ಶಾಸಕ ರಮೇಶ್‌ ಬಂಡಿಸಿದ್ದೇಗೌಡ ವಿರುದ್ಧ ಎಸ್‌ಡಿಪಿಐ ಕಾರ್ಯಕರ್ತರ ಪ್ರತಿಭಟನೆ

KannadaprabhaNewsNetwork |  
Published : Jun 25, 2025, 01:18 AM IST
24ಕೆಎಂಎನ್ ಡಿ20 | Kannada Prabha

ಸಾರಾಂಶ

ಶಾಸಕ ರಮೇಶ ಬಂಡಿಸಿದ್ದೇಗೌಡರ ವಿರುದ್ಧ 420 ಕೇಸ್ ದಾಖಲಿದ್ದರೂ ಬಿಜೆಪಿ ಹಾಗೂ ಜೆಡಿಎಸ್ ಒಂದಾದರು ಎಂಬ ಒಂದೇ ಒಂದು ಕಾರಣಕ್ಕೆ ಮುಸಲ್ಮಾನರು ಮತ ಹಾಕಿ ಗೆಲ್ಲಿಸಿದ್ದಾರೆ. ಆದರೆ, ಅವರು ಕಾಂಗ್ರೆಸ್ ಮಾತ್ರವಲ್ಲದೆ ದೇಶದ ಸಂವಿಧಾನಕ್ಕೆ ಧಕ್ಕೆ ತರುವಂತ ಕೆಲಸ ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಸಾರ್ವಜನಿಕವಾಗಿ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ, ಅಧಿಕಾರಿಗಳಿಗೆ ಬೆದರಿಕೆ ಹಾಕಿರುವ ಶಾಸಕ ರಮೇಶ್‌ ಬಂಡಿಸಿದ್ದೇಗೌಡರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ಎಸ್‌ಡಿಪಿಐ ಕಾರ್ಯಕರ್ತರು ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ತಾಲೂಕು ಕಚೇರಿ ಎದುರು ಸೇರಿದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು, ಶಾಸಕ ರಮೇಶ್‌ ಬಂಡಿಸಿದ್ದೇಗೌಡರ ವಿರುದ್ಧ 420 ಕೇಸ್ ದಾಖಲಿದ್ದರೂ ಬಿಜೆಪಿ ಹಾಗೂ ಜೆಡಿಎಸ್ ಒಂದಾದರು ಎಂಬ ಒಂದೇ ಒಂದು ಕಾರಣಕ್ಕೆ ಮುಸಲ್ಮಾನರು ಮತ ಹಾಕಿ ಗೆಲ್ಲಿಸಿದ್ದಾರೆ. ಆದರೆ, ಅವರು ಕಾಂಗ್ರೆಸ್ ಮಾತ್ರವಲ್ಲದೆ ದೇಶದ ಸಂವಿಧಾನಕ್ಕೆ ಧಕ್ಕೆ ತರುವಂತ ಕೆಲಸ ಮಾಡಿದ್ದಾರೆ ಎಂದು ಕಿಡಿಕಾರಿದರು.

ಮುಸಲ್ಮಾನರು ಬಗರ್ ಹುಕ್ಕುಂ ಯೋಜನೆಯಡಿ ಅರ್ಜಿ ಸಲ್ಲಿಸಿದರೆ ಸಾರ್ವಜನಿಕವಾಗಿ ಅಂತಹವರಿಗೆ ಯಾವುದೇ ದಾಖಲೆಗಳನ್ನು ಮಾಡಿಕೊಟ್ಟರೆ ಅಂತಹವರನ್ನು ನೇಣಿಗೆ ಹಾಕುತ್ತೇನೆಂಬ ಸಂವಿಧಾನ ವಿರೋಧಿ ಹಾಗೂ ಅಲ್ಪಸಂಖ್ಯಾತರ ವಿರೋಧಿ ಹೇಳಿಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಹಾಗೂ ಸ್ಪೀಕರ್ ಯು.ಟಿ ಖಾದರ್ ಅವರು ಈ ಕೂಡಲೇ ಶಾಸಕ ರಮೇಶ ಬಂಡಿಸಿದ್ದೇಗೌಡರನ್ನು ಪಕ್ಷದಿಂದ ಉಚ್ಚಾಟಿಸುವ ಜೊತೆಗೆ ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಆಗ್ರಹಿಸಿದರು.

