹರಿದು ಬಂದ ಉದ್ಯೋಗಾಕಾಂಕ್ಷಿಗಳು
ಮೊಬೈಲ್ ದುರ್ಬಳಕೆಯಿಂದ ಹಾಳಾಗಬೇಡಿ