ವಿ.ಎಂ. ನಾಗಭೂಷಣ
ಸಂಡೂರು: ತಾಲೂಕಿನಲ್ಲಿ ಶಿಕ್ಷಕರ ಕೊರತೆಯ ಮಧ್ಯೆಯೇ ಹೊಸ ಶೈಕ್ಷಣಿಕ ವರ್ಷ ಆರಂಭಗೊಂಡಿದ್ದು, ಶಾಲಾ ತರಗತಿಗಳು ಆರಂಭಗೊಂಡಿವೆ. ರಜೆಯ ಮಜಾ ಸವಿದ ವಿದ್ಯಾರ್ಥಿಗಳು ಶಾಲೆಗಳತ್ತ ಮುಖ ಮಾಡಿದ್ದಾರೆ.ತಾಲೂಕಿನ ಪ್ರಾಥಮಿಕ ಶಾಲೆಗಳಲ್ಲಿ ಮಂಜೂರಾದ ೧೦೦೩ ಶಿಕ್ಷಕರ ಹುದ್ದೆಗಳಲ್ಲಿ ೫೬೧ ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದು, ೪೪೨ ಹುದ್ದೆಗಳು ಖಾಲಿ ಇವೆ. ಪ್ರೌಢ ಶಾಲೆಗಳಲ್ಲಿ ಮಂಜೂರಾದ ೨೨೫ ಹುದ್ದೆಗಳಲ್ಲಿ ೧೩೭ ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದು, ೮೮ ಹುದ್ದೆಗಳು ಖಾಲಿ ಇವೆ.
ತಾಲೂಕಿನಲ್ಲಿ ೩೨೩ ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ೬೬ ಪ್ರೌಢ ಶಾಲಾ ಶಿಕ್ಷಕರು ಸೇರಿ ಒಟ್ಟು ೩೮೯ ಅತಿಥಿ ಶಿಕ್ಷಕರ ನೇಮಕಕ್ಕೆ ಬೇಡಿಕೆ ಸಲ್ಲಿಸಲಾಗಿದೆ.ವಿವಿಧ ಯೋಜನೆಗಳ ಅಡಿಯಲ್ಲಿ ತಾಲೂಕಿನಲ್ಲಿಯ ೭೧ ಶಾಲಾ ಕೊಠಡಿಗಳ ದುರಸ್ತಿ ಕಾರ್ಯ ನಡೆದಿದೆ. ಹೊಸದಾಗಿ ೯೦ ಕೊಠಡಿಗಳನ್ನು ನಿರ್ಮಿಸಲು ಯೋಜಿಸಲಾಗಿದೆ. ಇವುಗಳಲ್ಲಿ ೨೭ ಶಾಲಾ ಕೊಠಡಿಗಳ ನಿರ್ಮಾಣ ಕಾರ್ಯ ಆರಂಭಗೊಂಡಿದೆ. ೩೨ ಕೊಠಡಿಗಳ ನಿರ್ಮಾಣ ಕಾರ್ಯ ಮುಕ್ತಾಯಗೊಂಡಿದ್ದು, ಇಲಾಖೆಗೆ ಹಸ್ತಾಂತರಗೊಳ್ಳಬೇಕಿದೆ. ಇನ್ನುಳಿದ ಕೊಠಡಿಗಳ ನಿರ್ಮಾಣದ ಟೆಂಡರ್ ಪ್ರಕ್ರಿಯೆ ನಡೆದಿದೆ.
