ದ್ವಿತೀಯ ಪಿಯು: ಬೆಂ.ಗ್ರಾ. ಜಿಲ್ಲೆಗೆ 8ನೇ ಸ್ಥಾನ

KannadaprabhaNewsNetwork | Published : Apr 9, 2025 12:34 AM

ಸಾರಾಂಶ

ದೊಡ್ಡಬಳ್ಳಾಪುರ: 2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 79.70ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ 8ನೇ ಸ್ಥಾನ ಪಡೆದಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ: 2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 79.70ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ 8ನೇ ಸ್ಥಾನ ಪಡೆದಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

ಕಳೆದ ಬಾರಿಯ ಪಿಯು ಫಲಿತಾಂಶದಲ್ಲಿ ಜಿಲ್ಲೆ 10ನೇ ಸ್ಥಾನದಲ್ಲಿತ್ತು. ಈ ಬಾರಿ 2 ಸ್ಥಾನ ಮೇಲೇರಿದ್ದು, 8ನೇ ಸ್ಥಾನದಲ್ಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾದ 10935 ವಿದ್ಯಾರ್ಥಿಗಳ ಪೈಕಿ 8361 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಜಿಲ್ಲೆಯು ಶೇ. 76.46 ರಷ್ಟು ಫಲಿತಾಂಶ ಪಡೆದಿದ್ದು, ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳಲ್ಲಿ 2024-25ನೇ ಸಾಲಿನಲ್ಲಿ ಮೊದಲ ಬಾರಿಗೆ ಪರೀಕ್ಷೆಗೆ ಹಾಜರಾದ 10354 ವಿದ್ಯಾರ್ಥಿಗಳ ಪೈಕಿ 8252 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 79.70ರಷ್ಟು ಫಲಿತಾಂಶ ದೊರಕಿದೆ.

ಬಾಲಕಿಯರೇ ಮೇಲುಗೈ:

ಈ ಬಾರಿಯೂ ಜಿಲ್ಲೆಯಲ್ಲಿ ಬಾಲಕಿಯರೇ ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದಾರೆ. ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 4893 ಬಾಲಕರು ಹಾಜರಾಗಿದ್ದು, 3530 ಬಾಲಕರು ತೇರ್ಗಡೆಯಾಗುವ ಮೂಲಕ ಶೇ. 72.14ರಷ್ಟು ಫಲಿತಾಂಶ ಹಾಗೂ 6042 ಬಾಲಕಿಯರು ಪರೀಕ್ಷೆಗೆ ಹಾಜರಾಗಿದ್ದು, 4831 ಬಾಲಕಿಯರು ತೇರ್ಗಡೆ ಹೊಂದುವ ಮೂಲಕ ಶೇ. 79.96 ಫಲಿತಾಂಶ ದೊರಕಿದೆ.

ವಿಜ್ಞಾನ ವಿಭಾಗದಲ್ಲಿ ಶೇ.84 ಫಲಿತಾಂಶ:

ದ್ವಿತೀಯ ಪಿಯುಸಿ ಪರೀಕ್ಷೆಗೆ ಕಲಾ ವಿಭಾಗದಿಂದ 1126 ವಿದ್ಯಾರ್ಥಿಗಳು ಹಾಜರಾಗಿದ್ದು, 527 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 46.8ರಷ್ಟು ಫಲಿತಾಂಶ ಬಂದಿದೆ. ವಾಣಿಜ್ಯ ವಿಭಾಗದಿಂದ 5249 ವಿದ್ಯಾರ್ಥಿಗಳು ಹಾಜರಾಗಿದ್ದು, 3959 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 75.42ರಷ್ಟು ಫಲಿತಾಂಶ ದೊರೆತಿದೆ. ವಿಜ್ಞಾನ ವಿಭಾಗದಿಂದ 4560 ವಿದ್ಯಾರ್ಥಿಗಳು ಹಾಜರಾಗಿದ್ದು, 3875 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 84.98 ರಷ್ಟು ಫಲಿತಾಂಶ ಪಡೆದಿದೆ.

ನಗರ ವಿದ್ಯಾರ್ಥಿಗಳ ಸಾಧನೆ:

ನಗರ ಪ್ರದೇಶದ 8479 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 6531 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ.77.03 ರಷ್ಟು ಫಲಿತಾಂಶ ದೊರೆತಿದೆ. ಗ್ರಾಮೀಣ ಪ್ರದೇಶದ 2456 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 1830 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 74.51 ರಷ್ಟು ಫಲಿತಾಂಶ ದೊರೆತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಬಾಕ್ಸ್‌..............

ದೊಡ್ಡಬಳ್ಳಾಪುರ-ಹೊಸಕೋಟೆ ವಿದ್ಯಾರ್ಥಿಗಳು ಜಿಲ್ಲೆಗೆ ಟಾಪರ್ಸ್‌:

ವಿಜ್ಞಾನ ವಿಭಾಗದಲ್ಲಿ ದೊಡ್ಡಬಳ್ಳಾಪುರದ ಶ್ರೀ ವಾಣಿ ಕಾಲೇಜಿನ ವಿದ್ಯಾರ್ಥಿನಿ ಪ್ರಜ್ಞಾ ಎ.ಭಾಸ್ಕರ್‌ 591 ಅಂಕಗಳೊಂದಿಗೆ ಶೇ.98.5 ಅಂಕ ಗಳಿಸಿ ಜಿಲ್ಲೆಗೆ ಮೊದಲ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಹೊಸಕೋಟೆಯ ಮಹಾದೇವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಜ್ಞಾ.ಆರ್ 593 ಅಂಕಗಳೊಂದಿಗೆ ಶೇ.98.83 ಫಲಿತಾಂಶ ಹಾಗೂ ಕಲಾ ವಿಭಾಗದಲ್ಲಿ ದೊಡ್ಡಬಳ್ಳಾಪುರದ ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮೀನಾ.ಎಂ 579 ಅಂಕಗಳೊಂದಿಗೆ ಶೇ.96.5 ಅಂಕಗಳನ್ನು ಗಳಿಸಿ ಜಿಲ್ಲೆಗೆ ಟಾಪರ್‌ಗಳಾಗಿದ್ದಾರೆ.

8ಕೆಡಿಬಿಪಿ1- ಬೆಂ.ಗ್ರಾ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಪ್ರಜ್ಞಾ ಎ.ಭಾಸ್ಕರ್‌(ವಿಜ್ಞಾನ ವಿಭಾಗ), ಪ್ರಜ್ಞಾ.ಆರ್(ವಾಣಿಜ್ಯ ವಿಭಾಗ) ಮತ್ತು ಮೀನಾ.ಎಂ(ಕಲಾ ವಿಭಾಗ).

Share this article