ನಂತರ ಪ್ರತಿಭಟನಾಕಾರರು ಉಪತಹಸೀಲ್ದಾರ್ ಕೆ.ಎನ್ ಚೈತ್ರ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ನೂರಾರು ಎಸ್ ಡಿಪಿಐ ಕಾರ್ಯಕರ್ತರು ಭಾಗವಹಿಸಿದ್ದರು.

ಶಾಸಕ ಸ್ಥಾನ ವಜಾಗೆ ಎಸ್‌ಡಿಪಿಐ ಆಗ್ರಹ

ಕನ್ನಡಪ್ರಭ ವಾರ್ತೆ ಮಂಡ್ಯ

ಮುಸ್ಲಿಮರ ಹೆಸರಿಗೆ ಜಮೀನನ್ನು ಖಾತೆ ಮಾಡಿದರೆ ಅಧಿಕಾರಿಯನ್ನು ನೇಣಿಗೆ ಏರಿಸುವುದಾಗಿ ಹೇಳಿರುವ ಶ್ರೀರಂಗಪಟ್ಟಣ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡರ ಶಾಸಕ ಸ್ಥಾನ ವಜಾಗೊಳಿಸಿ, ಕಾನೂನು ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಬೇಕು ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆಗ್ರಹಿಸಿದರು.

ಬಹಿರಂಗವಾಗಿ ಮುಸ್ಲಿಮರ ಅವಹೇಳನ ಹಾಗೂ ಅಧಿಕಾರಿಯೊಬ್ಬರಿಗೆ ಪ್ರಾಣ ಬೆದರಿಕೆ ಒಡ್ಡಿರುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ಮಹದೇವಪುರದಲ್ಲಿ ನಡೆದ ಗ್ರಾಮ ಅದಾಲತ್‌ನಲ್ಲಿ ಬಗರ್ ಹುಕುಂ ಜಮೀನನ್ನು ಉಳುಮೆ ಮಾಡುತ್ತಿರುವ ರೈತರಿಗೆ ನೀಡುವಾಗ ಆತನ ಜಾತಿ-ಧರ್ಮ ನೋಡಿ ಕೊಡಬಾರದು, ರೈತನಿಗೆ ಯಾವುದೇ ಜಾತಿ-ಧರ್ಮ ಇರುವುದಿಲ್ಲ. ಅದನ್ನು ಮರೆತ ಶಾಸಕರೊಬ್ಬರು ತಾನೊಬ್ಬ ಜನಸೇವಕ ಎಂಬುದನ್ನು ಮರೆತು ಕೋಮುವಾದಿ ದರ್ಪ ತೋರಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದನ್ನು ಗಂಭೀರವಾಗಿ ಪರಿಗಣಿಸಿ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಮುಕ್ತಾರ್ ಅಹಮದ್, ರಾಜ್ಯ ಖಜಾಂಚಿ ಅಮ್ಜದ್ ಪಾಷಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅತೀಕ್ ಅಹಮದ್, ಮುಬಾರಕ್, ತಾಹೀರ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಮ್‌ ಜಿ ಕುರಿತು ಇಂದು ರಾಜ್ಯ ವಿಶೇಷ ಸಂಪುಟ ಸಭೆ
ಫೆ.13ಕ್ಕೆ ಕಾಂಗ್ರೆಸ್‌ ಸರ್ಕಾರಕ್ಕೆ 1000 ದಿನ