ತಾಲೂಕಿನಲ್ಲಿ ಕೆಕೆಆರ್ಡಿಬಿ ಅಕ್ಷರ ಆವಿಷ್ಕಾರ ಯೋಜನೆ ಅಡಿಯಲ್ಲಿ ೨೮ ಶಾಲೆಗಳಲ್ಲಿ ಎಲ್ಕೆಜಿ ಹಾಗೂ ಯುಕೆಜಿ ಶಾಲೆಗಳು, ೨೯ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಾಲೆಗಳನ್ನು ಹಾಗೂ ೭ ಶಾಲೆಗಳಲ್ಲಿ ಎನ್ಎಸ್ಕ್ಯೂಎಫ್ (ನ್ಯಾಷನಲ್ ಸ್ಕಿಲ್ ಕ್ವಾಲಿಫಿಕೇಷನ್ ಫ್ರೇಮ್ವರ್ಕ್) ತರಗತಿಗಳನ್ನು ಆರಂಭಿಸಲಾಗಿದೆ. ಈ ತರಗತಿಗಳಿಗೆ ಈಗಾಗಲೇ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ. ಆಯಾ ಶಾಲೆಗಳ ಶಿಕ್ಷಕರು ತಮ್ಮ ಶಾಲೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರಚಾರ ಹಾಗೂ ಸರ್ವೆ ನಡೆಸಿ, ಎಲ್ಕೆಜಿ, ಯುಕೆಜಿ, ಆಂಗ್ಲ ಮಾಧ್ಯಮದ ಒಂದನೇ ತರಗತಿ ಹಾಗೂ ಎನ್ಎಸ್ಕ್ಯೂಎಫ್ ತರಗತಿಗೆ ದಾಖಲಾತಿ ಮಾಡಿಕೊಳ್ಳುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ತರಗತಿಗಳಿಗೆ ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯೂ ನಡೆದಿದೆ.ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ, ಆಂಗ್ಲ ಭಾಷಾ ತರಗತಿಗಳನ್ನು ಆರಂಭಿಸಿರುವುದಕ್ಕೆ ಕೆಲ ಕಡೆಗಳಲ್ಲಿ ಈಗಾಗಲೇ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಕೆಲವು ಕಡೆಗಳಲ್ಲಿ ನಿಧಾನವಾಗಿ ವೇಗ ಪಡೆದುಕೊಳ್ಳುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ, ದ್ವಿಭಾಷಾ ತರಗತಿಗಳನ್ನು ಆರಂಭಿಸಿರುವುದು ಖಾಸಗಿ ಶಾಲೆಗಳ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಶಿಕ್ಷಕರ ಕೊರತೆ, ಕೊಠಡಿಗಳ ದುರಸ್ತಿಯ ನಡುವೆಯೂ ಹೊಸ ಶೈಕ್ಷಣಿಕ ವರ್ಷ ಆರಂಭಗೊಂಡಿದೆ. ಶಾಲೆಗಳಲ್ಲಿ ವಿದ್ಯಾರ್ಥಿಗಳ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಚಾಲನೆ ದೊರೆತಿದೆ. ಹೊಸ ಶೈಕ್ಷಣಿಕ ವರ್ಷ ಫಲಪ್ರದವಾಗಲಿ. ಶಾಲೆಗಳಲ್ಲಿ ಬೋಧನೆ ಹಾಗೂ ಕಲಿಕಾ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿರಲಿ, ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ ಎಂಬುದು ಎಲ್ಲರ ಸದಾಶಯ.ತಾಲೂಕಿನಲ್ಲಿ ೩೮೯ ಅತಿಥಿ ಶಿಕ್ಷಕರ ನೇಮಕಕ್ಕೆ ಬೇಡಿಕೆ ಸಲ್ಲಿಸಲಾಗಿದೆ. ಎಲ್ಲ ಶಾಲೆಗಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರವನ್ನು ಕಳಿಸಿಕೊಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಹೊಸದಾಗಿ ಆರಂಭಿಸಲಾಗಿರುವ ಎಲ್ಕೆಜಿ, ಯುಕೆಜಿ, ದ್ವಿಭಾಷಾ ತರಗತಿಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರವೇಶ ಪ್ರಕ್ರಿಯೆ ಚುರುಕಾಗಿ ನಡೆದಿದೆ ಎನ್ನುತ್ತಾರೆ ಸಂಡೂರು ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಐ.ಆರ್. ಅಕ್ಕಿ.