ನಗರದಲ್ಲಿ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ
ನಮ್ಮ ರಾಷ್ಟ್ರ ಎಲ್ಲಾ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಬೇಕಾದರೆ ದೇಶದ ಜನತೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕುವೆಂಪು ವಿದ್ಯಾನಿಕೇತನ ಶಾಲೆಯ ಕಾರ್ಯದರ್ಶಿ ಕೆ.ಸಿ. ಶಂಕರ್ ಸಲಹೆ ಮಾಡಿದರು.
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ದೇಶ ಪ್ರಗತಿ ಪಥದಲ್ಲಿ ಹಿಂದುಳಿದಿರುವುದಕ್ಕೆ ಮೂಲ ಕಾರಣ ನಾವು ವಿಜ್ಞಾನವನ್ನು ಕಡೆಗಣಿಸಿರುವುದು ಎಂದ ಅವರು, ಜಾತಿ ಧರ್ಮ ಮತಗಳ ಹೆಸರಿನಲ್ಲಿ ನಾವು ಮಕ್ಕಳ ಮನಸ್ಸುಗಳನ್ನು ಒಡೆದಿದ್ದೇವೆ. ಹಾಗಾಗಿ ಅವರಲ್ಲಿ ವೈಜ್ಞಾನಿಕ ಮನೋಭಾವ, ವೈಜ್ಞಾನಿಕ ಚಿಂತನೆ ಬೆಳೆಯುತ್ತಿಲ್ಲ ಎಂದು ವಿಷಾದಿಸಿದರು.ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ರವೀಶ್ ಕ್ಯಾತನಬೀಡು ಮಾತನಾಡಿ, ವೈಜ್ಞಾನಿಕ ಮನೋಭಾವ ಬೆಳೆಯಬೇಕಾದರೆ ಮಕ್ಕಳು ಓದುವ ಹವ್ಯಾಸವನ್ನು ರೂಡಿಸಿಕೊಳ್ಳಬೇಕು. ಮನೆಯ ಕಪಾಟಿನಲ್ಲಿ ಪುಸ್ತಕಗಳನ್ನು ಸಂಗ್ರಹಿಸಿ ಇಡಬೇಕು. ದಿನ ಪತ್ರಿಕೆಗಳನ್ನು ಪ್ರತಿನಿತ್ಯ ತಪ್ಪದೇ ಓದಬೇಕು ಎಂದು ಕಿವಿಮಾತು ಹೇಳಿದರು. ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಎಂ.ಮಂಜುನಾಥ ಸ್ವಾಮಿ ಮಾತನಾಡಿ, ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಪ್ರತಿ ವರ್ಷ ರಸಪ್ರಶ್ನೆ ಸ್ಪರ್ಧೆಯನ್ನು ನಡೆಸಲಾಗುತ್ತಿದೆ. ಈ ಬಾರಿ ಸ್ಪರ್ಧೆ ಯಲ್ಲಿ ಜಿಲ್ಲಾದ್ಯಂತ ಒಂದು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು ಎಂದು ತಿಳಿಸಿದರು.
ನಗರದ ಕುವೆಂಪು ವಿದ್ಯಾನಿಕೇತನ ಶಾಲೆಯ ಆರ್.ಪಿ. ದ್ರುತಿ, ಮೂಡಿಗೆರೆ ಬೆಥನಿ ಶಾಲೆಯ ಹರ್ಷಿತಾ ಮತ್ತು ಅರ್ಮಾನ್ ನವಾಜ್ ದ್ವಿತೀಯ, ಕುವೆಂಪು ಶಾಲೆಯ ಟಿ.ಎಸ್. ಯಷ್ಠಿಕಾ, ಮೂಡಿಗೆರೆ ಬೆಥನಿ ಶಾಲೆಯ ರಚನಾ ಸುಧನ್, ಆಲ್ದೂರು ಪೂರ್ಣಪ್ರಜ್ಞಾ ಶಾಲೆಯ ಎಚ್.ಎಂ. ಶ್ರಾವ್ಯ ತೃತೀಯ ಸ್ಥಾನ ಗಳಿಸಿದ್ದಾರೆ.ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ನಗರದ ಕುವೆಂಪು ವಿದ್ಯಾನಿಕೇತನ ಶಾಲೆ ವಿದ್ಯಾರ್ಥಿ ವಿ.ಆರ್.ಗೋವರ್ಧನ್, ಮೂಡಿಗೆರೆ ಬೆಥನಿ ಶಾಲೆಯ ಅಶ್ವಿನ್ ಎಚ್.ಎಸ್. ಗೌಡ ಸಮಾಧಾನಕರ ಬಹುಮಾನ ಪಡೆದಿದ್ದಾರೆ. ರಸಪ್ರಶ್ನೆ ಸ್ಪರ್ಧೆ ವಿಜೇತ ವಿದ್ಯಾರ್ಥಿಗಳಿಗೆ ಸಮಾರಂಭದಲ್ಲಿ ಬಹುಮಾನ ನೀಡುವುದರ ಜೊತೆಗೆ ಅವರನ್ನು ಗೌರವಿಸಲಾಯಿತು.